ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
"ಮನುಷ್ಯ ಬದುಕಲು ಸೌಹಾರ್ದತೆಯೇ ಅತ್ಯುತ್ತಮ ಮಾರ್ಗ. ಅದನ್ನು ಕದಡುವ ಮತ್ತು ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ರೀತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಂಚಿಕೊಳ್ಳುವುದರಿಂದ ದೇಶದ ಪ್ರಗತಿ ಸಾಧಿಸಲು ಸಾಧ್ಯವಿಲ್ಲ" ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ.
ರಸ್ತೆಯಲ್ಲಿ ನಮಾಜ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 24 ಗಂಟೆಗಳಲ್ಲಿ 'ಬಿ' ರಿಪೋರ್ಟ್ (ಬಿ-ವರದಿ) ಸಲ್ಲಿಸಿದ್ದನ್ನು ಪ್ರಶ್ನಿಸಿ ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿದ್ದ ಹಿಂದೂ ಸಂಘಟನೆಯ ಮುಖಂಡ ಶರಣ್ ಪಂಪ್ವೆಲ್ ವಿರುದ್ಧ ಮಂಗಳೂರಿನ ಸಿಇಎನ್ (CEN) ಪೊಲೀಸ್ ಠಾಣೆಯಲ್ಲಿ ದ್ವೇಷ ಉತ್ತೇಜನ ಆರೋಪದಡಿ ಎಫ್ಐಆರ್ ದಾಖಲಾಗಿತ್ತು. ಈ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು ಈ ಮಹತ್ವದ ಆಕ್ಷೇಪಣೆ ವ್ಯಕ್ತಪಡಿಸಿ, ತೀರ್ಪನ್ನು ಕಾಯ್ದಿರಿಸಿದೆ.
ವಾದ-ಪ್ರತಿವಾದದ ಪ್ರಮುಖ ಅಂಶಗಳು:
ಅರ್ಜಿದಾರರ ವಾದ: ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, "ರಸ್ತೆಯಲ್ಲಿ ನಮಾಜ್ ಮಾಡಿದ ಪ್ರಕರಣದಲ್ಲಿ ಪೊಲೀಸರು ತರತುರಿಯಲ್ಲಿ 24 ಗಂಟೆಯೊಳಗೆ ವಿಚಾರಣಾ ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಸಿದ್ದರು. ಇದನ್ನು ಪ್ರಶ್ನಿಸಿ ಸಾಮಾಜಿಕ ಜಾಲತಾಣದಲ್ಲಿ ಸಾಮಾನ್ಯ ಕಾಮೆಂಟ್ ಮಾಡಿದ್ದಕ್ಕೆ ಪೊಲೀಸರು ಸ್ವಯಂಪ್ರೇರಿತವಾಗಿ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಫೇಸ್ಬುಕ್ ಪೋಸ್ಟ್ನಲ್ಲಿ ಯಾವುದೇ ಅಪರಾಧಿಕ ಅಂಶಗಳಿಲ್ಲ. ಸೂಕ್ತ ಕಾನೂನು ಪ್ರಕ್ರಿಯೆ ಪಾಲಿಸದೇ ಅನಗತ್ಯವಾಗಿ ಪ್ರಕರಣ ದಾಖಲಿಸಲಾಗಿದೆ" ಎಂದು ಪೀಠಕ್ಕೆ ವಿವರಿಸಿದರು.
