ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಸೂಕ್ತ ಮುಂಗಾರು ಮಳೆಯಾಗದೆ ಬೆಳೆಗಳು ಒಣಗುತ್ತಿದ್ದು, ತಾಲ್ಲೂಕಿನಲ್ಲಿ ತೀವ್ರ ಕೃಷಿ ಸಂಕಷ್ಟ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಹಿರಿಯೂರು ತಾಲ್ಲೂಕನ್ನು ಕೂಡಲೇ 'ಬರಪೀಡಿತ ಪ್ರದೇಶ' ಎಂದು ಘೋಷಿಸಬೇಕು ಹಾಗೂ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ತಾಲ್ಲೂಕು ಸಮಿತಿಯು ತಹಶೀಲ್ದಾರ್ ಮುಖೇನ ಸರ್ಕಾರಕ್ಕೆ ಮನವಿ ಸಲ್ಲಿಸಿತು.
ಸಾಲದ ಸುಳಿಯಲ್ಲಿ ರೈತರು:
ಮನವಿ ಸಲ್ಲಿಸಿ ಮಾತನಾಡಿದ ಪಕ್ಷದ ನಾಯಕರು, "ತಾಲ್ಲೂಕಿನಲ್ಲಿ ಮಳೆ ಕೈಕೊಟ್ಟಿದ್ದರಿಂದ ರೈತರು ತಾವು ಬೆಳೆದ ತೋಟಗಾರಿಕೆ ಹಾಗೂ ಅಲ್ಪಾವಧಿ ಬೆಳೆಗಳನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. ನಿತ್ಯವೂ ನೂರಾರು ಕೊಳವೆಬಾವಿಗಳನ್ನು ಕೊರೆಸುತ್ತಿದ್ದು, ನೀರು ಬೀಳದೆ ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸುತ್ತಿದ್ದಾರೆ. ಮಳೆಯೂ ಇಲ್ಲದೆ, ಅಂತರ್ಜಲವೂ ಸಿಗದೆ ಬೆಳೆಗಳೆಲ್ಲವೂ ಮಣ್ಣು ಪಾಲಾಗುತ್ತಿದ್ದು, ರೈತರು ತೀವ್ರ ಸಾಲದ ಸುಳಿಗೆ ಸಿಲುಕಿದ್ದಾರೆ," ಎಂದು ಕಳವಳ ವ್ಯಕ್ತಪಡಿಸಿದರು.
ಸರ್ಕಾರ ತಕ್ಷಣವೇ ಮಧ್ಯಪ್ರವೇಶಿಸಿ ಹಿರಿಯೂರು ತಾಲ್ಲೂಕಿಗೆ ವಿಶೇಷ ಪರಿಹಾರ ಪ್ಯಾಕೇಜ್ ಘೋಷಿಸಬೇಕು ಎಂದು ಅವರು ಆಗ್ರಹಿಸಿದರು.
ಈ ನಿಯೋಗದಲ್ಲಿ ಆಲ್ ಇಂಡಿಯಾ ಬಹುಜನ ಸಮಾಜ ಪಕ್ಷದ ಜಿಲ್ಲಾ ಸಂಯೋಜಕ ಕೆ.ಪಿ. ಶ್ರೀನಿವಾಸ್, ಜಿಲ್ಲಾ ಉಪಾಧ್ಯಕ್ಷ ಮಹಾಲಿಂಗಪ್ಪ ಉಪ್ಪಳಗೆರೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹನುಮಂತರಾಯ ಬ್ಯಾಡರಹಳ್ಳಿ, ತಾಲ್ಲೂಕು ಘಟಕದ ಅಧ್ಯಕ್ಷ ಎಚ್. ಜಗದೀಶ್, ತಾಲ್ಲೂಕು ಸಂಯೋಜಕ ನರಸಿಂಹಮೂರ್ತಿ, ಕಾರ್ಯದರ್ಶಿಗಳಾದ ರಂಗಸ್ವಾಮಿ ಕಳವಿಬಾಗಿ, ಮಹೇಶ್ ಕಾಟನಾಯಕನಹಳ್ಳಿ, ಕದುರಪ್ಪ ಶಿಡ್ಲಯನಕೋಟೆ, ಮೈಗಣ್ಣ ಇಕ್ಕನೂರು, ಲಕ್ಷ್ಮಿಕಾಂತ್, ಖಜಾಂಚಿ ರಂಗಸ್ವಾಮಿ ಹುಚ್ಚವ್ವನಹಳ್ಳಿ, ಯುವ ಘಟಕದ ಅಧ್ಯಕ್ಷ ದೊರೇಶ್ ಈಶ್ವರಗೆರೆ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.



