ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಹಾಡೋನಹಳ್ಳಿ ಗ್ರಾಮ ಪಂಚಾಯಿತಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವಾಸಂತಿ ಅಮರ್ ಬಿ ವಿ ಅವರು ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಆಡಳಿತಾತ್ಮಕ ಕಾರ್ಯಗಳ ಪರಿಶೀಲನೆ ನಡೆಸಿದರು.
ಹಾಡೋನಹಳ್ಳಿ ಗ್ರಾಮದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಗುಲಾಬಿ ತೋಟಕ್ಕೆ ಭೇಟಿ ನೀಡಿ ರೈತ ಸಮಾಲೋಚಿಸಿದರು. ನರೇಗಾ ಸಂಬಂಧಿಸಿದ ಕಡತಗಳನ್ನು ಪರಿಶೀಲಿಸಿದ ಅವರು, ಯೋಜನೆಯ ಮಾರ್ಗಸೂಚಿಗಳು ಹಾಗೂ ಚೆಕ್ಲಿಸ್ಟ್ ಪ್ರಕಾರ ದಾಖಲೆಗಳನ್ನು ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಳಿಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೆರಮಗೊಂಡನಹಳ್ಳಿ ಶಾಲಾ ಶೌಚಾಲಯ, ಕಾಂಪೌಂಡ್, ದನ ಶೆಡ್ ನರೇಗಾ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿ, ಕಾಮಗಾರಿಗಳನ್ನು ನಿಯಮಾನುಸಾರ ಅನುಷ್ಠಾನಗೊಳಿಸಿ ಗುಣಮಟ್ಟ ಕಾಪಾಡಿಕೊಳ್ಳುವಂತೆ ನಿರ್ದೇಶನ ನೀಡಿದರು.
ಇದೇ ವೇಳೆ ಗ್ರಾಮ ಪಂಚಾಯಿತಿಯಲ್ಲಿ ಕಂದಾಯ ವಸೂಲಾತಿ ಪ್ರಗತಿ ಕುರಿತು ಮಾಹಿತಿ ಪಡೆದ ಸಿಇಒ ಅವರು, ಸಿಬ್ಬಂದಿ ಹಾಜರಾತಿಯನ್ನು ಪರಿಶೀಲಿಸಿ ಪಿಡಿಒ ಹಾಗೂ ಸಿಬ್ಬಂದಿ ಸರಿಯಾದ ಸಮಯಕ್ಕೆ ಕರ್ತವ್ಯಕ್ಕೆ ಹಾಜರಾಗಿ ಸಾರ್ವಜನಿಕರೊಂದಿಗೆ ಉತ್ತಮ ಒಡನಾಟ ಹೊಂದಿರಬೇಕು. ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ತಿಳಿಸಿದರು.ಇದೆ ವೇಳೆ ಸಾರ್ವಜನಿಕರು ಗ್ರಾಮಗಳ ಮೂಲಭೂತ ಸೌಕರ್ಯಗಳ ಕೊರತೆಗಳ ಬಗ್ಗೆ ಮನವಿ ನೀಡಿ ತೊಂದರೆಗಳ ಬಗ್ಗೆ ಸಿಇಒ ಗಮನ ಸೆಳೆದರು.
ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಿ ಸಮಸ್ಯೆಗಳ ಕುಡಿಯುವ ನೀರು, ರಸ್ತೆ, ವಸತಿ ಯೋಜನೆ, ಪಿಂಚಣಿ, ಉದ್ಯೋಗ ಖಾತ್ರಿ ಹಾಗೂ ಮೂಲಸೌಕರ್ಯಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಸ್ವೀಕರಿಸಿ, ಸಮಸ್ಯೆಗಳನ್ನು ಆಲಿಸಿದ ನಂತರ, ಸಂಬಂಧಪಟ್ಟ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸಿಇಒ ಗ್ರಾಮ ಪಂಚಾಯಿತಿಯಲ್ಲಿ ಜಲ ಜೀವನ್ಮಿಷನ್ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸಿ ಎಂದು ಪಂಚಾಯಿತಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಹಾಡೋನಹಳ್ಳಿ ಪಿಡಿಒ, ಗ್ರಾಮ ಪಂಚಾಯಿತಿ ಸಿಬ್ಬಂದಿ, ನರೇಗಾ ಸಿಬ್ಬಂದಿಗಳು ಉಪಸ್ಥಿತರಿದ್ದರು.



