ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
1,000 ಜನರು ನೇಮಕಾತಿ ಆದೇಶಗಳನ್ನು ಪಡೆದು ಆರೋಗ್ಯ ಇಲಾಖೆಗೆ ಸೇರ್ಪಡೆಯಾಗಿರುವುದು ಸಂತೋಷದ ವಿಷಯ. ಇದು ಕೇವಲ ವೃತ್ತಿಯಲ್ಲ, ಜೀವ ಉಳಿಸುವ ಹಾಗೂ ರೋಗ ತಡೆಯುವ ಸಾರ್ಥಕ ಕಾರ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಅಭಯ ಹಸ್ತದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇಮಕಾತಿ ಆದೇಶ ಪತ್ರ ವಿತರಿಸಿ ಮಾತನಾಡಿದರು.
ನಮ್ಮ ಸರ್ಕಾರ ಎರಡನೇ ಬಾರಿ ಅಧಿಕಾರಕ್ಕೆ ಬಂದ ನಂತರ ನೇಮಕಾತಿಯಲ್ಲಿದ್ದ ಹಲವು ಸಮಸ್ಯೆಗಳನ್ನು ಬಗೆಹರಿಸಿ, ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುತ್ತಿದೆ. ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ ಶಿಕ್ಷಣ, ಆರೋಗ್ಯ, ಪೊಲೀಸ್ ವ್ಯವಸ್ಥೆ ಅತಿ ಮಹತ್ವದ್ದಾಗಿದ್ದು, ಇಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಆದ್ಯತೆ ನೀಡುತ್ತಿದೆ. 2.5 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿದ್ದು, ಇವುಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಸಿಎಂ ತಿಳಿಸಿದರು.
ಈ ಎಲ್ಲ ನೇಮಕಾತಿಗಳನ್ನು ಕೌನ್ಸೆಲಿಂಗ್ ಮೂಲಕ ಮಾಡುತ್ತಿದ್ದು, ಭ್ರಷ್ಠಚಾರ ತಡೆಯಲು ಸಾಧ್ಯವಾಗುತ್ತಿದೆ. 5,700 ವೈದ್ಯರು ಸೇರಿದಂತೆ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲಾಗಿದೆ. ನೇಮಕಾತಿ ಹಾಗೂ ವರ್ಗಾವಣೆಗಳಲ್ಲಿ ಭ್ರಷ್ಟಾಚಾರವನ್ನು ತಡೆಯುವುದು ಸರ್ಕಾರದ ಆಶಯ. ವರ್ಗಾವಣೆ ಏಜೆಂಟ್ ಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರು ಇದಕ್ಕೆ ಬಲಿಯಾಗಬಾರದು.
ವೈದ್ಯಕೇತರ ಸಿಬ್ಬಂದಿಗಳೂ ವೈದ್ಯರಷ್ಟೇ ಪ್ರಮುಖರು. ಆರೋಗ್ಯ ಇಲಾಖೆಯ ಕೆಲಸ ಕಾರ್ಯಗಳಲ್ಲಿ ಜಾತಿ, ಧರ್ಮಗಳ ಬೇಧಗಳನ್ನು ಮೀರಿ, ಮಾನವೀಯತೆಯಿಂದ ಸೇವೆ ಸಲ್ಲಿಸುವುದು ಮುಖ್ಯ. ರೋಗಿಗಳು ಚಿಕಿತ್ಸೆಯ ಸಂದರ್ಭದಲ್ಲಿ ಬೇಕಾಗುವ ರಕ್ತವನ್ನು ಪಡೆಯಲು ಯಾವುದೇ ಜಾತಿ-ಧರ್ಮಗಳನ್ನು ಪರಿಗಣಿಸುವುದಿಲ್ಲ. ಆದರೆ ಜನರು ಗುಣಮುಖರಾದ ತಕ್ಷಣ ಮತ್ತೆ ಜಾತಿ-ಧರ್ಮಗಳ ಸುಳಿಯಲ್ಲಿ ಬೀಳುತ್ತಾರೆ. ರೋಗ ತಡೆಗಟ್ಟುವುದಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಈ ದಿಸೆಯಲ್ಲಿ ಆರೋಗ್ಯ ಸಿಬ್ಬಂದಿಗಳು ಕಾರ್ಯತತ್ಪರರಾಗಬೇಕು. ರಾಜ್ಯದ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಸರ್ಕಾರ ಕಾರ್ಯಗತಗೊಳಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.



