ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ನಗರದ ಬಾಪೂಜಿ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಮಹಾವಿದ್ಯಾಲಯ ಜೈವಿಕ ತಂತ್ರಜ್ಞಾನ ವಿಭಾಗದ ಪ್ರಾಧ್ಯಾಪಕ, ಅಂತರರಾಷ್ಟ್ರೀಯ ಖ್ಯಾತಿಯ ಪರಿಸರ ವಿಜ್ಞಾನಿ ಡಾ.ಬಿ.ಇ.ರಂಗಸ್ವಾಮಿ ಅವರು ದಾವಣಗೆರೆ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಗುರುವಾರ ಅಧಿಕಾರ ಸ್ವೀಕರಿಸಿದರು.
ರಾಜ್ಯಪಾಲ ಥಾವರ್ಚಂದ್ ಗೆಹ್ಲೋತ್ ಆವರು ಡಾ.ರಂಗಸ್ವಾಮಿ ಅವರ ನೇಮಕಾತಿಯ ಆದೇಶ ಹೊರಡಿಸಿದ್ದಾರೆ. ಪ್ರಭಾರ ಕುಲಪತಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರೊ.ಕೆ.ವೆಂಕಟೇಶ ಅವರು ಡಾ.ರಂಗಸ್ವಾಮಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕುಲಸಚಿವ ಎಸ್.ಬಿ.ಗಂಟಿ, ಪರೀಕ್ಷಾಂಗ ಕುಲಸಚಿವ ಪ್ರೊ.ಸಿ.ಕೆ.ರಮೇಶ, ಹಣಕಾಸು ಅಧಿಕಾರಿ ಪ್ರೊ.ಆರ್.ಶಶಿಧರ, ಉಪಸ್ಥಿತರಿದ್ದರು.
ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿದ ಡಾ.ರಂಗಸ್ವಾಮಿ ಅವರು, ವಿದ್ಯಾರ್ಥಿಗಳಿಗೆ ಸ್ವಾವಲಂಬಿ ಬದುಕು ಕಟ್ಟಿಕೊಡುವ ಜೊತೆಗೆ ಆರ್ಥಿಕ ಸಮೃದ್ಧಿಯನ್ನು ತರುವ ಮೂಲಕ ವಿಶ್ವವಿದ್ಯಾನಿಲಯದ ಶೈಕ್ಷಣಿಕ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಸ್ಥಳೀಯತೆಯಿಂದ ಜಾಗತಿಕ ಮಟ್ಟಕ್ಕೆ ವಿಶ್ವವಿದ್ಯಾನಿಲಯವನ್ನು ಕಟ್ಟುವ ಪ್ರಯತ್ನವನ್ನು ಪ್ರಾಮಾಣಿಕವಾಗಿ ನಿರ್ವಹಿಸಲಾಗುವುದು. ಆಡಿ ಮಾಡುವುದಕ್ಕಿಂತ ಮಾಡಿ ತೋರಿಸುವುದು ಮುಖ್ಯವಾಗಿದೆ ಎಂದರು.
ದಾವಣಗೆರೆ ವಿಶ್ವವಿದ್ಯಾನಿಲಯ ಶೈಕ್ಷಣಿಕವಾಗಿ ಸದೃಢವಾಗಿದೆ. ಅದಕ್ಕೆ ಮೌಲಿಕ ಕಾಯಕಲ್ಪ ನೀಡಬೇಕಾಗಿದೆ. ಅದಕ್ಕೆ ಸಂಬಂಧಿಸಿದಂತೆ ಸ್ಥಳೀಯರ ಜೊತೆಗೆ ರಾಷ್ಟç ಮತ್ತು ಅಂತರರಾಷ್ಟ್ರೀಯ ಮಟ್ಟದ ಸಂಸ್ಥೆಗಳ ಜೊತೆಗೆ ಒಡಂಬಡಿಕೆ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಉನ್ನತ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಆದ್ಯತೆ ನೀಡಲಾಗುವುದು. ವಿಶ್ವವಿದ್ಯಾನಿಲಯದ ಅಧ್ಯಾಪಕರು, ಸ್ಥಳೀಯ ಮುಖಂಡರು, ಉದ್ಯಮಿಗಳು, ತಜ್ಞರು, ತಂತ್ರಜ್ಞಾನಿಗಳ ಸಹಕಾರದೊಂದಿಗೆ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.
