ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರ ಪ್ರದೇಶದ ನೀರಿನ ಮಿತ ಬಳಕೆ, ಮಳೆ ನೀರು ಕೊಯ್ಲು, ಅಂತರ್ಜಲ ಮರುಪೂರಣ ಹಾಗೂ ಜಲಮೂಲಗಳ ಸಂರಕ್ಷಣೆ ಉತ್ತೇಜಿಸುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜಂಟಿ ಸಹಯೋಗದ ‘ಜಲ ಸಂಚಯ ಜನ ಭಾಗಿದಾರಿ' ಉಪಕ್ರಮದಡಿ ನಗರಸಭೆಯು ‘ಕ್ಯಾಚ್ ದಿ ರೈನ್' ಅಭಿಯಾನ ಹಮ್ಮಿಕೊಂಡಿದೆ.
ಈ ಅಭಿಯಾನದ ಅಂಗವಾಗಿ, ಈಗಾಗಲೇ ಆಗಸ್ಟ್ 10ರಂದು ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಹಾಗೂ ಚಳ್ಳಕೆರೆ ವೃತ್ತದಲ್ಲಿ ಬೀದಿ ನಾಟಕದ ಮೂಲಕ ನೀರು ಉಳಿಸುವ ಕುರಿತು ಜಾಗೃತಿ ಮೂಡಿಸಲಾಗಿದೆ. ಆಗಸ್ಟ್ 13ರಂದು ಬೆಳಿಗ್ಗೆ 10 ಗಂಟೆಗೆ ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಲಿದೆ. ಹಾಗೆಯೇ, ಆಗಸ್ಟ್ 19ರಂದು ಬೆಳಿಗ್ಗೆ 11 ಗಂಟೆಗೆ ನಗರಸಭೆ ಸಭಾಂಗಣದಲ್ಲಿ ಹಿರಿಯ ಭೂವಿಜ್ಞಾನಿಗಳೊಂದಿಗೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಜಲ ಸಂರಕ್ಷಣಾ ಅಭಿಯಾನವನ್ನು ಯಶಸ್ವಿಗೊಳಿಸಬೇಕಾಗಿ ಚಿತ್ರದುರ್ಗ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ಕೋರಿದ್ದಾರೆ.



