ಚಂದ್ರವಳ್ಳಿ ನ್ಯೂಸ್, ಹುಬ್ಬಳ್ಳಿ:
KPSC ನೇಮಕಾತಿ ಅಕ್ರಮದಲ್ಲಿ ರಾಜ್ಯ ಸರ್ಕಾರ ನೇರವಾಗಿ ಭಾಗಿಯಾಗಿದ್ದು, ಆರೋಪಿತ ಐಎಎಸ್ ಅಧಿಕಾರಿ ನಾಪತ್ತೆಯಾಗಿರುವ ಹಿಂದೆ ಸರ್ಕಾರದ ಕೈವಾಡವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಗಂಭೀರ ಆರೋಪ ಮಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಾರಿ ನಿರ್ದೇಶನಾಲಯದ ತನಿಖೆಯಿಂದ ತಪ್ಪಿಸಿಕೊಳ್ಳಲು ಸರ್ಕಾರವೇ ಅಧಿಕಾರಿಗೆ ಆಶ್ರಯ ನೀಡಿದೆ. ರಾಜ್ಯದ ಗುಪ್ತಚರ ಇಲಾಖೆಗೆ ಅಧಿಕಾರಿ ಎಲ್ಲಿದ್ದಾನೆ ಎಂಬ ಮಾಹಿತಿ ಇಲ್ಲವೇ? ಎಂದು ಪ್ರಶ್ನಿಸಿದರು.
ಸಚಿವ ಪ್ರಹ್ಲಾದ ಜೋಶಿ ಅವರ ಪ್ರಮುಖ ಹೇಳಿಕೆಗಳು: ಸರ್ಕಾರಕ್ಕೆ ಕಟು ಪ್ರಶ್ನೆ: "ಬ್ರಹ್ಮಾಂಡ ಹಗರಣದಲ್ಲಿ ಭಾಗಿಯಾದ ಆರೋಪಿಯನ್ನು ಬಂಧಿಸುವುದು ನಿಮ್ಮ ಆದ್ಯತೆಯೋ ಅಥವಾ ಆರ್ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗಿಯಾದವರನ್ನು ಅಮಾನತುಗೊಳಿಸುವುದೋ? ತತ್ವ-ಸಿದ್ಧಾಂತಗಳ ಬಗ್ಗೆ ಮಾತನಾಡುವ ಮುಖ್ಯಮಂತ್ರಿಗಳ ಮಾತಿಗೆ ಬೆಲೆ ಬರಬೇಕಾದರೆ, ಮೊದಲು ನಾಪತ್ತೆಯಾಗಿರುವ ಅಧಿಕಾರಿಯನ್ನು ಪತ್ತೆಹಚ್ಚಿ ಕರೆತರಲಿ" ಎಂದು ಸವಾಲು ಎಸೆದರು.
ದ್ವೇಷದ ರಾಜಕಾರಣ: ಆರ್ಎಸ್ಎಸ್ ಚಟುವಟಿಕೆಯಲ್ಲಿ ಭಾಗವಹಿಸುವುದಕ್ಕೆ ಯಾವುದೇ ನಿರ್ಬಂಧವಿಲ್ಲ. 1970ರಿಂದಲೂ ಸಂಘದ ಕಾರ್ಯಕರ್ತರ ಮೇಲೆ ದಾಖಲಿಸಿದ ಪ್ರಕರಣಗಳನ್ನು ನ್ಯಾಯಾಲಯಗಳು ವಜಾಗೊಳಿಸಿವೆ. ಸರ್ಕಾರ ದ್ವೇಷ ಭಾವನೆಯಿಂದ ವರ್ತಿಸುತ್ತಿದ್ದು, ನ್ಯಾಯಾಲಯದಲ್ಲಿ ಇವರ ಬಣ್ಣ ಬಯಲಾಗಲಿದೆ ಎಂದರು.
ಈರುಳ್ಳಿ ಬೆಲೆ ನಿಯಂತ್ರಣಕ್ಕೆ ಕ್ರಮ: ದೇಶದಲ್ಲಿ ಸುರಿದ ಭಾರಿ ಮಳೆ ಮತ್ತು ಕೆಲವೆಡೆ ಎದುರಾದ ಅಭಾವದಿಂದ ಈರುಳ್ಳಿ ಬೆಲೆ ಏರಿಕೆಯಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರವು 1.20 ಲಕ್ಷ ಟನ್ ಈರುಳ್ಳಿಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿದ್ದು, ಬೆಲೆ ಹೆಚ್ಚಿರುವ ಪ್ರದೇಶಗಳಿಗೆ ಆದ್ಯತೆಯ ಮೇಲೆ ಪೂರೈಸಲಾಗುತ್ತಿದೆ ಎಂದು ತಿಳಿಸಿದರು.
ಬರ ಘೋಷಣೆಗೆ ಆಗ್ರಹ: ಧಾರವಾಡ ಜಿಲ್ಲೆ ಸೇರಿದಂತೆ ರಾಜ್ಯದ ಹಲವೆಡೆ ಮಳೆ ಅಭಾವ ಎದುರಾಗಿದ್ದರೂ, ಸರ್ಕಾರ ಇದುವರೆಗೆ ಒಂದೇ ಒಂದು ತಾಲೂಕನ್ನೂ ಬರಪೀಡಿತ ಎಂದು ಘೋಷಿಸಿಲ್ಲ. ತಕ್ಷಣವೇ ವೈಜ್ಞಾನಿಕ ಅಧ್ಯಯನ ನಡೆಸಿ ಬರ ಪರಿಹಾರ ಘೋಷಿಸಬೇಕು ಎಂದು ಆಗ್ರಹಿಸಿದರು.
ರಾಜ್ಯ ರಾಜಕೀಯದಲ್ಲಿ ಅಸ್ಥಿರತೆ: ಕಾಂಗ್ರೆಸ್ ಸರ್ಕಾರದಲ್ಲಿ ಶಾಸಕರು ಸಚಿವ ಸಂಪುಟದ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಹಿರಿಯ ನಾಯಕರೇ ಸದನಕ್ಕೆ ಗೈರಾಗುತ್ತಿದ್ದು, ರಾಜ್ಯ ಸರ್ಕಾರದಲ್ಲಿ ರಾಜಕೀಯ ಅಸ್ಥಿರತೆ ಪ್ರಾರಂಭವಾಗಿದೆ ಎಂದು ಹೇಳಿದರು.




