ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ನಗರದ ವೇದಾವತಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2025-26ನೇ ಸಾಲಿನ ಸಾಂಸ್ಕೃತಿಕ, ಕ್ರೀಡಾ, ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್), ಯೂತ್ ರೆಡ್ ಕ್ರಾಸ್, ರೋವರ್ಸ್ ಮತ್ತು ರೇಂಜರ್ಸ್ ಚಟುವಟಿಕೆಗಳ ಸಮಾರೋಪ ಸಮಾರಂಭ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ ಶುಕ್ರವಾರ ಕಾಲೇಜಿನ ಆವರಣದಲ್ಲಿ ನಡೆಯಿತು.
ಕಾರ್ಯಕ್ರಮದ ಆರಂಭದಲ್ಲಿ ಇತ್ತೀಚೆಗೆ ನಿಧನರಾದ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಯೋಜನಾ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ಅವರನ್ನು ಸ್ಮರಿಸಲಾಯಿತು. ಕಾಲೇಜಿನ ಅಭಿವೃದ್ಧಿಗೆ ಅವರು ನೀಡಿದ ಮಹತ್ವದ ಕೊಡುಗೆಗಳನ್ನು ಈ ಸಂದರ್ಭದಲ್ಲಿ ನೆನಪಿಸಿಕೊಂಡು, ಮೌನಾಚರಣೆ ಮೂಲಕ ಅವರ ಆತ್ಮಕ್ಕೆ ಶಾಂತಿ ಕೋರಲಾಯಿತು.
ಹಿರಿಯೂರು ನಗರಸಭೆಯ ಪೌರಾಯುಕ್ತ ಎ. ವಾಸಿಂ ರವರು ಉದ್ಘಾಟಿಸಿ, ವಿದ್ಯಾರ್ಥಿಗಳು ರೀಲ್ಸ್ ಮತ್ತು ಫೋನುಗಳ ಗೀಳಿಗೆ ಒಳಗಾಗದೆ ತಮ್ಮ ಜೀವನದ ಗುರಿಗಳ ಕಡೆಗೆ ಹೆಚ್ಚು ಒತ್ತು ಕೊಟ್ಟು, ಸಮಾಜಮುಖಿಯಾಗಿ ಬದುಕಬೇಕು ಎಂದು ಹೇಳಿದರು. ಇತ್ತೀಚೆಗೆ ಬಡ ಕುಟುಂಬದ ಅನೇಕ ಮಕ್ಕಳು ಎತ್ತರದ ಹುದ್ದೆಗಳಿಗೆ ಏರಿರುವುದು ಎಲ್ಲರಿಗೂ ಸ್ಫೂರ್ತಿಯಾಗಲಿ ಎಂದು ಆಶಿಸಿದರು.
ಹಿರಿಯ ಸಾಹಿತಿ ಎಂ.ಜಿ. ರಂಗಸ್ವಾಮಿ ರವರು ವಿವಿಧ ಪುಸ್ತಕಗಳ ಪರಿಚಯ ಮಾಡುತ್ತಾ ವಿದ್ಯಾರ್ಥಿಗಳು ಓದುವ ಅಭ್ಯಾಸವನ್ನು ಬೆಳೆಸಿಕೊಂಡು ವೈಜ್ಞಾನಿಕತೆ ರೂಢಿಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.
ಕಾಲೇಜು ಅಭಿವೃದ್ಧಿ ಮಂಡಳಿಯ ಸದಸ್ಯ ಶಾಂತರಾಜಯ್ಯರವರು ವಿದ್ಯಾರ್ಥಿಗಳಿಗೆ ತಮ್ಮ ಹಿತವಚನಗಳ ಮೂಲಕ ಶುಭ ಕೋರಿದರು. ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಮಾರುತಿ ಎಸ್. ಮಾತನಾಡಿ ವಿದ್ಯಾರ್ಥಿಗಳಿಗೆ ಜೀವನದಲ್ಲಿ ಉನ್ನತ ಮಟ್ಟಕ್ಕೆ ತಲುಪಲು ಪ್ರೋತ್ಸಾಹ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ಹನುಮಂತರಾಯ ಡಿ.ಆರ್. ರವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಸಮಾರಂಭದಲ್ಲಿ, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ಗೆದ್ದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಸಮಿತಿ ಸಂಚಾಲಕರಾದ ಪ್ರೊ. ಪುಷ್ಪಲತಾ ಆರ್., ಯೂತ್ ರೆಡ್ ಕ್ರಾಸ್ ಘಟಕದ ಸಂಚಾಲಕರಾದ ಡಾ. ಧನಂಜಯ ಎಸ್.ಜಿ., ಎನ್. ಎಸ್. ಎಸ್. ಘಟಕದ ಸಂಚಾಲಕರಾದ ಡಾ. ಎನ್.ಬಿ. ಗಟ್ಟಿ, ದೈಹಿಕ ಶಿಕ್ಷಣ ವಿಭಾಗದ ಸಂಚಾಲಕರಾದ ಡಾ. ಅಣ್ಣಪ್ಪಸ್ವಾಮಿ ಹೆಚ್.ಡಿ., ರೇಂಜರ್ಸ್ ಘಟಕದ ಸಂಚಾಲಕರಾದ ಪ್ರೊ. ಚೈತ್ರ ಡಿ., ರೋವರ್ಸ್ ಘಟಕದ ಸಂಚಾಲಕರಾದ ಪ್ರೊ. ರಾಹುಲ್ ಲಂಬಾಣಿ, ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಚಾಲಕರಾದ ಪ್ರೊ. ನಾಗರಾಜು ಎಲ್., ಒಳಗೊಂಡಂತೆ ಎಲ್ಲ ಬೋಧಕ ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಸಮಾರಂಭದ ವಿಶೇಷ ಆಕರ್ಷಣೆಯಾಗಿದ್ದು, ವಿದ್ಯಾರ್ಥಿಗಳ ಪ್ರತಿಭೆ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.


