ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ರಾಜಕಾರಣದ ಪ್ರಮುಖ ವಿದ್ಯಮಾನವೊಂದರಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ನಿಕಟಪೂರ್ವ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾದ ಸಿದ್ದರಾಮಯ್ಯ ಅವರನ್ನು ಅವರ ಅಧಿಕೃತ ನಿವಾಸ 'ಕಾವೇರಿ'ಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.
ರಾಜ್ಯದಲ್ಲಿ ಇತ್ತೀಚೆಗೆ ನಡೆದ ಅಧಿಕಾರ ಹಸ್ತಾಂತರ ಪ್ರಕ್ರಿಯೆಯ ನಂತರ ಉಭಯ ನಾಯಕರ ನಡುವೆ ನಡೆದ ಈ ಭೇಟಿ ತೀವ್ರ ಕುತೂಹಲ ಮೂಡಿಸಿದ್ದು, ರಾಜಕೀಯ ವಲಯದಲ್ಲಿ ಮುನ್ನೆಲೆಗೆ ಬಂದಿದೆ.
ಪ್ರಮುಖ ವಿಷಯಗಳ ಕುರಿತು ಸಮಾಲೋಚನೆಛ
ಭೇಟಿಯ ವೇಳೆ ಉಭಯ ನಾಯಕರು ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳು, ಸರ್ಕಾರದ ಆಡಳಿತಾತ್ಮಕ ಸುಧಾರಣೆಗಳು ಹಾಗೂ ಮುಂಬರುವ ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಪಕ್ಷದ ಆಂತರಿಕ ಮತ್ತು ವಿವಿಧ ಪ್ರಮುಖ ವಿಷಯಗಳ ಕುರಿತು ಸುದೀರ್ಘ ಸಮಾಲೋಚನೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.
ಸೌಹಾರ್ದಯುತ ಭೇಟಿ: "ನಿಕಟಪೂರ್ವ ಮುಖ್ಯಮಂತ್ರಿಗಳು ಹಾಗೂ ಸಿಡಬ್ಲ್ಯೂಸಿ ಸದಸ್ಯರಾದ ಶ್ರೀ ಸಿದ್ದರಾಮಯ್ಯ ಅವರನ್ನು ಇಂದು ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ, ವಿವಿಧ ವಿಷಯಗಳ ಕುರಿತು ಸಮಾಲೋಚಿಸಲಾಯಿತು," ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ರಾಜಕೀಯ ಒಗ್ಗಟ್ಟಿನ ಸಂದೇಶಛ
ರಾಜ್ಯ ಕಾಂಗ್ರೆಸ್ನಲ್ಲಿ ಅಧಿಕಾರ ಬದಲಾವಣೆಯ ಬೆನ್ನಲ್ಲೇ ಈ ಸಭೆ ನಡೆದಿರುವುದು ಆಡಳಿತ ರೂಢ ಪಕ್ಷದಲ್ಲಿ ಒಗ್ಗಟ್ಟಿನ ಸಂದೇಶವನ್ನು ಸಾರಿದೆ. ಸಿದ್ದರಾಮಯ್ಯ ಅವರ ಸುದೀರ್ಘ ಆಡಳಿತಾತ್ಮಕ ಅನುಭವ ಹಾಗೂ ಮಾರ್ಗದರ್ಶನವನ್ನು ಪಡೆದು ಸರ್ಕಾರ ಮುನ್ನಡೆಸುವ ನಿಟ್ಟಿನಲ್ಲಿ ಡಿ.ಕೆ. ಶಿವಕುಮಾರ್ ಅವರು ಈ ಸೌಹಾರ್ದಯುತ ಭೇಟಿ ನಡೆಸಿದ್ದಾರೆ ಎನ್ನಲಾಗಿದೆ.
ಈ ಸಂದರ್ಭದಲ್ಲಿ ಉಭಯ ನಾಯಕರು ಪರಸ್ಪರ ಗೌರವ ವಿನಿಮಯ ಮಾಡಿಕೊಂಡಿದ್ದು, ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಹಾಗೂ ಮುಂದಿನ ಅಭಿವೃದ್ಧಿ ಕಾರ್ಯಸೂಚಿಗಳ ಬಗ್ಗೆಯೂ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.



