ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಬಹುಭಾಷಾ ನಟ ಪ್ರಕಾಶ್ರಾಜ್ಅವರ ಹೆಸರು ತಳುಕು ಹಾಕಿಕೊಂಡಿದ್ದು, ಈ ಕುರಿತು ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗಳು ಆರಂಭವಾಗಿವೆ.
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಜೈಲಿಗೆ ಕಳುಹಿಸಲು ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್ ಸೇರಿದಂತೆ ಹಲವರು ಷಡ್ಯಂತ್ರ ರೂಪಿಸಿದ್ದಾರೆ ಎಂದು ಆರೋಪಿಸಿ ಮಾಸ್ಕ್ ಮ್ಯಾನ್ ಎಂದೇ ಪರಿಚಿತರಾಗಿರುವ ಸಿ.ಎನ್. ಚಿನ್ನಯ್ಯ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ಪ್ರಕರಣದ ಸ್ಫೋಟಕ ವಿವರಗಳನ್ನು ಬಿಚ್ಚಿಟ್ಟಿದ್ದಾರೆ. ಪ್ರಕಾಶ್ ರಾಜ್ ಎಂಬುವರು ತಮ್ಮೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದರು ಎಂದು ಚಿನ್ನಯ್ಯ ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
"ಹೆಸರು ಬಂದ ತಕ್ಷಣ ಯಾರೂ ಕ್ರಿಮಿನಲ್ ಆಗಲ್ಲ" - ಪ್ರಿಯಾಂಕ್ ಖರ್ಗೆ
ಈ ಬೆಳವಣಿಗೆಯ ಕುರಿತು ಬೆಂಗಳೂರಿನಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದರು.
"ಪ್ರಕರಣದಲ್ಲಿ ಹೆಸರು ಪ್ರಸ್ತಾಪ ಆದ ತಕ್ಷಣ ಯಾರೂ ಕ್ರಿಮಿನಲ್ ಆಗುವುದಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಈಗಾಗಲೇ ಎಸ್ಐಟಿ ಮುಖ್ಯಸ್ಥರ ಬಳಿ ಮಾಹಿತಿ ಕೇಳಿದೆ. ಅಧಿಕಾರಿಗಳು ನ್ಯಾಯಾಲಯಕ್ಕೆ ಸೂಕ್ತ ಉತ್ತರ ನೀಡಲಿದ್ದಾರೆ. ವಿಷಯ ನ್ಯಾಯಾಲಯದಲ್ಲಿ ಇರುವುದರಿಂದ ನಾವು ಮಾಧ್ಯಮಗಳ ಮುಂದೆ ಬಹಿರಂಗವಾಗಿ ಚರ್ಚೆ ಮಾಡಲು ಸಾಧ್ಯವಿಲ್ಲ" ಎಂದು ಗೃಹ ಸಚಿವರು ತಿಳಿಸಿದರು.
200 ಕೋಟಿ ಹಣ ಸಂಗ್ರಹ ಆರೋಪದ ತನಿಖೆ:
ಪ್ರಕರಣಕ್ಕೆ ಸಂಬಂಧಿಸಿದಂತೆ ಬೇರೆ ಬೇರೆ ಕಡೆಗಳಿಂದ ಸುಮಾರು 200 ಕೋಟಿ ರೂಪಾಯಿಗಳಷ್ಟು ಭಾರಿ ಪ್ರಮಾಣದ ಹಣ ಸಂಗ್ರಹವಾಗಿದೆ ಹಾಗೂ ಇದರಲ್ಲಿ ಕೆಲವರ ಭಾಗಿದಾರಿಕೆ ಇದೆ ಎಂಬ ಆರೋಪದ ಕುರಿತು ಮಾತನಾಡಿದ ಸಚಿವರು, "ಈಗಾಗಲೇ ಎಸ್ಐಟಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ, ಈ ಹಿಂದೆ ಇದೇ ವ್ಯಕ್ತಿ ಧರ್ಮಸ್ಥಳದ ಬಗ್ಗೆಯೂ ಆರೋಪ ಮಾಡಿದ್ದರು. ಹಾಗಾಗಿ ಅವರು ಎಷ್ಟು ಸತ್ಯ ಹೇಳುತ್ತಿದ್ದಾರೆ, ಎಷ್ಟು ಸುಳ್ಳು ಹೇಳುತ್ತಿದ್ದಾರೆ ಎಂಬುದನ್ನು ಪರಿಶೀಲಿಸಬೇಕಾಗಿದೆ" ಎಂದರು.
ಮೈಕ್ರೋ ಫೈನಾನ್ಸ್ ಕಾಯ್ದೆ ಉಲ್ಲಂಘನೆ ಆರೋಪ:
ಧರ್ಮಸ್ಥಳದ ಶ್ರೀ ಕ್ಷೇತ್ರ ಧರ್ಮಾಧಿಕಾರ ಸಂಸ್ಥೆಯು ಮೈಕ್ರೋ ಫೈನಾನ್ಸ್ ಕಾಯ್ದೆಯನ್ನು ಪಾಲಿಸುತ್ತಿಲ್ಲ ಎಂಬ ಆರೋಪಕ್ಕೂ ಉತ್ತರಿಸಿದ ಗೃಹ ಸಚಿವರು, "ಹೊಸ ಕಾಯ್ದೆಯನ್ನು ಇಡೀ ರಾಜ್ಯಕ್ಕೆ ಜಾರಿಗೆ ತರಲಾಗಿದೆ. ಇದು ಕೇವಲ ಧರ್ಮಸ್ಥಳ ಸಂಘಕ್ಕೆ ಮಾತ್ರವಲ್ಲ, ಎಲ್ಲರಿಗೂ ಅನ್ವಯಿಸುತ್ತದೆ ಮತ್ತು ಎಲ್ಲರೂ ಇದನ್ನು ಕಡ್ಡಾಯವಾಗಿ ಪಾಲಿಸಬೇಕು. ಕಾಯ್ದೆ ಬಂದ ನಂತರ ಯಾರು ಉಲ್ಲಂಘನೆ ಮಾಡಿದ್ದಾರೆ ಎಂಬ ಬಗ್ಗೆ ಸದ್ಯಕ್ಕೆ ನನಗೆ ನಿಖರ ಮಾಹಿತಿ ಇಲ್ಲ. ಬಂದಿರುವ ದೂರಿನ ಬಗ್ಗೆ ತನಿಖೆ ಮತ್ತು ಪರಿಶೀಲನೆ ನಡೆಸಲಾಗುವುದು. ಮುಂದಿನ 10 ದಿನಗಳಲ್ಲಿ ಈ ಕುರಿತು ಸಭೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು" ಎಂದು ಭರವಸೆ ನೀಡಿದರು.



