ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಶಾಲಾ ದಾಖಲಾತಿ ಆಂದೋಲನವು ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಳ ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ಕರೆ ತರಲು ಸಹಕಾರಿಯಾಗಲಿದೆ ಎಂದು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಗೌರವಾಧ್ಯಕ್ಷ ಹಾಗೂ ಗ್ರಾಮ ಪಂಚಾಯಿತಿ ಸದಸ್ಯ ಪ್ರಕಾಶ್ ತಿಳಿಸಿದರು.
ಚಿಕ್ಕಗೊಂಡನಹಳ್ಳಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆದ ಶಾಲಾ ದಾಖಲಾತಿ ಆಂದೋಲನ ಉದ್ಘಾಟಿಸಿ ಮಾತನಾಡಿದರು.
ಪ್ರತಿ ಶೈಕ್ಷಣಿಕ ವರ್ಷದಲ್ಲಿ ಶಿಕ್ಷಣ ಇಲಾಖೆ ಹಮ್ಮಿಕೊಳ್ಳುವ ಮಹತ್ವದ ಕಾರ್ಯಕ್ರಮ ಇದಾಗಿದ್ದು, ಒಂದನೆ ತರಗತಿ ಹಾಗೂ ಇತರೆ ತರಗತಿಗಳಿಗೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿಯನ್ನು ಗರಿಷ್ಠಗೊಳಿಸಿ ಅದರಂತೆ ಮನೆ ಮನೆಗೆ ಭೇಟಿ ಮಾಡಿ ಎಲ್.ಕೆ.ಜಿ. ವಿಭಾಗಕ್ಕೆ ೨೫ ಮಕ್ಕಳು ಹಾಗೂ ಒಂದನೆ ತರಗತಿಗೆ ೨೪ ಮಕ್ಕಳು ದಾಖಲಾಗುವಂತೆ ಶಿಕ್ಷಕರು ಕಾಳಜಿ ವಹಿಸಿರುವುದು ವಿಶೇಷ ಎಂದು ಶ್ಲಾಘಿಸಿದರು.
ಎಸ್.ಡಿ.ಎಂ.ಸಿ. ಉಪಾಧ್ಯಕ್ಷ ದಿನೇಶ್ ಮಾತನಾಡಿ ಶಿಕ್ಷಕರುಗಳು ಮನೆ ಮನೆಗೆ ಭೇಟಿ ನೀಡಿ ಪೋಷಕರುಗಳಲ್ಲಿ ಜಾಗೃತಿ ಮೂಡಿಸುವುದು ಮತ್ತು ಶಾಲಾ ವಯಸ್ಸಿನ ಮಕ್ಕಳನ್ನು ಶಾಲೆಗೆ ದಾಖಲಾತಿ ಮಾಡಿಸಿ ಸರ್ಕಾರಿ ಶಾಲೆಗಳಲ್ಲಿ ಸಿಗುವ ಸೌಲಭ್ಯಗಳ ಕುರಿತು ಮನವರಿಕೆ ಮಾಡುವುದು ಆಂದೋಲನದ ಪ್ರಮುಖ ಉದ್ದೇಶವಾಗಬೇಕು. ಮಧ್ಯಾಹ್ನದ ಬಿಸಿಯೂಟ, ಸಮವಸ್ತ್ರ, ಉಚಿತ ಪಠ್ಯ ಪುಸ್ತಕಗಳು, ಕ್ಷೀರಭಾಗ್ಯ ಯೋಜನೆಯಡಿ ಹಾಲು, ಶೂ, ಸಾಕ್ಸ್ ವಿತರಣೆ. ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ವಸತಿ ನಿಲಯಗಳ ಸೌಲಭ್ಯಗಳನ್ನು ಮಕ್ಕಳಿಗೆ ತಲುಪಿಸುವುದೇ ಶಾಲಾ ದಾಖಲಾತಿ ಆಂದೋಲನದ ಗುರಿ ಎಂದು ಹೇಳಿದರು.
ಎಸ್.ಡಿ.ಎಂ.ಸಿ. ಸದಸ್ಯರು, ಶಿಕ್ಷಕರುಗಳಾದ ಕುಸುಮ ಕೆ, ರೇವಣ್ಣ, ರೀಟಾಮಣಿ, ಸಿದ್ದಮ್ಮ, ವೀಣಾ, ತ್ರಿವೇಣಿ, ಅರುಣ್ಕುಮಾರ್, ಅಣ್ಣಪ್ಪಸ್ವಾಮಿ, ಬಸವರಾಜ್, ರತ್ನಮ್ಮ ಪೋಷಕರು ಹಾಗೂ ಮಕ್ಕಳು ದಾಖಲಾತಿ ಆಂದೋಲನದಲ್ಲಿ ಪಾಲ್ಗೊಂಡಿದ್ದರು.



