ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪಕ್ಷದ ನಾಯಕರ ವಿರುದ್ಧವೇ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದ ಬಿಜೆಪಿ ರಾಜ್ಯ ಘಟಕದ ವಕ್ತಾರ ಎಂ.ಜಿ. ಮಹೇಶ್ ಅವರಿಗೆ ಬಿಜೆಪಿ ಹೈಕಮಾಂಡ್ ಬಿಗ್ ಶಾಕ್ ನೀಡಿದೆ. ಶಿಸ್ತು ಉಲ್ಲಂಘನೆಯ ಆರೋಪದ ಮೇಲೆ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಮುಂಬರುವ 6 ವರ್ಷಗಳ ಅವಧಿಗೆ ಉಚ್ಚಾಟನೆ ಮಾಡಿ ಆದೇಶ ಹೊರಡಿಸಲಾಗಿದೆ.
ಉಚ್ಚಾಟನೆಗೆ ಕಾರಣವೇನು?:
ಜೂನ್ 19ರಂದು ನಡೆದ ಪಕ್ಷದ ಪ್ರಮುಖರ ಸಭೆಯಲ್ಲಿ ಎಂ.ಜಿ. ಮಹೇಶ್ ಅವರು ಬಿಜೆಪಿ ಹೈಕಮಾಂಡ್ ಹಾಗೂ ರಾಜ್ಯ ನಾಯಕರ ವಿರುದ್ಧ ಗಂಭೀರ ಸ್ವರೂಪದ ಅವಹೇಳನಕಾರಿ ಆರೋಪಗಳನ್ನು ಮಾಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯ ಶಿಸ್ತು ಸಮಿತಿಯು ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿ, ವಿವರಣೆ ನೀಡುವಂತೆ ಸೂಚಿಸಿತ್ತು.
ನೋಟಿಸ್ಗೆ ಮಹೇಶ್ ನೀಡಿದ್ದ ಸ್ಪಷ್ಟೀಕರಣ ತೃಪ್ತಿಕರವಾಗಿಲ್ಲ:
ತಮಗೆ ನೀಡಲಾಗಿದ್ದ ನೋಟಿಸ್ಗೆ ಎಂ.ಜಿ ಮಹೇಶ್ ಅವರು ಲಿಖಿತ ಸ್ಪಷ್ಟೀಕರಣ ನೀಡಿದ್ದರು. ಆದರೆ, ಅವರು ನೀಡಿದ ಸಮರ್ಥನೆ ಹಾಗೂ ಸ್ಪಷ್ಟೀಕರಣಗಳು ಸಮಂಜಸವಾಗಿಲ್ಲ ಎಂದು ಶಿಸ್ತು ಸಮಿತಿ ತೀರ್ಮಾನಿಸಿದೆ.
ತಕ್ಷಣದಿಂದಲೇ ಜಾರಿ:
ಮಹೇಶ್ ಅವರ ನಡೆ ಪಕ್ಷದ ಶಿಸ್ತಿಗೆ ಧಕ್ಕೆ ತಂದಿರುವುದರಿಂದ, ತಕ್ಷಣದಿಂದಲೇ ಜಾರಿಗೆ ಬರುವಂತೆ ಅವರನ್ನು ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಲಾಗಿದೆ. ಜೊತೆಗೆ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ರಾಜ್ಯ ಶಿಸ್ತು ಸಮಿತಿಯ ಅಧ್ಯಕ್ಷರಾದ ಲಿಂಗರಾಜು ಪಾಟೀಲ್ ಅವರು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಲೋಕಸಭಾ ಚುನಾವಣೆ ಬೆನ್ನಲ್ಲೇ ಬಿಜೆಪಿಯೊಳಗೆ ಹೊಗೆಯಾಡುತ್ತಿದ್ದ ಅಸಮಾಧಾನ ಇದೀಗ ಈ ಉಚ್ಚಾಟನೆ ಮೂಲಕ ಬಹಿರಂಗ ರೂಪ ಪಡೆದುಕೊಂಡಿದೆ.



