ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಪ್ರಸ್ತುತ ಪರಿಸ್ಥಿತಿಯಲ್ಲಿ ಹೈನುಗಾರಿಕೆಗೆ ಅಗತ್ಯವಾದ ಹಿಂಡಿ, ಬೂಸ ಸೇರಿದಂತೆ ಅಗತ್ಯ ವಸ್ತುಗಳ ದರ ಸತತ ಏರಿಕೆಯಿಂದಾಗಿ ರೈತರ ಹಸು ಸಾಕಣೆ ಹೈನುಗಾರಿಕೆ ತೀರಾ ಸಂಕಷ್ಟಕ್ಕೆ ಸಿಲುಕಿದೆ. ಇಂತಹ ಕಠಿಣ ಪರಿಸ್ಥಿತಿಯಲ್ಲಿ ಸರ್ಕಾರ ರೈತರಿಂದ ಖರೀದಿಸುವ ಪ್ರತಿ ಲೀಟರ್ ಹಾಲಿಗೆ ಹತ್ತು ರೂಪಾಯಿ ಪ್ರೋತ್ಸಾಹ ಧನ ನೀಡುವ ಮೂಲಕ ರೈತರ ನೆರವಿಗೆ ಧಾವಿಸಬೇಕಿದೆ ಎಂದು ಬಮುಲ್ ನಿರ್ದೇಶಕ ಬಿ. ಸಿ. ಆನಂದ್ ಕುಮಾರ್ ಸರ್ಕಾರವನ್ನು ಆಗ್ರಹಿಸಿದ್ದಾರೆ.
ನಗರದ ಬಮುಲ್ ಕಚೇರಿಯಲ್ಲಿ ನಡೆದ ರೈತ ಸಂಘದಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಆನಂದ್ ಮಾತನಾಡಿ ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ರೈತರು ಹೈನುಗಾರಿಕೆಗೆ ಪೂರಕವಾದ ಹಿಂಡಿ, ಬೂಸಾ, ಮೇವುಗಳ ದರ ಹೆಚ್ಚಳ ಜೊತೆಗೆ ರಸಗೊಬ್ಬರಗಳ ಹೆಚ್ಚಳ ಮಳೆಯ ಅಭಾವದಿಂದಾಗಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂಥ ಕಠಿಣ ಪರಿಸ್ಥಿಯಲ್ಲಿ ಸರ್ಕಾರ ರೈತರ ಪ್ರತಿ ಲೀಟರ್ ಹಾಲಿಗೆ ಹತ್ತು ರೂಪಾಯಿ ಪ್ರೋತ್ಸಾಹ ಧನ ನೀಡಿ ರೈತರ ಬೆಂಬಲಕ್ಕೆ ನಿಲ್ಲಬೇಕಿದೆ. ಇದರ ಸಂಬಂಧ ಜುಲೈ 9 ರಂದು ತಾಲೂಕಿನ ರೈತರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ರವರಿಗೆ ಮನವಿ ಸಲ್ಲಿಸಲಿದ್ದಾರೆ. ಇದು ಪಕ್ಷತೀತವಾಗಿ ನಡೆಯಲಿದ್ದು ತಾಲೂಕಿನ ಎಲ್ಲಾ ಮುಖಂಡರು ಬೆಂಬಲ ನೀಡಬೇಕಿದೆ ಎಂದರು.
