ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಡಾದಲ್ಲಿ ಅಕ್ರಮವಾಗಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ 14 ಸೈಟು ಕಬಳಿಸಿ ಸಿಕ್ಕಿಬಿದ್ದಾಗ ವಾಪಸ್ಸು ಕೊಟ್ಟ ಮಹಾನುಭಾವರು, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನೂರಾರು ಕೋಟಿ ಅವ್ಯವಹಾರ ಆಗಿದೆ ಎಂದು ವಿಧಾನಸಭೆಯ ಅಧಿವೇಶನದಲ್ಲಿ ಸ್ವತಃ ಒಪ್ಪಿಕೊಂಡ ಮೇಲೂ ಅಧಿಕಾರದಲ್ಲಿ ಮುಂದುವರೆಯುತ್ತಿರುವ ಮಹಾನುಭಾವರು, ಭ್ರಷ್ಟಾಚಾರದ ಪಿತಾಮಹ ಎನಿಸಿಕೊಂಡಿರುವ ಕಾಂಗ್ರೆಸ್ ಪಕ್ಷದ ವಿರುದ್ದ ಜೀವನವೆಲ್ಲಾ ಹೋರಾಟ ಮಾಡಿ, ನಂತರ ಅಧಿಕಾರಕ್ಕಾಗಿ ಅದೇ ಹುತ್ತದಲ್ಲಿ ಸೇರಿಕೊಂಡಿರುವ ಮಹಾನುಭಾವರು ಭ್ರಷ್ಟಾಚಾರದ ಬಗ್ಗೆ ಮಾತನಾಡುವುದು ಈ ಶತಮಾನದ ಅತ್ಯಂತ ದೊಡ್ಡ ವಿಪರ್ಯಾಸ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಅವರು ಸಿಎಂ ವಿರುದ್ಧ ಹರಿಹಾಯ್ದಿದ್ದಾರೆ.
ಸ್ವಾಮಿ ಸಿಎಂ ಸಿದ್ದರಾಮಯ್ಯನವರೇ, ತಮ್ಮ ಆಡಳಿತದಲ್ಲಿ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂಬರ್ 1 ಆಗಿದೆ ಎಂದು ನಾವಲ್ಲ, ಸ್ವತಃ ತಮ್ಮ ಕರ್ನಾಟಕ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರು, ತಮ್ಮ ಆರ್ಥಿಕ ಸಲಹೆಗಾರರೂ ಆದ ಬಸವರಾಜ ರಾಯರೆಡ್ಡಿ ಅವರು ತಮಗೆ ಸರ್ಟಿಫಿಕೇಟ್ ಕೊಟ್ಟಿದ್ದಾರೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕೆ? ಎಂದು ಅಶೋಕ್ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.
ಅದೆಲ್ಲ ಹೋಗಲಿ ಬಿಡಿ. 2013ರಲ್ಲಿ ತಾವು ಮೊದಲ ಬಾರಿಗೆ ಮುಖ್ಯಮಂತ್ರಿ ಆದಾಗ ಆಗಾಗಲೇ 6 ಬಾರಿ ಶಾಸಕರಾಗಿದ್ದ ಮಾನ್ಯ ಡಿ.ಕೆ ಶಿವಕುಮಾರ್ ಅವರನ್ನ ತಮ್ಮ ಸಂಪುಟಕ್ಕೆ ಯಾಕೆ ಸೇರಿಸಿಕೊಳ್ಳಲಿಲ್ಲ? ಡಿ.ಕೆ.ಶಿವಕುಮಾರ್ ಅವರು ಭ್ರಷ್ಟರು ಎಂಬ ಕಾರಣಕ್ಕೋ? ಸ್ಪಷ್ಟನೆ ನೀಡಿ ಎಂದು ಅಶೋಕ್ ಆಗ್ರಹ ಮಾಡಿದ್ದಾರೆ.


