ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ಅನೇಕ ವರ್ಷಗಳ ಕಾಲ ಒಳ ಮೀಸಲಾತಿಗಾಗಿ ನಡೆದ ಹೋರಾಟಕ್ಕೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಾಮಾಜಿಕ ನ್ಯಾಯ ಒದಗಿಸಿರುವುದಕ್ಕೆ ಜಿಲ್ಲಾ ಕಾಂಗ್ರೆಸ್ನಿಂದ ಶನಿವಾರ ಸಿಹಿ ಹಂಚಿ ಸಂಭ್ರಮಿಸಲಾಯಿತು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್ಪೀರ್ ಮಾತನಾಡಿ ಚಿತ್ರದುರ್ಗದಲ್ಲಿ ನಡೆದ ಪರಿಶಿಷ್ಟ ಜಾತಿ, ಪರಿಶಿಷ್ಠ ವರ್ಗದ ಐಕ್ಯತಾ ಸಮಾವೇಶದಲ್ಲಿ ಪಕ್ಷದ ನಾಯಕರುಗಳು ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಳ ಮೀಸಲಾತಿಯನ್ನು ಜಾರಿಗೊಳಿಸುತ್ತೇವೆಂಬ ಭರವಸೆ ನೀಡಿದ್ದರು. ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ ವಿಶೇಷ ಸಚಿವ ಸಂಪುಟ ಸಭೆ ಕರೆದು ಚರ್ಚಿಸಿ ಪರಿಶಿಷ್ಟ ಜಾತಿಯ ಎಡಗೈ, ಬಲಗೈ ಹಾಗೂ ೧೦೧ ಜಾತಿಯವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯಾರಿಗೂ ಅನ್ಯಾವಾಗದ ರೀತಿಯಲ್ಲಿ ಒಳ ಮೀಸಲಾತಿಯನ್ನು ಅನುಷ್ಠಾನಗೊಳಿಸಿದ್ದಾರೆ. ಒಳ ಮೀಸಲಾತಿ ವಿವಾದ ನ್ಯಾಯಾಲಯಲ್ಲಿದ್ದರೂ ಕಾನೂನು ಚೌಕಟ್ಟು ಮೀರದೆ ಒಳ ಮೀಸಲಾತಿಯನ್ನು ಜಾರಿಗೆ ತಂದಿರುವುದು ಪರಿಶಿಷ್ಠ ಜಾತಿಯಲ್ಲಿನ ಇತರೆ ಜಾತಿಯವರಿಗೂ ಸಮಾಧಾನ ತಂದಿದೆ. ನುಡಿದಂತೆ ನಡೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷದ ನಾಯಕರುಗಳಿಗೆ ಅಭಿನಂದನೆ ಸಲ್ಲಿಸಿ ಅನೇಕ ವರ್ಷಗಳ ಕಾಲ ದಲಿತರು ನಡೆಸಿದ ಹೋರಾಟಕ್ಕೆ ನಮ್ಮ ಪಕ್ಷ ಮನ್ನಣೆ ನೀಡಿದ ಎಂದು ಹರ್ಷ ವ್ಯಕ್ತಪಡಿಸಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಆರ್.ನರಸಿಂಹರಾಜ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಸ್.ಎನ್.ರವಿಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್ಕುಮಾರ್, ಡಿ.ಎನ್.ಮೈಲಾರಪ್ಪ, ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ರಾಜ್ಯಾಧ್ಯಕ್ಷ ಟಿಪ್ಪುಖಾಸಿಂಆಲಿ, ಕೋದಂಡಸ್ವಾಮಿ, ಹನುಮಂತರಾಯ ಇನ್ನು ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.


