ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
"ದೆಹಲಿಯಲ್ಲಿ ವಿದ್ಯಾರ್ಥಿ ಹೋರಾಟದ ಹೆಸರಿನಲ್ಲಿ ಜೀಪಿನ ಪೆಟ್ರೋಲ್ ಟ್ಯಾಂಕ್ಗೆ ಬೆಂಕಿ ಹಚ್ಚಲು ಹೋದ ವ್ಯಕ್ತಿಯ ಕೃತ್ಯ ಖಂಡಿಸಿ ಮಾತನಾಡಿದ್ದೇನೆಯೇ ಹೊರತು, ನಾನು ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಮಾತನಾಡಿಲ್ಲ," ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಸ್ಪಷ್ಟಪಡಿಸಿದ್ದಾರೆ.
ತಮ್ಮ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿ ನೋಟಿಸ್ ನೀಡಲು ನಿವಾಸಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಓರ್ವನ ಕೃತ್ಯ ಖಂಡಿಸಿದರೆ ಸಮುದಾಯದ ಅವಹೇಳನವೇ?:
"ನಾನು ವಾಸ್ತವ ವಿಚಾರವನ್ನು ಜನರ ಮುಂದಿಟ್ಟಿದ್ದೇನೆ. ತಪ್ಪನ್ನು ತಪ್ಪು ಎಂದು ಹೇಳುವುದರಲ್ಲಿ ಯಾವುದೇ ಹಿಂಜರಿಕೆಯಿಲ್ಲ. ಓರ್ವ 'ಮುಲ್ಲಾ'ನ ತಪ್ಪಾದ ನಡೆಯನ್ನು ಖಂಡಿಸಿದ ತಕ್ಷಣ ಅದು ಇಡೀ ಸಮುದಾಯದ ಅವಹೇಳನವಾಗುವುದಿಲ್ಲ. ಪೊಲೀಸರು ಯಾವ ನಿಯಮದ ಅಡಿಯಲ್ಲಿ ನನ್ನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ?" ಎಂದು ಪ್ರಶ್ನಿಸಿದರು.
ಪೊಲೀಸರು ಆಡಳಿತ ಪಕ್ಷದ ಕೈಗೊಂಬೆ:
ಪೊಲೀಸರ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, "ಪೂರ್ವ ನಿರ್ಧರಿತ ಕಾರ್ಯಕ್ರಮಗಳಿರುವುದರಿಂದ ಎರಡು ದಿನಗಳ ಬಳಿಕ ಖುದ್ದಾಗಿ ಠಾಣೆಗೆ ಭೇಟಿ ನೀಡುವುದಾಗಿ ತಿಳಿಸಿದ್ದೆ. ಹೀಗಿದ್ದರೂ ಪೊಲೀಸರು ಆಡಳಿತ ಪಕ್ಷದ ಕೈಗೊಂಬೆಯಂತೆ ವರ್ತಿಸುತ್ತಿರುವುದು ನಿಜಕ್ಕೂ ಆಘಾತಕಾರಿ ಬೆಳವಣಿಗೆ," ಎಂದು ದೂರಿದರು.
ತಮ್ಮ ಹೇಳಿಕೆಗೆ ಬದ್ಧವಾಗಿರುವುದಾಗಿ ಪುನರುಚ್ಚರಿಸಿದ ಸಿ.ಟಿ. ರವಿ, ವಾಸ್ತವ ವಿಚಾರವನ್ನು ಹೇಳಿರುವುದಕ್ಕೆ ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.



