ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದೇಶದ ರಾಜಧಾನಿ ನವದೆಹಲಿಯಲ್ಲಿ ಯುಪಿಎಸ್ಸಿ ಸೇರಿದಂತೆ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುವ ಕರ್ನಾಟಕದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆಯೊಂದನ್ನು ನೀಡಿದೆ. ವಿದ್ಯಾರ್ಥಿಗಳಿಗೆ ಒಂದೇ ಸೂರಿನಡಿ ಎಲ್ಲಾ ಸೌಲಭ್ಯಗಳು ಸಿಗಬೇಕು ಎನ್ನುವ ಉದ್ದೇಶದಿಂದ ನವದೆಹಲಿಯಲ್ಲಿ ₹80 ಕೋಟಿ ವೆಚ್ಚದಲ್ಲಿ 'ಕರ್ನಾಟಕ ಭವನ - 4' ಅನ್ನು ನಿರ್ಮಾಣ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಯೋಜನೆಯ ಪ್ರಮುಖ ನಿರ್ಣಯಗಳನ್ನು ಹಂಚಿಕೊಂಡರು.
ಯೋಜನೆಯ ವೆಚ್ಚ: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಒಟ್ಟು ₹80 ಕೋಟಿ ವೆಚ್ಚದಲ್ಲಿ ಈ ನೂತನ ಭವನ ನಿರ್ಮಾಣವಾಗಲಿದೆ.
ಉದ್ದೇಶ: ದೆಹಲಿಯಲ್ಲಿ ಐಎಎಸ್, ಐಪಿಎಸ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆಯುವ ರಾಜ್ಯದ ವಿದ್ಯಾರ್ಥಿಗಳಿಗೆ ವಸತಿ ಹಾಗೂ ಇತರೆ ಅಗತ್ಯ ಸೌಕರ್ಯಗಳನ್ನು ಒಂದೇ ಸೂರಿನಡಿ ಕಲ್ಪಿಸುವುದು.
ಈ ಭವನದಲ್ಲಿ ಕನ್ನಡಿಗ ವಿದ್ಯಾರ್ಥಿಗಳಿಗೆ ತಂಗಲು ವಿಶೇಷ ಮೀಸಲಾತಿ ವ್ಯವಸ್ಥೆ ಕಲ್ಪಿಸಲಾಗಿದೆ.
ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST): ಶೇ. 50 ರಷ್ಟು ಸೀಟುಗಳ ಮೀಸಲಾತಿ ನಿಗದಿ ಮಾಡಲಾಗಿದೆ. ಇತರೆ ಸಮುದಾಯಗಳ ವಿದ್ಯಾರ್ಥಿಗಳಿಗೆ ಶೇ. 50 ರಷ್ಟು ಸೀಟುಗಳ ಮೀಸಲಾತಿ ನೀಡಿ ಅಧ್ಯಯನಕ್ಕೆ ಅನುಕೂಲ ಕಲ್ಪಿಸಲಾಗುತ್ತದೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.
ದೆಹಲಿಯಲ್ಲಿ ತಂಗಿ ಓದುವ ಬಡ ಮತ್ತು ಮಧ್ಯಮ ವರ್ಗದ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ತಗಲುವ ಭಾರಿ ವೆಚ್ಚವನ್ನು ತಪ್ಪಿಸಲು ಮತ್ತು ಅವರಿಗೆ ಸುರಕ್ಷಿತ ಕಲಿಕೆಯ ವಾತಾವರಣ ನಿರ್ಮಿಸಲು ಈ ನಿರ್ಧಾರ ಸಹಕಾರಿಯಾಗಲಿದೆ ಎಂದು ಸರ್ಕಾರ ಆಶಿಸಿದೆ.



