Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಗ್ರಾ.ಪಂ   ಭ್ರಷ್ಟಾಚಾರ :ಪಿಡಿಓ ಕೃಷ್ಣ ಮೂರ್ತಿ ಸಸ್ಪೆಂಡ್

Advertisement
Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ಚನ್ನಾದೇವಿ ಅಗ್ರಹಾರ ಗ್ರಾಮ ಪಂಚಾಯಿತಿಯಲ್ಲಿ ಗ್ರಾಮ ಪಂಚಾಯಿತಿ ನಿಧಿ ಹಾಗೂ 15ನೇ ಹಣಕಾಸು ಯೋಜನೆಯ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಓ) ಕೃಷ್ಣಮೂರ್ತಿ ಅವರನ್ನು ಅಮಾನತುಗೊಳಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ವಾಸಂತಿ ಅಮರ್ ಬಿ.ವಿ. ಆದೇಶ ಹೊರಡಿಸಿದ್ದಾರೆ.

ಗ್ರಾಮ ಪಂಚಾಯಿತಿಯಲ್ಲಿ ಸಾಮಗ್ರಿಗಳ ಖರೀದಿ, ಕಾಮಗಾರಿಗಳ ನಿರ್ವಹಣೆ ಮತ್ತು ಅನುದಾನ ಬಳಕೆಯಲ್ಲಿ ಪಂಚಾಯತ್ ರಾಜ್ ಕಾಯ್ದೆ, ಕರ್ನಾಟಕ ಪಾರದರ್ಶಕ ಸಾರ್ವಜನಿಕ ಖರೀದಿ ಕಾಯ್ದೆ (ಕೆಟಿಪಿಪಿ) ಹಾಗೂ ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ತನಿಖೆ ನಡೆಸಿದ್ದರು. ತನಿಖಾ ವರದಿಯಲ್ಲಿ ಹಣದ ದುರುಪಯೋಗ ಮತ್ತು ನಿಯಮ ಉಲ್ಲಂಘನೆ ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ ಅಮಾನತು ಕ್ರಮ ಕೈಗೊಳ್ಳಲಾಗಿದೆ.

ಗ್ರಾಮ ಪಂಚಾಯಿತಿಯ ವಿವಿಧ ಕಾಮಗಾರಿಗಳು ಹಾಗೂ ಸಾಮಗ್ರಿಗಳ ಖರೀದಿಯಲ್ಲಿ ನಿಗದಿತ ಟೆಂಡರ್ ಅಥವಾ ಇ-ಪ್ರೊಕ್ಯೂರ್‌ಮೆಂಟ್ ಪ್ರಕ್ರಿಯೆ ಅನುಸರಿಸಬೇಕಾಗಿದ್ದರೂ, ದರಪಟ್ಟಿಗಳ ಆಧಾರದ ಮೇಲೆ ನೇರ ಖರೀದಿ ನಡೆಸಲಾಗಿದೆ ಎಂದು ತನಿಖೆಯಲ್ಲಿ ಪತ್ತೆಯಾಗಿದೆ.

ರೂ.1ಲಕ್ಷಕ್ಕಿಂತ ಹೆಚ್ಚಿನ ಮೊತ್ತದ ಖರೀದಿಗಳನ್ನು ಟೆಂಡರ್ ಅಥವಾ ಇ-ಪ್ರೊಕ್ಯೂರ್‌ಮೆಂಟ್ ಮೂಲಕವೇ ನಡೆಸಬೇಕೆಂಬ ಕೆಟಿಪಿಪಿ ನಿಯಮಗಳಿದ್ದರೂ ಅವುಗಳನ್ನು ಪಾಲಿಸದೆ ಪಾವತಿಗಳನ್ನು ಮಾಡಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇದೇ ಸಂದರ್ಭದಲ್ಲಿ ಒಂದೇ ದಿನ ಐದು ಚೆಕ್‌ಗಳ ಮೂಲಕ ಪಾವತಿಗಳನ್ನು ಮಾಡಿರುವುದು ಹಾಗೂ ಖರೀದಿ ಪ್ರಕ್ರಿಯೆಯಲ್ಲಿ ಅಗತ್ಯ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸದಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ತನಿಖಾ ವರದಿ ಪ್ರಕಾರ ಸಾಮಗ್ರಿ ಖರೀದಿಗಳು ಮತ್ತು ಕಾಮಗಾರಿಗಳಲ್ಲಿ ನಿಯಮ ಉಲ್ಲಂಘನೆ ನಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.

* ಬೀದಿ ದೀಪಗಳ ಸಾಮಗ್ರಿಗಳ ಖರೀದಿ
* ಕಂಪ್ಯೂಟರ್ ಮತ್ತು ಪ್ರಿಂಟರ್ ಖರೀದಿ
* ಆಂಟಿವೈರಸ್ ಹಾಗೂ ಸರ್ವೀಸ್ ಚಾರ್ಜ್ ಪಾವತಿ
* ಕುಡಿಯುವ ನೀರಿನ ಪಂಪ್ ಮೋಟಾರ್ ಮತ್ತು ಬೋರ್‌ವೆಲ್ ದುರಸ್ತಿ
* ಗ್ರಾಮ ಪಂಚಾಯಿತಿ ಕಚೇರಿಯ ಅಲ್ಯೂಮಿನಿಯಂ ಪಾರ್ಟಿಷನ್ ಕಾಮಗಾರಿ

ಈ ಎಲ್ಲಾ ಕೆಲಸಗಳಿಗೆ ಇ-ಪ್ರೊಕ್ಯೂರ್‌ಮೆಂಟ್ ಪ್ರಕ್ರಿಯೆ ಅನುಸರಿಸದೆ ದರಪಟ್ಟಿಗಳ ಆಧಾರದ ಮೇಲೆ ನಿಯಮಬಾಹಿರವಾಗಿ ಸಾಮಗ್ರಿ ಖರೀದಿಸಲಾಗಿದೆ ಎಂದು ತನಿಖೆಯಲ್ಲಿ ಉಲ್ಲೇಖಿಸಲಾಗಿದೆ.