ವಿಶ್ವವಿದ್ಯಾನಿಲಯದಲ್ಲಿ ಬೋಧನೆ, ಸಂಶೋಧನೆಯಂತಹ ಶೈಕ್ಷಣಿಕ ಕಾರ್ಯಗಳ ಜೊತೆಗೆ ಸಂಶೋಧನಾ ಯೋಜನೆಗಳ ಅನುಷ್ಠಾನಕ್ಕೆ ಗಮನ ನೀಡಲಾಗುವುದು. ಇತರ ವಿಶ್ವವಿದ್ಯಾನಿಲಯಗಳ ಜೊತೆಗೆ ಒಡಂಬಡಿಕೆ ಮಾಡಿಕೊಂಡು ಸಂಶೋಧನಾ ಕಾರ್ಯಗಳಿಗೆ ಹೆಚ್ಚಿನ ಉತ್ತೇಜನ ನೀಡಲಾಗುವುದು. ಅದಕ್ಕೆ ಪೂರಕವಾದ ಸಂಪನ್ಮೂಲವನ್ನು ಕ್ರೋಡೀಕರಿಸಲಾಗುವುದು ಎಂದು ಡಾ.ರಂಗಸ್ವಾಮಿ ಭರವಸೆ ನೀಡಿದರು.
ಪರಿಚಯ: ರಂಗಸ್ವಾಮಿ ಮೂಲತಃ ಹೊಳಲ್ಕೆರೆ ತಾಲ್ಲೂಕಿನ ಬಿದರಕೆರೆ ಗ್ರಾಮದವರು. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಬಿಎಸ್ಸಿ ಪದವಿ ಪೂರೈಸಿದ ಅವರು, ೧೯೯೫ರಲ್ಲಿ ಇಲ್ಲಿಯೇ ಎಂಎಸ್ಸಿ ಪಡೆದಿದ್ದಾರೆ. ಫ್ಲೋರಿಡಾ ಯುಎಸ್ಎ, ರೋಸ್ಕಿಲ್ಡ್ ವಿಶ್ವವಿದ್ಯಾಲಯ, ಡೆನ್ಮಾರ್ಕ್ನಿಂದ ವಾಯುಜೀವಶಾಸ್ತ್ರದ ವಿವಿಧ ಅಂಗ ವಿಷಯಗಳಲ್ಲಿ ಪದವಿಗಳನ್ನು ಪಡೆದಿದ್ದಾರೆ.
ದಾವಣಗೆರೆ ಬಾಪೂಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ, ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಕುಲಸಚಿವರಾಗಿ ಸೇವೆ ಸಲ್ಲಿಸಿರುವ ಇವರು ದಾವಣಗೆರೆ ಜಿಲ್ಲೆಯ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಮತ್ತು ದಾವಣಗೆರೆ ಮಿಡ್ ಟೌನ್ ರೋಟರಿ ಕ್ಲಬ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
೨೦೦೮ರಲ್ಲಿ ಅಮೆರಿಕಾ ಪ್ರವಾಸ ಕೈಗೊಂಡಿದ್ದ ಸಂದರ್ಭದಲ್ಲಿ ಇವರ ವೈಜ್ಞಾನಿಕ ಸಾಧನೆಯನ್ನು ಗುರುತಿಸಿ ಬೋಸ್ಟನ್ನ ಕ್ವಿನ್ಸಿ ಮತ್ತು ನ್ಯೂ ಬೆಡ್ಫೋರ್ಡ್ ನಗರಗಳ ಮೇಯರ್ಗಳು ಇವರಿಗೆ “ಗೌರವಾನ್ವಿತ ಪೌರತ್ವ” (ಊoಟಿoಡಿಚಿಡಿಥಿ ಅiಣizeಟಿ oಜಿ ಕಿuiಟಿಛಿಥಿ) ನೀಡಿ ಗೌರವಿಸಿದ್ದರು. ಇದರೊಂದಿಗೆ ರಾಷ್ಟ್ರೀಯ ಮಟ್ಟದ ಅತ್ಯುತ್ತಮ ತಾಂತ್ರಿಕ ಶಿಕ್ಷಕ ಪ್ರಶಸ್ತಿ (ರಾಜಾರಾಮ್ ಬಾಪು ನ್ಯಾಷನಲ್ ಅವಾರ್ಡ್) ಹಾಗೂ ದಾವಣಗೆರೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೂ ಇವರು ಭಾಜನರಾಗಿದ್ದಾರೆ.
