ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಪ್ರವಾದಿ ಮುಹಮ್ಮದ್ ಸಲ್ಲಲ್ಲಾಹು ಅಲೈಹಿ ವ ಸಲ್ಲಂ ಅವರ ಕುರಿತು ನಾಜಿಯಾ ಇಲಾಹಿ ಎಂಬುವರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸ್ಥಳೀಯ ಸೋಶಿಯಲ್ ವೆಲ್ಫೇರ್ ನೇತೃತ್ವದಲ್ಲಿ ಹಿರಿಯೂರು ತಹಶೀಲ್ದಾರ್ ಎಂ. ಸಿದ್ದೇಶ್ ಅವರಿಗೆ ಮನವಿ ಸಲ್ಲಿಸಲಾಯಿತು.
ನಾಜಿಯಾ ಇಲಾಹಿ ಅವರ ಬೇಜವಾಬ್ದಾರಿಯುತ ಹಾಗೂ ಅವಹೇಳನಕಾರಿ ಹೇಳಿಕೆಗಳಿಂದ ಮುಸ್ಲಿಂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ತೀವ್ರ ಧಕ್ಕೆಯಾಗಿದ್ದು, ನೋವುಂಟಾಗಿದೆ. ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಸಂಬಂಧಪಟ್ಟ ಅಧಿಕಾರಿಗಳ ಮೂಲಕ ಈ ಕುರಿತು ಸೂಕ್ತ ಪರಿಶೀಲನೆ ನಡೆಸಿ, ಅಗತ್ಯವಿದ್ದಲ್ಲಿ ತಕ್ಷಣವೇ ಪೊಲೀಸ್ ಇಲಾಖೆಗೆ ದೂರನ್ನು ರವಾನಿಸುವ ಮೂಲಕ ಶೀಘ್ರ ಹಾಗೂ ನ್ಯಾಯಸಮ್ಮತ ಕಾನೂನು ಕ್ರಮ ಜರುಗಿಸಬೇಕು ಎಂದು ಮುಖಂಡರು ವಿನಂತಿಸಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಪ್ರಮುಖರಾದ ಜಾಫರ್ ಮೌಲಾನಾ, ಬುರ್ಹಾನ ಮೌಲಾನಾ, ಆದಿ ಜಾಂಬವ ಸಂಘಟನೆಯ ಶಿವರುದ್ರ ಮುನಿಸ್ವಾಮಿ, ಜಮೀರ್, ಇಮ್ರಾನ್, ಕರವೇ ಪದಾಧಿಕಾರಿ ದಾದಾಪೀರ್, ಖಾಲಿದ್ ಹುಸೇನ್, ಭಾಷಾ ಸೇರಿದಂತೆ ಮುಸ್ಲಿಂ ಸಮುದಾಯ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.



