ಚಂದ್ರವಳ್ಳಿ ನ್ಯೂಸ್, ಮಂಡ್ಯ:
"ರಾಜ್ಯದ ಕಾಂಗ್ರೆಸ್ ಸರ್ಕಾರ ಮನೆಗೆ ಮಾರಿಯಾಗಿ, ಪರರಿಗೆ ಉಪಕಾರಿಯಂತೆ ವರ್ತಿಸುತ್ತಿದೆ. ಏನೇ ಆಗಲಿ, ಮೊದಲು ಕನ್ನಡಿಗರಿಗೇ ಜೀವನದಿ ಕಾವೇರಿ ಸಿಗಬೇಕು" ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯದ ರೈತರ ಹಿತಾಸಕ್ತಿ ಕಾಯುವಲ್ಲಿ ಮತ್ತು ಕಾವೇರಿ ಕೊಳ್ಳದ ಜನರಿಗೆ ಕುಡಿಯುವ ನೀರಿನ ಅಭಾವ ಸೃಷ್ಟಿಸಿರುವ ಸರ್ಕಾರದ ವೈಫಲ್ಯವನ್ನು ಖಂಡಿಸಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಮಂಡ್ಯದಲ್ಲಿ ಇಂದು ರೈತ ಸಂಘಟನೆಗಳೊಂದಿಗೆ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಹಿರಿಯ ನಾಯಕರ ದಂಡು:
ಸಾವಿರಾರು ರೈತರು ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದ ಈ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ರಾಜ್ಯ ಬಿಜೆಪಿಯ ಹಲವು ಪ್ರಮುಖ ನಾಯಕರು ಗಂಭೀರ ಆರೋಪಗಳನ್ನು ಮಾಡಿದರು.
ಪ್ರಮುಖವಾಗಿ ಭಾಗವಹಿಸಿದ್ದ ನಾಯಕರು:
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ವಿಧಾನ ಪರಿಷತ್ ವಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ, ಶಾಸಕರು ಹಾಗೂ ಮಾಜಿ ಸಚಿವ ಸಿ.ಟಿ. ರವಿ, ಮಾಜಿ ಸಂಸದರಾದ ಸುಮಲತಾ ಅಂಬರೀಶ್, ಶಾಸಕರಾದ ಶ್ರೀವತ್ಸ, ರಘು ಕೌಟಿಲ್ಯ, ಮಾಜಿ ಸಚಿವರಾದ ಕೆ.ಸಿ. ನಾರಾಯಣಗೌಡ, ಎನ್. ಮಹೇಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಹಾಗೂ ಮಂಡ್ಯ ಮತ್ತು ಮೈಸೂರು ಜಿಲ್ಲಾಧ್ಯಕ್ಷ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.
ಬಿ.ವೈ. ವಿಜಯೇಂದ್ರ ಹೇಳಿಕೆ:
"ನಾಡಿನ ಜೀವನದಿ ಕಾವೇರಿ ನೀರಿನ ವಿಚಾರದಲ್ಲಿ ನಮ್ಮ ಅನ್ನದಾತ ರೈತರ ಹಿತಾಸಕ್ತಿ ಸಂರಕ್ಷಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಕಾವೇರಿ ಕೊಳ್ಳದ ಜನರಿಗೆ ಕುಡಿಯುವ ನೀರಿಗೂ ಹಾಹಾಕಾರ ಸೃಷ್ಟಿಯಾಗುವ ವಾತಾವರಣ ನಿರ್ಮಾಣವಾಗಿದೆ. ರೈತರ ಮತ್ತು ಕನ್ನಡಿಗರ ಹಕ್ಕುಗಳನ್ನು ರಕ್ಷಿಸುವವರೆಗೂ ನಮ್ಮ ಹೋರಾಟ ಶಮನವಾಗುವುದಿಲ್ಲ."