ರಾಜ್ಯದ ಗ್ರಾಮೀಣ ಬಾಗಗಳಲ್ಲಿ ಶೇಕಡಾ ಎಂಬತ್ತರಷ್ಟು ಮಹಿಳೆಯರು ಹೈನುಗಾರಿಕೆಯನ್ನು ಅವಲಂಬಿಸಿ ಕುಟುಂಬ ನಿರ್ವಹಣೆ ಮಾಡುತ್ತಿದ್ದಾರೆ. ಪ್ರಸ್ತುತ ಬರದ ಛಾಯೆ ಕಾಡುತ್ತಿರುವ ಈ ಸಂದರ್ಭದಲ್ಲಿ ಸರ್ಕಾರ ತನ್ನ ಪ್ರಣಾಳಿಕೆಗನುಸಾರವಾಗಿ ಹಾಲಿನ ಪ್ರೋತ್ಸಾಹ ಧನ ಹೆಚ್ಚಿಸಿ ಹೈನುಗಾರಿಕೆಗೆ ಉತ್ತೇಜನ ನೀಡಬೇಕಿದೆ. ಹಿಂದಿನ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಕುಮಾರಸ್ವಾಮಿ, ಸಿದ್ದರಾಮಯ್ಯ ರವರು ತಮ್ಮ ಆಡಳಿತವಧಿಯಲ್ಲಿ ಹಾಲಿಗೆ ಪ್ರೋತ್ಸಾಹ ಧನ ನೀಡುವ ಮೂಲಕ ರೈತರ ಸಂಕಷ್ಟಕ್ಕೆ ನೆರವಾಗಿದ್ದರು. ಅದನ್ನು ಪ್ರಸ್ತುತ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ರವರು ಮುಂದುವರೆಸಬೇಕಿದೆ. ಒಂದು ವೇಳೆ ಸರ್ಕಾರ ಪ್ರೋತ್ಸಾಹ ಧನ ನೀಡದಿದ್ದಲ್ಲಿ ರೈತರಿಂದ ತೀವ್ರ ಹೋರಾಟ ಎದುರಿಸಬೇಕಾಗುವುದು ಎಂದು ಆನಂದ್ ಸರ್ಕಾರವನ್ನು ಆಗ್ರಹಿಸಿದ್ದಾರೆ
ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಸನ್ನ ಮಾತನಾಡಿ ಹೈನುಗಾರಿಕೆ ಸಂಬಂಧ ಎಲ್ಲಾ ವಸ್ತುಗಳ ಬೆಲೆ ಗಗನಕ್ಕೇರಿದೆ .ಬರದ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವು ನೀರಿಗೆ ತಾತ್ವಾರ ಉಂಟಾಗಿದೆ. ಇಂಥ ಸಂದರ್ಭದಲ್ಲಿ ಜಾನುವಾರುಗಳನ್ನು ಸಾಕಲು ರೈತರು ಕಷ್ಟ ಪಡುವಂತಾಗಿದೆ. ಇದನ್ನು ಮನಗಂಡು ಸರ್ಕಾರ ಈ ಕೂಡಲೇ ಹಾಲಿಗೆ ಹತ್ತು ರೂಪಾಯಿ ಪ್ರೋತ್ಸಾಹ ಧನ ನೀಡಿ ರೈತರನ್ನು ಸಂಕಷ್ಟದಿಂದ ಪಾರು ಮಾಡಬೇಕಿದೆ. ನಮ್ಮ ಮನವಿಯನ್ನು ತಿರಸ್ಕರಿಸಿದ್ದಲ್ಲಿ ರೈತರಿಂದ ತೀವ್ರ ಪ್ರತಿರೋದ ಎದುರಿಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಜಿಲ್ಲಾ ರೈತ ಸಂಘದ ಉಪಾಧ್ಯಕ್ಷ ಮುತ್ತೇಗೌಡ, ತಾಲೂಕು ಅಧ್ಯಕ್ಷ ಹನುಮೇಗೌಡ, ತಾಲೂಕು ರೈತ ಸಂಘದ ಪ್ರದಾನ ಕಾರ್ಯದರ್ಶಿ ಸತೀಶ್, ಎಂ. ಪಿ. ಸಿ. ಎಸ್. ನೌಕರ ಸಂಘಗಳ ಅಧ್ಯಕ್ಷ ರವೀಂದ್ರ ರವಿ, ತಿಮ್ಮಣ್ಣ ಶಿರವಾರ ರವಿ, ಹೊನ್ನಾಘಟ್ಟ ಮೂರ್ತಿ, ಮಹದೇವ್, ಸತೀಶ್, ಹನುಮಂತರಾಯಪ್ಪ ಸೇರಿದಂತೆ ಹಲವಾರು ರೈತ ಮುಖಂಡರು ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.



