ಚಂದ್ರವಳ್ಳಿ ನ್ಯೂಸ್, ನವದೆಹಲಿ:
ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ಬೆನ್ನಲ್ಲೇ, ತೀವ್ರ ಜನಆಕ್ರೋಶಕ್ಕೆ ಮಣಿದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಕೇಂದ್ರ ಸರ್ಕಾರ ಹಾಗೂ ಕಾಕ್ರೋಚ್ ಜನತಾ ಪಕ್ಷ ನಡುವೆ ನಡೆಯಲಿದ್ದ ಮೂರನೇ ಸುತ್ತಿನ ಮಹತ್ವದ ಮಾತುಕತೆಗೆ ಕೆಲವೇ ಗಂಟೆಗಳ ಮುನ್ನ, ಪ್ರಧಾನ್ ಅವರು ತಮ್ಮ ರಾಜೀನಾಮೆ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರವಾನಿಸಿದ್ದು, ಈ ವಿಷಯವನ್ನು ತಮ್ಮ ಅಧಿಕೃತ 'ಎಕ್ಸ್' ಖಾತೆಯಲ್ಲಿ ಪ್ರಕಟಿಸಿದ್ದಾರೆ.
ವಿದ್ಯಾರ್ಥಿ ಹೋರಾಟಕ್ಕೆ ಸಿಕ್ಕ ಐತಿಹಾಸಿಕ ಜಯ:
ದೆಹಲಿಯ ಜಂತರ್ ಮಂತರ್ನಲ್ಲಿ ಕಳೆದ ಒಂದು ತಿಂಗಳಿಗೂ ಹೆಚ್ಚು ಕಾಲ ವಿದ್ಯಾರ್ಥಿಗಳು ಹಾಗೂ ಪ್ರತಿಭಟನಾಕಾರರು ನಡೆಸುತ್ತಿದ್ದ ಸುದೀರ್ಘ ಬೃಹತ್ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಂತಾಗಿದೆ. ಸಚಿವರ ರಾಜೀನಾಮೆಗೆ ಆಗ್ರಹಿಸಿ ಬೀದಿಗಿಳಿದಿದ್ದ ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಯನ್ನು ಕೇಂದ್ರ ಸರ್ಕಾರ ಕೊನೆಗೂ ಈಡೇರಿಸಿದೆ.
ಪ್ರತಿಭಟನಾಕಾರರ 3 ಪ್ರಮುಖ ಬೇಡಿಕೆಗಳು ಸಂಪೂರ್ಣ ಈಡೇರಿಕೆ:
ಶಿಕ್ಷಣ ಸಚಿವರ ರಾಜೀನಾಮೆ: ಪರೀಕ್ಷಾ ವೈಫಲ್ಯದ ಹೊಣೆ ಹೊತ್ತು ಧರ್ಮೇಂದ್ರ ಪ್ರಧಾನ್ ಹುದ್ದೆ ತೊರೆಯಬೇಕು.
ಪ್ರಕರಣಗಳ ವಾಪಸಾತಿ: ಧರಣಿಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಹಾಗೂ ಯುವಕರ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳಬಾರದು.
ಸಂತ್ರಸ್ತರಿಗೆ ಪರಿಹಾರ: ಪ್ರಶ್ನೆಪತ್ರಿಕೆ ಸೋರಿಕೆಯಿಂದ ಕಂಗೆಟ್ಟು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಗಳ ಕುಟುಂಬಗಳಿಗೆ ಸೂಕ್ತ ಪರಿಹಾರ ಒದಗಿಸುವುದು.
ಮಾತುಕತೆಯಲ್ಲಿದ್ದ ಅಡಚಣೆ ತೆರವು!:
ಶುಕ್ರವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರವು ಪ್ರತಿಭಟನಾಕಾರರ ಕೊನೆಯ ಎರಡು ಬೇಡಿಕೆಗಳಿಗೆ (ಪರಿಹಾರ ಹಾಗೂ ಕೇಸ್ ವಾಪಸ್) ಸಮ್ಮತಿಸಿತ್ತಾದರೂ, ಸಚಿವರ ರಾಜೀನಾಮೆ ವಿಚಾರದಲ್ಲಿ ಮೌನ ವಹಿಸಿತ್ತು. ಇದರಿಂದಾಗಿ ಸಿಜೆಪಿ ಮತ್ತು ಸರ್ಕಾರದ ನಡುವಿನ ಮಾತುಕತೆ ಸ್ಥಗಿತಗೊಂಡಿತ್ತು.
"ಧರ್ಮೇಂದ್ರ ಪ್ರಧಾನ್ ಅವರನ್ನು ಹುದ್ದೆಯಿಂದ ವಜಾಗೊಳಿಸದಿದ್ದರೆ ಯಾವುದೇ ಚರ್ಚೆಗೆ ಅವಕಾಶವಿಲ್ಲ" ಎಂದು ಶನಿವಾರ ಬೆಳಿಗ್ಗೆ ಸಿಜೆಪಿ ಸ್ಪಷ್ಟಪಡಿಸಿತ್ತು. ಸಚಿವರ ರಾಜೀನಾಮೆಯೊಂದಿಗೆ ಪ್ರತಿಭಟನಾಕಾರರ ಎಲ್ಲಾ ಪ್ರಮುಖ ಬೇಡಿಕೆಗಳನ್ನು ಸರ್ಕಾರ ಈಡೇರಿಸಿದಂತಾಗಿದ್ದು, ಮುಂಬರುವ ರಾಜಕೀಯ ಬೆಳವಣಿಗೆಗಳು ತೀವ್ರ ಕುತೂಹಲ ಕೆರಳಿಸಿವೆ.



