ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಮನಗರ ಜಿಲ್ಲೆಯ ಬಿಡದಿ ಸುತ್ತಮುತ್ತಲು ಉದ್ದೇಶಿತ ಹೈಟೆಕ್ ಟೌನ್ಶಿಪ್ ನಿರ್ಮಾಣ ಯೋಜನೆಗೆ ಸಂಬಂಧಿಸಿದಂತೆ ಈಗ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಒಳಗೇ ತೀವ್ರ ಅಪಸ್ವರ ಎದ್ದಿದೆ. ಈ ಯೋಜನೆ ರೈತ ವಿರೋಧಿ ಮತ್ತು ಜನ ವಿರೋಧಿಯಾಗಿದ್ದು, ಸರ್ಕಾರಕ್ಕೆ ಭಾರಿ ಹೊರೆಯಾಗಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಆತಂಕ ವ್ಯಕ್ತಪಡಿಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಹತ್ವಾಕಾಂಕ್ಷೆಯ ಈ ಯೋಜನೆಗೆ ಸ್ವಪಕ್ಷದ ಸಚಿವರಿಂದಲೇ ವಿರೋಧ ವ್ಯಕ್ತವಾಗಿರುವುದು ಸರ್ಕಾರಕ್ಕೆ ತೀವ್ರ ಮುಜುಗರ ತಂದಿಟ್ಟಿದೆ.
ರೈತರ ಸಮಾಧಿಯ ಮೇಲೆ ರಿಯಲ್ ಎಸ್ಟೇಟ್ ವ್ಯವಹಾರ?:
ಬಿಡದಿ ಸುತ್ತಮುತ್ತಲಿನ ಅತ್ಯಂತ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಂಡು ಟೌನ್ಶಿಪ್ ನಿರ್ಮಿಸಲು ಹೊರಟಿರುವ ಡಿ.ಕೆ. ಶಿವಕುಮಾರ್ ಅವರ ನಿರ್ಧಾರಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ನಾಡಿನ ಅನ್ನದಾತರ ಹಿತರಕ್ಷಣೆ ಮಾಡುವುದನ್ನು ಬಿಟ್ಟು, ತಮ್ಮ ರಾಜಕೀಯ ಸ್ವಾರ್ಥ ಹಾಗೂ ರಿಯಲ್ ಎಸ್ಟೇಟ್ ವ್ಯವಹಾರಕ್ಕಾಗಿ ಈ ಯೋಜನೆಗೆ ಕೈಹಾಕಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ.
"ಫಲವತ್ತಾದ ಕೃಷಿ ಭೂಮಿಯಲ್ಲಿ ಟೌನ್ಶಿಪ್ ನಿರ್ಮಾಣ ಮಾಡುವುದು ರೈತರಿಗೆ ಬರೆಯುವ ಮರಣಶಾಸನವಾಗಿದೆ. ಯಾವುದೋ ಒಂದು ಸ್ಕೀಂ ಮಾಡಲು ಹೋಗಿ ಜನರಿಗೆ ಮತ್ತು ಸರ್ಕಾರಕ್ಕೆ ಧಕ್ಕೆ ತರುವುದು ಬೇಡ ಎಂಬ ಸತ್ಯ ಈಗ ಕಾಂಗ್ರೆಸ್ ಸಚಿವರಿಗೇ ಅರ್ಥವಾಗಿದೆ."
450 ದಿನಗಳ ಮೀರಿದ ರೈತರ ಹೋರಾಟ:
ಬಿಡದಿ ಸುತ್ತಮುತ್ತಲ ಹಳ್ಳಿಗಳ ರೈತರು ತಮ್ಮ ಭೂಮಿಯನ್ನು ಬಿಟ್ಟುಕೊಡಲು ಯಾವುದೇ ಕಾರಣಕ್ಕೂ ಸಿದ್ಧರಿಲ್ಲ. "ನಮ್ಮ ಭೂಮಿ, ನಮ್ಮ ಹಕ್ಕು" ಹಾಗೂ "ಟೌನ್ಶಿಪ್ ಬೇಡವೇ ಬೇಡ" ಎಂದು ಆಗ್ರಹಿಸಿ ಕಳೆದ 450ಕ್ಕೂ ಹೆಚ್ಚು ದಿನಗಳಿಂದ ರೈತರು ನಿರಂತರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ಹಿಂದೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸಹ ಈ ಯೋಜನೆಯು ರೈತರ ಬದುಕನ್ನು ಬೀದಿಗೆ ತಳ್ಳಲಿದೆ ಎಂದು ತೀವ್ರವಾಗಿ ವಿರೋಧಿಸಿದ್ದರು. ಈಗ ರೈತರ ಈ ಸುದೀರ್ಘ ಹೋರಾಟಕ್ಕೆ ಸ್ವತಃ ಸಚಿವ ಸತೀಶ್ ಜಾರಕಿಹೊಳಿ ಅವರ ಹೇಳಿಕೆ ಮತ್ತಷ್ಟು ಬಲ ನೀಡಿದಂತಾಗಿದೆ.
ಸ್ವಪಕ್ಷದಲ್ಲೇ ಆಕ್ರೋಶ: ಡಿಕೆಶಿ ನೇತೃತ್ವದ ಯೋಜನೆಗೆ ಸಚಿವ ಸತೀಶ್ ಜಾರಕಿಹೊಳಿ ಬಹಿರಂಗ ಅಸಮಾಧಾನ ಹೊರ ಹಾಕಿದ್ದಾರೆ.
ರೈತರ ಆಕ್ರೋಶ: ಕೃಷಿ ಭೂಮಿ ಸ್ವಾಧೀನ ವಿರೋಧಿಸಿ 450ಕ್ಕೂ ಹೆಚ್ಚು ದಿನಗಳಿಂದ ಅನ್ನದಾತರ ಧರಣಿ ನಡೆಯುತ್ತಿದೆ. ಯೋಜನೆ ವಿರುದ್ಧ ಮೊದಲಿನಿಂದಲೂ ಧ್ವನಿ ಎತ್ತಿದ್ದ ಹೆಚ್.ಡಿ. ದೇವೇಗೌಡ ಹಾಗೂ ಹೆಚ್.ಡಿ. ಕುಮಾರಸ್ವಾಮಿ ರೈತರ ಪರವಾಗಿ ಧ್ವನಿ ಎತ್ತಿದ್ದಾರೆ.
ಸ್ವಪಕ್ಷದ ಸಚಿವರೇ ಯೋಜನೆಯ ಸಾಧಕ-ಬಾಧಕಗಳ ಬಗ್ಗೆ ಬಹಿರಂಗವಾಗಿ ಆತಂಕ ವ್ಯಕ್ತಪಡಿಸಿರುವುದರಿಂದ, ರಾಜ್ಯ ಸರ್ಕಾರವು ಇನ್ನಾದರೂ ಎಚ್ಚೆತ್ತುಕೊಂಡು ಈ ವಿವಾದಿತ ಬಿಡದಿ ಟೌನ್ಶಿಪ್ ಯೋಜನೆಯನ್ನು ಸಂಪೂರ್ಣವಾಗಿ ಕೈಬಿಡಬೇಕು ಎಂಬ ಒತ್ತಾಯ ಸಾರ್ವಜನಿಕ ವಲಯದಲ್ಲಿ ಬಲವಾಗಿದೆ.



