ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಬಬ್ಬೂರು ಫಾರಂ ಕೃಷಿ ಕಾಲೇಜಿನಲ್ಲಿ ಬಿ.ಎಸ್ಸಿ ಕೃಷಿ ವಿದ್ಯಾರ್ಥಿಗಳಿಗೆ ನಡೆಸಲಾದ 2ನೇ ಪರೀಕ್ಷೆಯನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ರಾಜ್ಯ ರೈತ ಸಂಘದ ಮುಖಂಡ ಕೆ.ಪಿ. ಭೂತಯ್ಯ ತೀವ್ರವಾಗಿ ಒತ್ತಾಯಿಸಿದ್ದಾರೆ.
ರಾಜ್ಯಾದ್ಯಂತ ಬಿ.ಎಸ್ಸಿ ಕೃಷಿ ಪರೀಕ್ಷೆಗಳು ಮುಗಿದು ಫಲಿತಾಂಶವೂ ಪ್ರಕಟವಾಗಿದೆ. ಆದರೆ, ಬಬ್ಬೂರು ಫಾರಂನಲ್ಲಿ ಮಾತ್ರ ವಿದ್ಯಾರ್ಥಿಗಳಿಗೆ ನಿಯಮ ಬಾಹಿರವಾಗಿ 2ನೇ ಬಾರಿಗೆ ಪರೀಕ್ಷೆ ನಡೆಸಿ ಜಿಲ್ಲೆಯ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಲಾಗಿದೆ. ಹೀಗಾಗಿ, ಎರಡನೇ ಪರೀಕ್ಷೆಯನ್ನು ರದ್ದುಪಡಿಸಿ, ಮೊದಲ ಪರೀಕ್ಷೆಯ ಫಲಿತಾಂಶವನ್ನೇ ಅಧಿಕೃತವಾಗಿ ಗಣನೆಗೆ ತೆಗೆದುಕೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮಾನವ ಸರಪಳಿ, ಪ್ರತಿಭಟನೆ:
ಬಬ್ಬೂರು ಫಾರಂ ಪರೀಕ್ಷಾ ಅಕ್ರಮ ಹಾಗೂ ವಿದ್ಯಾರ್ಥಿಗಳ ಮೇಲಿನ ಅನ್ಯಾಯ ಖಂಡಿಸಿ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ನಗರದ ಗಾಂಧಿ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಕಾಲ್ನಡಿಗೆ ಜಾಥಾ ನಡೆಸಿದ ಪ್ರತಿಭಟನಾಕಾರರು, ರಸ್ತೆಯುದ್ದಕ್ಕೂ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಬಹಿರಂಗ ಸಭೆ ನಡೆಸಿ, ಜಿಲ್ಲಾಧಿಕಾರಿ ವೆಂಕಟೇಶ್ ಹಾಗೂ ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ವಿಶ್ವವಿದ್ಯಾಲಯ ಬಂದ್ ಮಾಡುವ ಎಚ್ಚರಿಕೆ:
"ಬಬ್ಬೂರು ಫಾರಂನಲ್ಲಿ ನಡೆಸಲಾದ ಎರಡನೇ ಪರೀಕ್ಷೆಯನ್ನು ಸರ್ಕಾರ ತಕ್ಷಣವೇ ರದ್ದುಗೊಳಿಸದಿದ್ದರೆ, ಮುಂಬರುವ ಸೋಮವಾರದಂದು ಸುಮಾರು 5 ಸಾವಿರಕ್ಕೂ ಹೆಚ್ಚು ರೈತ ಮುಖಂಡರು ಹಾಗೂ ವಿದ್ಯಾರ್ಥಿಗಳೊಂದಿಗೆ ಬಬ್ಬೂರು ಫಾರಂ ಕೃಷಿ ವಿಶ್ವವಿದ್ಯಾಲಯವನ್ನು ಮುತ್ತಿಗೆ ಹಾಕಿ, ಬಂದ್ ಮಾಡಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು" ಎಂದು ಕೆ.ಪಿ. ಭೂತಯ್ಯ ಎಚ್ಚರಿಸಿದ್ದಾರೆ.
ಅಧಿಕಾರಿಗಳ ಸಕಾರಾತ್ಮಕ ಸ್ಪಂದನೆ:
ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟೇಶ್, ಈ ಸಮಸ್ಯೆಯ ಗಂಭೀರತೆಯನ್ನು ಅರಿತು ತೋಟಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ತೋಟಗಾರಿಕೆ ವಿಶ್ವವಿದ್ಯಾನಿಲಯದ ಕುಲಪತಿಗಳೊಂದಿಗೆ ತುರ್ತು ಚರ್ಚೆ ನಡೆಸಿ, ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಈ ಬೃಹತ್ ಪ್ರತಿಭಟನೆಯಲ್ಲಿ ರೈತ ಸಂಘದ ಪ್ರಮುಖ ಮುಖಂಡರಾದ ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ಕೆ.ಸಿ. ಹೊರಕೇರಪ್ಪ, ಕೆ.ಟಿ. ತಿಪ್ಪೇಸ್ವಾಮಿ, ಮರಳಹಳ್ಳಿ ರವಿಕುಮಾರ್, ಬಸ್ತಿಹಳ್ಳಿ ಸುರೇಶ್ ಬಾಬು, ಬಿ.ಓ. ಶಿವಕುಮಾರ್, ಬಳಗಟ್ಟ ವೆಂಕಟೇಶ್, ಚೇತನ್ ಯಳನಾಡು, ಆರ್. ಚಂದ್ರಪ್ಪ, ಜಿ. ನಾಗರಾಜು, ಕೆ.ಎಂ. ಕಾಂತರಾಜು, ಬಿ.ಎ. ಹನುಮಂತರೆಡ್ಡಿ, ಮುರುಳಿ ಯಾದವ್, ಮರಿಗೌಡ, ಮರಿಲಿಂಗಪ್ಪ, ಶಶಿಕಲಾ, ಬುರುಜನರೊಪ್ಪ ತಿಪ್ಪೇಸ್ವಾಮಿ, ನಾಗರಾಜು, ತಿಪ್ಪೇಶ್ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಹಾಗೂ ಪೋಷಕರು ಪಾಲ್ಗೊಂಡು ಬೆಂಬಲ ಸೂಚಿಸಿದರು.



