ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
"ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಅವರ ಪಟಾಲಂ ನಡೆಸುತ್ತಿರುವ ರಿಯಲ್ ಎಸ್ಟೇಟ್ ದಂಧೆಗಾಗಿ, ಕಷ್ಟಪಟ್ಟು ಬದುಕು ಕಟ್ಟಿಕೊಂಡಿರುವ ಬಡ ರೈತರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು" ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ಸುತ್ತಮುತ್ತಲಿನ ಹಾಗೂ ರಾಜ್ಯದ ವಿವಿಧೆಡೆ ನಡೆಯುತ್ತಿರುವ ಭೂಸ್ವಾಧೀನ ಮತ್ತು ರಿಯಲ್ ಎಸ್ಟೇಟ್ ವ್ಯವಹಾರಗಳಲ್ಲಿ ಆಡಳಿತ ಪಕ್ಷದ ಪ್ರಭಾವಿ ನಾಯಕರ ಹಸ್ತಕ್ಷೇಪವನ್ನು ಖಂಡಿಸಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಹೊರಹಾಕಿದ್ದಾರೆ.
ರಿಯಲ್ ಎಸ್ಟೇಟ್ ದಂಧೆಗೆ ರೈತರು ಬಲಿ?
ಕಾಂಗ್ರೆಸ್ ಸರ್ಕಾರದ ವಿರುದ್ಧ ನೇರ ವಾಗ್ದಾಳಿ ನಡೆಸಿರುವ ನಿಖಿಲ್ ಕುಮಾರಸ್ವಾಮಿ, "ಅಧಿಕಾರವನ್ನು ಬಳಸಿಕೊಂಡು ರೈತರ ಜಮೀನುಗಳನ್ನು ಕಬಳಿಸುವ ತಂತ್ರ ನಡೆಯುತ್ತಿದೆ. ಡಿ.ಕೆ.ಶಿವಕುಮಾರ್ ಹಾಗೂ ಅವರ ಬೆಂಬಲಿಗರ ರಿಯಲ್ ಎಸ್ಟೇಟ್ ಹಿತಾಸಕ್ತಿಗಾಗಿ ಅನ್ನದಾತರನ್ನು ಬೀದಿಗೆ ತಳ್ಳುವ ಪ್ರಯತ್ನಗಳನ್ನು ಜೆಡಿಎಸ್ ಎಂದಿಗೂ ಸಹಿಸುವುದಿಲ್ಲ," ಎಂದು ಎಚ್ಚರಿಸಿದ್ದಾರೆ.
"ತಮ್ಮ ರಕ್ತ ಹೆದರು ಸುರಿಸಿ, ಭೂಮಿಯನ್ನು ನಂಬಿ ಬದುಕುತ್ತಿರುವ ರೈತರ ಬದುಕಿನ ಜೊತೆ ಸರ್ಕಾರ ಆಟವಾಡಬಾರದು. ರಿಯಲ್ ಎಸ್ಟೇಟ್ ದಂಧೆಕೋರರ ಲಾಭಕ್ಕಾಗಿ ಒಕ್ಕಲೆಬ್ಬಿಸುವ ಕೆಲಸ ತಕ್ಷಣ ನಿಲ್ಲಬೇಕು."
ನಿಖಿಲ್ ಕುಮಾರಸ್ವಾಮಿ, ರಾಜ್ಯಾಧ್ಯಕ್ಷರು, ಜೆಡಿಎಸ್ ಯುವ ಘಟಕ.
ರೈತರ ಪರ ಹೋರಾಟದ ಎಚ್ಚರಿಕೆ-
ಅಭಿವೃದ್ಧಿಯ ಹೆಸರಿನಲ್ಲಿ ಅಥವಾ ಖಾಸಗಿ ಹಿತಾಸಕ್ತಿಗಳಿಗಾಗಿ ರೈತರನ್ನು ಬಲವಂತವಾಗಿ ಸ್ಥಳಾಂತರಿಸುವ ಅಥವಾ ಅವರ ಭೂಮಿಯನ್ನು ಕಸಿದುಕೊಳ್ಳುವ ಪ್ರಕ್ರಿಯೆಗಳು ಮುಂದುವರಿದರೆ, ಜೆಡಿಎಸ್ ಯುವ ಘಟಕವು ರೈತರ ಪರವಾಗಿ ಬೀದಿಗಿಳಿದು ಉಗ್ರ ಹೋರಾಟ ನಡೆಸಲಿದೆ ಎಂದು ಅವರು ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದ್ದಾರೆ. ಸರ್ಕಾರ ತಕ್ಷಣವೇ ಈ ವಿಷಯದಲ್ಲಿ ಮಧ್ಯಪ್ರವೇಶಿಸಿ ರೈತರಿಗೆ ನ್ಯಾಯ ಒದಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.


