ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜಾಜಿನಗರದ ಹಿರಿಯ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಅವರ ವಿರುದ್ಧ ಬರೋಬ್ಬರಿ ೩೦೦ ಕೋಟಿ ರೂಪಾಯಿ ಟೆಂಡರ್ ಅಕ್ರಮದ ಗಂಭೀರ ಆರೋಪ ಕೇಳಿಬಂದಿದೆ. ಈ ವಿಚಾರವಾಗಿ ಸೋಮವಾರ ರಾಜಾಜಿನಗರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ತೀವ್ರ ಘರ್ಷಣೆ ನಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.
ಕೇಳಿಬಂದಿರುವ ಗಂಭೀರ ಆರೋಪವೇನು?:
ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಅನುದಾನ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಕ್ಷೇತ್ರಕ್ಕೆ ಮಂಜೂರಾಗಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮಬಾಹಿರವಾಗಿ ನಡೆದುಕೊಳ್ಳಲಾಗಿದೆ. ಶಾಸಕ ಸುರೇಶ್ ಕುಮಾರ್ ಅವರು ತಮಗೆ ಆಪ್ತರಾದ ಬೇನಾಮಿ ಗುತ್ತಿಗೆದಾರರಿಗೆ ಕೋಟ್ಯಂತರ ರೂಪಾಯಿ ಲಾಭ ಮಾಡಿಕೊಟ್ಟಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಗಂಭೀರವಾಗಿ ಆರೋಪಿಸಿದ್ದಾರೆ.
ಜನಸ್ಪಂದನ ವೇಳೆ ಮುತ್ತಿಗೆಗೆ ಯತ್ನ, ಹೈಡ್ರಾಮಾ!
ಸೋಮವಾರ ಶಾಸಕ ಸುರೇಶ್ ಕುಮಾರ್ ಅವರು ರಾಜಾಜಿನಗರದ ಆರ್ಟಿಒ ಕಚೇರಿಯಲ್ಲಿ ಸಾರ್ವಜನಿಕರಿಗಾಗಿ ‘ಜನಸ್ಪಂದನ’ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ನುಗ್ಗಿದ ಎನ್ಎಸ್ಯುಐ ಮತ್ತು ಯೂತ್ ಕಾಂಗ್ರೆಸ್ ಕಾರ್ಯಕರ್ತರು ಶಾಸಕರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಘರ್ಷಣೆ:
ಶಾಸಕರ ವಿರುದ್ಧ ಧಿಕ್ಕಾರ ಕೂಗುತ್ತಾ ಆರ್ಟಿಒ ಕಚೇರಿಯೊಳಗೆ ನುಗ್ಗಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಸ್ಥಳದಲ್ಲಿದ್ದ ಬಿಜೆಪಿ ಕಾರ್ಯಕರ್ತರು ತಡೆದರು. ಈ ವೇಳೆ ಎರಡೂ ಪಕ್ಷದ ಕಾರ್ಯಕರ್ತರ ನಡುವೆ ತೀವ್ರ ಮಾತಿನ ಚಕಮಕಿ ನಡೆದು, ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತು.
ರಸ್ತೆ ಬಂದ್ ಮಾಡಿದ ಪೊಲೀಸರು, ಬಿಗಿ ಬಂದೋಬಸ್ತ್:
ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಎಚ್ಚೆತ್ತ ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾದರು. ಮುನ್ನೆಚ್ಚರಿಕಾ ಕ್ರಮವಾಗಿ ಆರ್ಟಿಒ ಮುಖ್ಯ ರಸ್ತೆಯನ್ನು ಸಂಪೂರ್ಣವಾಗಿ ಬಂದ್ ಮಾಡಲಾಯಿತು. ರಸ್ತೆಯ ಎರಡು ಬದಿಗಳಲ್ಲಿ ಬ್ಯಾರಿಕೇಡ್ಗಳನ್ನು ಅಳವಡಿಸಿ ಸಂಚಾರ ನಿರ್ಬಂಧಿಸಲಾಯಿತು. ಜನಸ್ಪಂದನ ಕಾರ್ಯಕ್ರಮ ನಡೆಯುತ್ತಿದ್ದ ಕಚೇರಿಯ ಸುತ್ತಲೂ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಿ, ಪ್ರತಿಭಟನಾಕಾರರನ್ನು ಚದುರಿಸುವ ಮೂಲಕ ಪರಿಸ್ಥಿತಿಯನ್ನು ಹತೋಟಿಗೆ ತರಲಾಯಿತು.