ಸರ್ಕಾರದ ಪರ ವಾದ: ರಾಜ್ಯ ಸರ್ಕಾರದ ಪರ ಆಕ್ಷೇಪ ವ್ಯಕ್ತಪಡಿಸಿದ ವಕೀಲರು, "ಅರ್ಜಿದಾರರು ಸಮಾಜದಲ್ಲಿ ಶಾಂತಿ ಮತ್ತು ಕೋಮು ಸೌಹಾರ್ದತೆಗೆ ಧಕ್ಕೆ ತರುವ ಉದ್ದೇಶದಿಂದಲೇ ಈ ಪೋಸ್ಟ್ ಮಾಡಿದ್ದಾರೆ. ಒಂದು ಸಮುದಾಯದ ಆಚರಣೆಯ ಬಗ್ಗೆ ಈ ರೀತಿ ಕಾಮೆಂಟ್ ಮಾಡುವುದರಿಂದ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ. ಇಂತಹ ಘಟನೆಗಳಿಂದ ಬಂದ್ಗಳು ನಡೆದು ಸರ್ಕಾರದ ಬೊಕ್ಕಸಕ್ಕೆ ಅಪಾರ ನಷ್ಟವಾಗುತ್ತದೆ. ಮಂಗಳೂರು ಭಾಗದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಬಹುಮುಖ್ಯವಾಗಿದ್ದು, ತನಿಖೆಗೆ ಅನುಮತಿ ನೀಡಬೇಕು. ಪ್ರಕರಣದಲ್ಲಿ ಯಾವುದೇ ತಪ್ಪಿಲ್ಲದಿದ್ದರೆ ಪೊಲೀಸರೇ ಬಿ-ರಿಪೋರ್ಟ್ ನೀಡಲಿದ್ದಾರೆ" ಎಂದು ಪ್ರಬಲವಾಗಿ ವಾದಿಸಿದರು.
ಹೈಕೋರ್ಟ್ ಖಾರವಾದ ಪ್ರಶ್ನೆ ಹಾಗೂ ಬೇಸರ:
ಪ್ರಕರಣದ ವಿಚಾರಣೆ ವೇಳೆ ಅರ್ಜಿದಾರರ ನಡೆಗೆ ತೀವ್ರ ಬೇಸರ ವ್ಯಕ್ತಪಡಿಸಿದ ನ್ಯಾಯಪೀಠ, "ಜನರು ಅನಾದಿ ಕಾಲದಿಂದಲೂ ತಮ್ಮದೇ ಆದ ಹಬ್ಬ, ಸಂಪ್ರದಾಯಗಳನ್ನು ಆಚರಿಸಿಕೊಂಡು ಬಂದಿದ್ದಾರೆ. ಪ್ರತಿಯೊಂದಕ್ಕೂ ಮತ್ತೊಂದು ಸಮುದಾಯದ ಆಚರಣೆಯ ಕಡೆಗೆ ಬೊಟ್ಟು ಮಾಡಿ ತೋರಿಸುವುದು ಏಕೆ? ಸೌಹಾರ್ದತೆಯಿಂದ ಬದುಕುವುದನ್ನು ಬಿಟ್ಟು ಪರಸ್ಪರ ಆರೋಪ-ಪ್ರತ್ಯಾರೋಪ ಮಾಡುವ ಇಂತಹ ಪೋಸ್ಟ್ಗಳಿಂದ ಯಾವ ಪ್ರಗತಿ ಸಾಧ್ಯ?" ಎಂದು ಪ್ರಶ್ನಿಸಿತು. ಜೊತೆಗೆ, ಅರ್ಜಿದಾರರ ವಿರುದ್ಧ ಈಗಾಗಲೇ 20 ಪ್ರಕರಣಗಳು ದಾಖಲಾಗಿರುವುದನ್ನು ಉಲ್ಲೇಖಿಸಿ, "ಏಕೆ ಇಷ್ಟೊಂದು ಕೇಸ್ಗಳು ನಿಮ್ಮ ಮೇಲಿವೆ?" ಎಂದು ನೇರವಾಗಿ ಕೇಳಿತು.
ಇಬ್ಬರ ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಪೀಠವು, ಅರ್ಜಿ ಕುರಿತ ಅಂತಿಮ ಆದೇಶವನ್ನು ಕಾಯ್ದಿರಿಸಿದೆ. ಅಲ್ಲಿಯವರೆಗೆ ಅರ್ಜಿದಾರರ ವಿರುದ್ಧದ ತನಿಖೆಗೆ ನೀಡಲಾಗಿದ್ದ ತಡೆಯಾಜ್ಞೆಯನ್ನು ಮುಂದುವರೆಸಿ ಆದೇಶಿಸಿದೆ.