*ಬಿಲ್ ವಿಭಜಿಸಿ ಪಾವತಿ ಆರೋಪ* ಒಂದೇ ಸಂಸ್ಥೆಯ ಹೆಸರಿನಲ್ಲಿ ನೀಡಬೇಕಿದ್ದ ಬಿಲ್‌ಗಳನ್ನು ವಿಭಜಿಸಿ ಪಾವತಿಗಳನ್ನು ಮಾಡಲಾಗಿದೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ.

ಇದರಿಂದ ಸರ್ಕಾರಿ ಖರೀದಿ ನಿಯಮಗಳನ್ನು ಉಲ್ಲಂಘಿಸಿ ಪಾವತಿಗಳನ್ನು ಹಂತ ಹಂತವಾಗಿ ನಡೆಸಲಾಗಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಖರೀದಿ ಸಂಬಂಧಿತ ಬಿಲ್ ಹಾಗೂ ವೋಚರ್‌ಗಳಲ್ಲಿ ಟಿಡಿಎಸ್ ಕಡಿತಗೊಳಿಸದೇ ಪಾವತಿಗಳನ್ನು ಮಾಡಿರುವುದೂ ಅಧಿಕಾರಿಗಳ ಗಮನಕ್ಕೆ ಬಂದಿದೆ.

*ಜಿಪಿಎಸ್ ಭಾವಚಿತ್ರಗಳ ಕೊರತೆ* ಗ್ರಾಮ ಪಂಚಾಯಿತಿಯಲ್ಲಿ ನಡೆದ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಸ್ಥಳದಲ್ಲಿಯೇ ಕಾಮಗಾರಿ ನಡೆದಿರುವುದನ್ನು ದೃಢೀಕರಿಸುವ ಜಿಪಿಎಸ್ ಆಧಾರಿತ ಭಾವಚಿತ್ರಗಳು ಹಾಗೂ ಪುರಾವೆ ದಾಖಲೆಗಳನ್ನು ಸಲ್ಲಿಸಬೇಕಾಗಿತ್ತು.

ಆದರೆ ಕಾಮಗಾರಿಗಳ ಅನುಷ್ಠಾನಕ್ಕೆ ಸಂಬಂಧಿಸಿದ ಸಮರ್ಪಕ ಜಿಪಿಎಸ್ ಭಾವಚಿತ್ರಗಳನ್ನು ಲಗತ್ತಿಸದಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ.

ಸರ್ಕಾರದ ಮಾರ್ಗಸೂಚಿಗಳು ಮತ್ತು ಸುತ್ತೋಲೆಗಳನ್ನು ಪಾಲಿಸದಿರುವುದು ಕರ್ತವ್ಯ ನಿರ್ಲಕ್ಷ್ಯತೆ ಮತ್ತು ಅಧಿಕಾರ ದುರುಪಯೋಗಕ್ಕೆ ಕಾರಣವಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ 

ಈ ಸಂಬಂಧ ಪಿಡಿಓ ಕೃಷ್ಣಮೂರ್ತಿ ಅವರಿಗೆ ನೋಟಿಸ್ ಜಾರಿ ಮಾಡಿ ಸಮಜಾಯಿಷಿ ಕೇಳಲಾಗಿತ್ತು. ಅವರು ಸಲ್ಲಿಸಿದ ಉತ್ತರ ಮತ್ತು ದಾಖಲೆಗಳನ್ನು ಪರಿಶೀಲಿಸಿದ ನಂತರ ನೀಡಿದ ಸಮಜಾಯಿಷಿ ಸಮಂಜಸವಾಗಿಲ್ಲ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ .

ಇದರಿಂದ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟಾಗಿರುವ ಸಾಧ್ಯತೆ ಇದೆ ಎಂದು ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ.

 *ಸರ್ಕಾರಿ ಸೇವಾ ನಿಯಮ ಉಲ್ಲಂಘನೆ* ಕರ್ನಾಟಕ ಸರ್ಕಾರಿ ಸೇವಾ (ನಡತೆ) ನಿಯಮಾವಳಿ-2021ರ ನಿಯಮಗಳನ್ನು ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆ ಕಾಯ್ದಿರಿಸಿ ಪಿಡಿಓ ಕೃಷ್ಣಮೂರ್ತಿ ರವರನ್ನು ಅಮಾನತು ಮಾಡಿ 
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ವಾಸಂತಿ ಅಮರ್ ಬಿ.ವಿ. ಅವರು ಕರ್ನಾಟಕ ಸರ್ಕಾರಿ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳ ಅಡಿಯಲ್ಲಿ  ಆದೇಶ ಹೊರಡಿಸಿದ್ದಾರೆ.

ಅಮಾನತು ಅವಧಿಯಲ್ಲಿ ಕೇಂದ್ರ ಸ್ಥಾನ ನಿಗದಿ* ಅಮಾನತು ಅವಧಿಯಲ್ಲಿ ಪಿಡಿಓ ಕೃಷ್ಣಮೂರ್ತಿ ಅವರ ಕೇಂದ್ರ ಸ್ಥಾನವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಯಾಗಿ ನಿಗದಿಪಡಿಸಲಾಗಿದೆ.

ಅಲ್ಲದೆ ಇಲಾಖೆಯ ಪೂರ್ವಾನುಮತಿ ಪಡೆಯದೇ ಕೇಂದ್ರ ಸ್ಥಾನವನ್ನು ತೊರೆಯಬಾರದು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.