ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ನಮ್ಮ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಮನೆ-ಮನೆಗೆ ತೆರಳಿ ಮತದಾರರಿಗೆ ಜಾಗೃತಿ ಮೂಡಿಸಬೇಕು ಹಾಗೂ ಗಣತಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡುವ ಬಗ್ಗೆ ಸಾರ್ವಜನಿಕರಿಗೆ ಸೂಕ್ತ ಮಾಹಿತಿ ನೀಡಬೇಕು ಎಂದು ಜೆಡಿಎಸ್ ರಾಜ್ಯ ವಕ್ತಾರ ರಾಜುಗೌಡ ಹೇಳಿದರು.
ನಗರದ ತ್ರಿಶೂಲ್ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಜೆಡಿಎಸ್ ತಾಲೂಕು ಘಟಕದ ವತಿಯಿಂದ ಆಯೋಜಿಸಿದ್ದ ಹಿರಿಯೂರು ವಿಧಾನಸಭಾ ಕ್ಷೇತ್ರದ ‘ವಿಶೇಷ ಸಮಗ್ರ ಪರಿಷ್ಕರಣೆ ಬಿಎಲ್ಎ-೨’ ಕಾರ್ಯಾಗಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಎಲ್ಲಾ ಬೂತ್ ಮಟ್ಟದಲ್ಲಿ ಎಲ್ಲಾ ವರ್ಗದವರನ್ನು ಒಳಗೊಂಡಂತೆ ಬೂತ್ ಕಮಿಟಿ ರಚನೆ ಮಾಡಿಕೊಳ್ಳಬೇಕು. ಎಸ್ಐಆರ್ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡು, ಕ್ಷೇತ್ರದಲ್ಲಿ ಯಾವುದೇ ಒಬ್ಬ ಅರ್ಹ ಮತದಾರರು ಸಹ ಪಟ್ಟಿಯಿಂದ ಬಿಟ್ಟು ಹೋಗದಂತೆ ಜಾಗ್ರತೆ ವಹಿಸಬೇಕು. ಮತದಾರರ ಜತೆಗೆ ಉತ್ತಮ ಭಾಂಧವ್ಯ ಬೆಳೆಸಿಕೊಳ್ಳುವ ಮೂಲಕ ಪಕ್ಷ ನೀಡಿರುವ ಜವಾಬ್ದಾರಿಯನ್ನು ಅತ್ಯಂತ ನಿಷ್ಠೆಯಿಂದ ನಿಭಾಯಿಸಬೇಕು ಎಂದು ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.
ಉಪಚುನಾವಣೆ ನಮಗೆ ಅಳಿವು-ಉಳಿವಿನ ಪ್ರಶ್ನೆ: ಎಂ.ರವೀಂದ್ರಪ್ಪ
ಬಳಿಕ ಮಾತನಾಡಿದ ಜೆಡಿಎಸ್ ಹಿರಿಯ ಮುಖಂಡ ಎಂ.ರವೀಂದ್ರಪ್ಪ ಅವರು, "ಇದೊಂದು ವಿಶೇಷ ಆಂದೋಲನವಾಗಿದೆ. ಹಿರಿಯೂರು ಕ್ಷೇತ್ರವು ಜೆಡಿಎಸ್ನ ಭದ್ರಕೋಟೆಯಾಗಿದ್ದು, ಆ ನಿಟ್ಟಿನಲ್ಲಿ ಕ್ಷೇತ್ರದ ಪ್ರತಿ ಬೂತ್ನಲ್ಲೂ ಮುಂಬರುವ ಉಪಚುನಾವಣೆಗೆ ಪಕ್ಷವನ್ನು ಬಲವಾಗಿ ಸಂಘಟಿಸಬೇಕಿದೆ. ಜೆಡಿಎಸ್ ಒಂದು ಕುಟುಂಬವಿದ್ದಂತೆ. ನಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿದ್ದರೂ ಅದನ್ನು ಬದಿಗೊತ್ತಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಜನತೆಗೆ ಅರಿವು ಮೂಡಿಸಬೇಕು. ಈ ಉಪಚುನಾವಣೆಯು ನಮಗೆ ಅಳಿವು-ಉಳಿವಿನ ಪ್ರಶ್ನೆಯಾಗಿದೆ" ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಮಂಜುನಾಥ್, ತಾಲೂಕು ಅಧ್ಯಕ್ಷ ಹನುಮತರಾಯಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಶಂಕರ್, ಮಹಿಳಾ ಘಟಕದ ಅಧ್ಯಕ್ಷೆ ರಾಧಮ್ಮ, ಕಾರ್ಯಾಧ್ಯಕ್ಷ ಜಲ್ದಪ್ಪ, ಹಿರಿಯ ಮುಖಂಡರಾದ ಕೆ.ಶಂಕರಮೂರ್ತಿ, ಗುಣಶೇಖರ್, ಪೂಜಾರ್ ತಿಮ್ಮಯ್ಯ, ಗೋವಿಂದರಾಜು ಸೇರಿದಂತೆ ಎಲ್ಲಾ ಬೂತ್ ಏಜೆಂಟರುಗಳು ಹಾಗೂ ಪಕ್ಷದ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.



