ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಕಂಟೋನ್ಮೆಂಟ್ ಹಾಗೂ ಕ್ವೀನ್ಸ್ ರಸ್ತೆಯಲ್ಲಿರುವ ರಾಜ್ಯ ಕಾಂಗ್ರೆಸ್ (ಕೆಪಿಸಿಸಿ) ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಪ್ರತಿಭಟನೆಯ ವೇಳೆ ತೀವ್ರ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಕಚೇರಿ ಮುಂಭಾಗಕ್ಕೇ ಬಂದ ದಾವಣಗೆರೆ ಜಿಲ್ಲೆಯ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದು, ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ ಘಟನೆ ನಡೆದಿದೆ.
ಕಚೇರಿ ಅಂಗಳದಲ್ಲೇ ಪ್ರತಿಭಟನಾ ಕಾಳಗ:
ಸರ್ಕಾರದ ವಿರುದ್ಧ ಕರಪತ್ರ ಹಂಚಿಕೆ ಹಾಗೂ ಕೆಪಿಸಿಸಿ ಕಚೇರಿ ಮುತ್ತಿಗೆಗೆ ನಿರ್ಧರಿಸಿದ್ದ ಬಿಜೆಪಿ ನಾಯಕರನ್ನು ಪೊಲೀಸರು ಕಂಟೋನ್ಮೆಂಟ್ ಪ್ರದೇಶದ ಬಳಿಯೇ ತಡೆದು ವಶಕ್ಕೆ ಪಡೆದಿದ್ದರು. ಆದರೆ, ಪ್ರತಿಭಟನಾ ಸ್ಥಳದ ಸರಿಯಾದ ಮಾಹಿತಿ ಇಲ್ಲದ ಕಾರಣ ಶಾಸಕ ಬಿ.ಪಿ. ಹರೀಶ್ ಅವರು ನೇರವಾಗಿ ಕೆಪಿಸಿಸಿ ಕಚೇರಿಯ ಮುಂಭಾಗಕ್ಕೇ ಆಗಮಿಸಿದ್ದರು.
ಧಿಕ್ಕಾರ-ಮೊಟ್ಟೆ ತೂರಾಟ: ಶಾಸಕ ಹರೀಶ್ ಕಾರಿನಿಂದ ಇಳಿದು ಕೆಪಿಸಿಸಿ ಕಚೇರಿಯಂಗಳಕ್ಕೆ ಹೆಜ್ಜೆ ಇಡುತ್ತಿದ್ದಂತೆ, ಅಲ್ಲೇ ಜಮಾಯಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು ಅವರ ವಿರುದ್ಧ ಬೃಹತ್ ಪ್ರಮಾಣದಲ್ಲಿ ಧಿಕ್ಕಾರ ಕೂಗಿದರು. ಅಷ್ಟಕ್ಕೇ ನಿಲ್ಲದೆ, ಏಕಾಏಕಿ ಶಾಸಕರತ್ತ ಮೊಟ್ಟೆಗಳನ್ನು ತೂರಿದ್ದಾರೆ.
ಪೋಲಿಸರಿಂದ ಶಾಸಕರ ರಕ್ಷಣೆ: ಕಚೇರಿ ಅಂಗಳದಲ್ಲೇ ಪರಿಸ್ಥಿತಿ ಕೈಮೀರುತ್ತಿದ್ದಂತೆ ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು, ಶಾಸಕ ಬಿ.ಪಿ. ಹರೀಶ್ ಅವರನ್ನು ಕಾಂಗ್ರೆಸ್ ಕಾರ್ಯಕರ್ತರ ರೋಷದಿಂದ ರಕ್ಷಿಸಿ ಪಕ್ಕದ ಗಲ್ಲಿಗೆ ಕರೆದೊಯ್ದಿದ್ದಾರೆ. ಬಳಿಕ ತಮ್ಮ ಪೊಲೀಸ್ ಜೀಪ್ನಲ್ಲೇ ಅವರನ್ನು ಸುರಕ್ಷಿತವಾಗಿ ಬೇರೆಡೆಗೆ ರವಾನಿಸಿದ್ದಾರೆ.
ಕೆಪಿಸಿಸಿ ಕಚೇರಿಯ ಮುಂಭಾಗದಲ್ಲೇ ಶಾಸಕರ ಮೇಲೆ ನಡೆದ ಈ ಮೊಟ್ಟೆ ತೂರಾಟದ ಘಟನೆ ರಾಜಧಾನಿಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವಿನ ರಾಜಕೀಯ ಕಾಳಗವನ್ನು ಮತ್ತಷ್ಟು ಕಾವೇರುವಂತೆ ಮಾಡಿದೆ.