ಪೋಲೆಂಡ್, ಆಸ್ಟ್ರೇಲಿಯಾ, ಇಟಲಿ ಮುಂತಾದ ದೇಶಗಳ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ವಿಶೇಷ ಉಪನ್ಯಾಸಗಳನ್ನು ನೀಡಿದ್ದಾರೆ. ಅಮೆರಿಕಾದ ಫ್ಲೋರಿಡಾದ ಎನ್ವಿರಾನ್ಮೆಂಟಲ್ ಡಯಾಗ್ನೋಸ್ಟಿಕ್ ಲ್ಯಾಬೊರೇಟರಿಯಲ್ಲಿ ಬ್ಯಾಕ್ಟೀರಿಯಾಲಜಿ ಮತ್ತು ಏರ್ ಸ್ಯಾಂಪ್ಲಿಂಗ್ ತಂತ್ರಜ್ಞಾನದಲ್ಲಿ ಉನ್ನತ ತರಬೇತಿ ಪಡೆದಿದ್ದಾರೆ. ಅಲ್ಲದೆ, ಡೆನ್ಮಾರ್ಕ್ನ ರೋಸ್ಕಿಲ್ಡೆ ವಿಶ್ವವಿದ್ಯಾಲಯದಲ್ಲಿ ಏರೋಬಯಾಲಜಿ ಕೋರ್ಸ್ ಪೂರೈಸಿದ್ದಾರೆ
ಡಾ.ರಂಗಸ್ವಾಮಿ ಅವರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ನಿಯತಕಾಲಿಕೆಗಳಲ್ಲಿ ೭೦ ಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳನ್ನು ಪ್ರಕಟಿಸಿದ್ದಾರೆ. ಭಾರತ ಸರ್ಕಾರದ ಡಿಬಿಟಿ, ಡಿಎಸ್ಟಿ ಸೇರಿದಂತೆ ವಿವಿಧ ಸಂಸ್ಥೆಗಳಿಂದ ಸುಮಾರು ೧.೭೫ ಕೋಟಿಗೂ ಅಧಿಕ ಮೊತ್ತದ ಸಂಶೋಧನಾ ಯೋಜನೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.
ಬೆಂಗಳೂರಿನಲ್ಲಿ ಪದವಿ ಪಡೆಯುವಾಗ ಸಾಹಿತ್ಯ, ರಂಗಭೂಮಿ ಕ್ಷೇತ್ರದ ನಂಟನ್ನು ಬೆಳೆಸಿಕೊಂಡವರು. ಬಿಡುವಿನ ವೇಳೆಯಲ್ಲಿ ತಮ್ಮ ಗ್ರಾಮ ಬಿದರಕೆರೆಯ ಹೊಲದಲ್ಲಿ ಕೃಷಿ ಚಟುವಟಿಕೆಯಲ್ಲೂ ತೊಡಗಿಸಿಕೊಂಡವರು.



