ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಸತೀಶ್ ಜಾರಕಿಹೊಳಿ ಮೇಲಿನ ಇ.ಡಿ ದಾಳಿ ರಾಜಕೀಯ ಪ್ರೇರಿತವಲ್ಲ. ಸಲ್ಲಿಕೆಯಾದ ದೂರಿನ ಆಧಾರದ ಮೇರೆಗೆ ದಾಳಿ ನಡೆಸಲಾಗಿದ್ದು, ಇದರ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈವಾಡವಿದೆ ಎಂಬುದು ತಪ್ಪು ಸಂದೇಶವಾಗಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.
ಸಿದ್ದರಾಮಯ್ಯ ಹಾಗೂ ಸತೀಶ್ ಜಾರಕಿಹೊಳಿ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಕಳೆದ 30 ವರ್ಷಗಳ ಗೆಳೆತನದಲ್ಲಿ ಹಲವು ಬಾರಿ ಭಿನ್ನಾಭಿಪ್ರಾಯಗಳು ಬಂದಿದ್ದರೂ ಒಟ್ಟಾಗಿಯೇ ಇದ್ದಾರೆ. ಇವರಿಬ್ಬರು ಅಹಿಂದದ ಎರಡು ಕಣ್ಣುಗಳಿದ್ದಂತೆ. ಅವರ ಸಂಬಂಧಕ್ಕೆ ಧಕ್ಕೆ ತರುವ ಕೆಲಸ ಮಾಡಬೇಡಿ ಎಂದು ಮನವಿ ಮಾಡಿದರು.
ಮೇ ತಿಂಗಳಲ್ಲಿ ಇ.ಡಿಗೆ ದೂರು ಸಲ್ಲಿಕೆಯಾಗಿ, ಜೂನ್ನಲ್ಲಿ ಮಂಜುನಾಥ್ ಮನೆ ಮೇಲೆ ದಾಳಿಯಾಗಿತ್ತು. ಅದರ ಮುಂದುವರಿದ ಭಾಗವಾಗಿ ಈ ದಾಳಿ ನಡೆದಿದ್ದು, ಇದರ ಬಗ್ಗೆ ನ್ಯಾಯಾಲಯವೇ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದರು.
ಇ.ಡಿ ಪರಿಶೀಲನೆ ಅಂತ್ಯ: ಬೆಳಗಾವಿಯಲ್ಲಿ ಅಬಕಾರಿ ಇಲಾಖೆ ಅಪರ ಆಯುಕ್ತ ಡಾ. ವೈ. ಮಂಜುನಾಥ್ ನಿವಾಸದಲ್ಲಿ ಸತತ 36 ಗಂಟೆ ಹಾಗೂ ಗೋಕಾಕ್ನಲ್ಲಿ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಸುಮಾರು 37 ಗಂಟೆಗಳ ಕಾಲ ನಡೆದ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಸುದೀರ್ಘ ಶೋಧ ಕಾರ್ಯಾಚರಣೆ ಅಂತ್ಯಗೊಂಡಿದೆ. ದಾಳಿಯ ವೇಳೆ ಅಧಿಕಾರಿಗಳು ಕೆಲವು ಮಹತ್ವದ ದಾಖಲೆಗಳು ಹಾಗೂ ನಗದು ಹಣವನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಕುಟುಂಬದ ವಿಷಯದಲ್ಲಿ ನಾವೆಲ್ಲರೂ ಒಂದಾಗಿದ್ದು, ಸತೀಶ್ ಜಾರಕಿಹೊಳಿ ಯಾವುದೇ ತಪ್ಪು ಮಾಡಿಲ್ಲ ಎಂದು ಬಾಲಚಂದ್ರ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.




