ಚಂದ್ರವಳ್ಳಿ ನ್ಯೂಸ್, ನೆಲಮಂಗಲ:
ನೆಲಮಂಗಲ ವಿಧಾನಸಭಾ ಕ್ಷೇತ್ರದ ವೀರರಾಘವನಪಾಳ್ಯ ಗ್ರಾಮದಲ್ಲಿ ಮಾಜಿ ಶಾಸಕರಾದ ಡಾ. ಕೆ. ಶ್ರೀನಿವಾಸ್ಮೂರ್ತಿ ಅವರ ನೇತೃತ್ವದಲ್ಲಿ "ಜನರೊಂದಿಗೆ ಜನತಾದಳ" ವಿನೂತನ ಕಾರ್ಯಕ್ರಮ ಹಾಗೂ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ಬೂತ್ ಮಟ್ಟದ ಏಜೆಂಟ್ (BLA)-2 ಕಾರ್ಯಾಗಾರ ಅತ್ಯಂತ ಯಶಸ್ವಿಯಾಗಿ ನಡೆಯಿತು.
ಪಕ್ಷ ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸುವ ಮತ್ತು ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಉದ್ದೇಶದಿಂದ ಈ ಪ್ರಮುಖ ಸಭೆಯನ್ನು ಆಯೋಜಿಸಲಾಗಿತ್ತು.
ಪಕ್ಷ ಸಂಘಟನೆ ಹಾಗೂ ಮತದಾರರ ಜಾಗೃತಿಗೆ ಆದ್ಯತೆ
ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದ ಮಾಜಿ ಶಾಸಕ ಡಾ. ಕೆ. ಶ್ರೀನಿವಾಸ್ಮೂರ್ತಿ ಅವರು, ಬೂತ್ ಮಟ್ಟದಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಏಜೆಂಟರುಗಳು ಅಲಕ್ಷ್ಯ ಮಾಡದೆ ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಅರ್ಹ ಮತದಾರರನ್ನು ಪಟ್ಟಿಗೆ ಸೇರಿಸುವುದು ಹಾಗೂ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ನೆರವಾಗುವುದು ನಮ್ಮ ಮೊದಲ ಆದ್ಯತೆಯಾಗಬೇಕು ಎಂದು ಕರೆ ನೀಡಿದರು. "ಜನರೊಂದಿಗೆ ಜನತಾದಳ" ಕಾರ್ಯಕ್ರಮದ ಮೂಲಕ ಪ್ರತಿ ಮನೆಗೂ ತಲುಪಿ ಪಕ್ಷದ ಆಶಯಗಳನ್ನು ಬಿತ್ತರಿಸಬೇಕು ಎಂದು ಅವರು ತಿಳಿಸಿದರು.
ಈ ಮಹತ್ವದ ಕಾರ್ಯಾಗಾರದಲ್ಲಿ ತಾಲೂಕಿನ ಪ್ರಮುಖ ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಹಾಗೂ ತಾಲ್ಲೂಕು ಮಟ್ಟದ ವಿವಿಧ ಪದಾಧಿಕಾರಿಗಳು, ಪಕ್ಷದ ಹಿರಿಯ ಮುಖಂಡರು ಹಾಗೂ ಮುಂಚೂಣಿ ನಾಯಕರು, ಕಣೇಗೌಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಬೂತ್ ಮಟ್ಟದ ಏಜೆಂಟರುಗಳು (BLA-2), ಜೆಡಿಎಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಹಾಗೂ ಯುವ ಮುಖಂಡರು ಪಾಲ್ಗೊಂಡಿದ್ದರು.
ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಬಿ.ಎಲ್.ಎ ಗಳಿಗೆ ಮತದಾರರ ಪಟ್ಟಿ ಪರಿಷ್ಕರಣೆಯ ತಾಂತ್ರಿಕ ಹಾಗೂ ಕಾನೂನಾತ್ಮಕ ಅಂಶಗಳ ಕುರಿತು ಸಭೆಯಲ್ಲಿ ಸವಿಸ್ತಾರವಾಗಿ ಮನವರಿಕೆ ಮಾಡಿಕೊಡಲಾಯಿತು.



