ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಪಟ್ಟಣದಲ್ಲಿ ಕಲ್ಲು ಕ್ವಾರಿಯ ಬಂಡೆ ಕುಸಿದು ಸಂಭವಿಸಿದ ಭೀಕರ ದುರಂತದಲ್ಲಿ ಏಳು ಜನ ಕಾರ್ಮಿಕರು ಧಾರುಣವಾಗಿ ಮೃತಪಟ್ಟಿರುವುದಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ಆಘಾತ ಮತ್ತು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಈ ದುರಂತದ ಹಿನ್ನೆಲೆಯಲ್ಲಿ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿರುವ ಅವರು, ನಿಯಮ ಉಲ್ಲಂಘಿಸುವ ಕಲ್ಲು ಕ್ವಾರಿಗಳ ವಿರುದ್ಧ ಸರ್ಕಾರ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಮೃತರ ಆತ್ಮಕ್ಕೆ ಚಿರಶಾಂತಿ ಕೋರಿದ ಸಿಎಂ:
ಮಾದಪಟ್ಟಣ ಕ್ರಷರ್ ಕ್ವಾರಿ ದುರಂತದಲ್ಲಿ ಜೀವ ಕಳೆದುಕೊಂಡ ಬಡ ಕಾರ್ಮಿಕರ ಸಾವು ತಮಗೆ ತೀವ್ರ ನೋವುಂಟು ಮಾಡಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.
"ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿ ದಯಪಾಲಿಸಲಿ ಮತ್ತು ಅವರ ಕುಟುಂಬಸ್ಥರಿಗೆ ಈ ಭೀಕರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ. ಹಾಗೆಯೇ ಘಟನೆಯಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಕಾರ್ಮಿಕರು ಶೀಘ್ರವಾಗಿ ಗುಣಮುಖರಾಗಲಿ" ಎಂದು ಅವರು ಪ್ರಾರ್ಥಿಸಿದ್ದಾರೆ.
ಕ್ವಾರಿ ಮಾಲೀಕರಿಗೆ ಕಠಿಣ ಎಚ್ಚರಿಕೆ:
ಕಲ್ಲು ಕ್ವಾರಿಗಳಲ್ಲಿ ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿ ಕೆಲಸ ಮಾಡುವ ಬಡ ಕಾರ್ಮಿಕರ ಜೀವ ರಕ್ಷಣೆ ಮಾಡುವುದು ಮತ್ತು ಅವರಿಗೆ ಸೂಕ್ತ ಭದ್ರತೆ ಒದಗಿಸುವುದು ಕಲ್ಲು ಕ್ವಾರಿಗಳ ಮಾಲೀಕರ ಪ್ರಮುಖ ಕರ್ತವ್ಯವಾಗಿದೆ ಎಂದು ಮುಖ್ಯಮಂತ್ರಿಗಳು ನೆನಪಿಸಿದ್ದಾರೆ.
ಕಾರ್ಮಿಕರ ಸುರಕ್ಷತೆಯಲ್ಲಿ ನಿರ್ಲಕ್ಷ್ಯ ವಹಿಸುವ ಹಾಗೂ ನಿಯಮಗಳನ್ನು ಉಲ್ಲಂಘಿಸಿ ಕಾರ್ಯಾಚರಣೆ ನಡೆಸುವ ಕ್ವಾರಿಗಳ ವಿರುದ್ಧ ರಾಜ್ಯ ಸರ್ಕಾರವು ಯಾವುದೇ ಮುಲಾಜಿಲ್ಲದೆ ಸೂಕ್ತ ಮತ್ತು ಕಠಿಣ ಕ್ರಮಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಕಠಿಣ ಎಚ್ಚರಿಕೆ ನೀಡಿದ್ದಾರೆ.



