ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ತಾಲ್ಲೂಕಿನ ಹೊಸಯಳನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಸವನಹಳ್ಳಿ ಗ್ರಾಮದಲ್ಲಿ ನಿರ್ಮಿಸಲಾಗಿರುವ ಮೂರು ಮಿನಿ ಹೈಮಾಸ್ಕ್ ವಿದ್ಯುತ್ ದೀಪಗಳು ಕಳೆದ ಎರಡು ವರ್ಷಗಳಿಂದ ಕೆಟ್ಟುನಿಂತಿದ್ದು, ಕೂಡಲೇ ಅವುಗಳನ್ನು ದುರಸ್ತಿಗೊಳಿಸಿ ಬೆಳಕಿನ ವ್ಯವಸ್ಥೆ ಕಲ್ಪಿಸಬೇಕೆಂದು ಸಾಮಾಜಿಕ ಕಾರ್ಯಕರ್ತ ಕಸವನಹಳ್ಳಿ ರಾಮಚಂದ್ರ ಒತ್ತಾಯಿಸಿದ್ದಾರೆ.
ಈ ಕುರಿತು ಕಳವಳ ವ್ಯಕ್ತಪಡಿಸಿರುವ ಅವರು, "ಗ್ರಾಮದಲ್ಲಿ ರಾತ್ರಿ ವೇಳೆ ಕತ್ತಲು ಆವರಿಸುತ್ತಿದ್ದು, ಸಾರ್ವಜನಿಕರ ಓಡಾಟಕ್ಕೆ ತೀವ್ರ ತೊಂದರೆಯಾಗಿದೆ. ಪ್ರಸ್ತುತ ಮಳೆಗಾಲದ ಶೀತ ವಾತಾವರಣವಿರುವುದರಿಂದ ರಾತ್ರಿ ವೇಳೆ ಹಾವು, ಚೇಳು ಹಾಗೂ ವಿಷಜಂತುಗಳ ಭಯ ಹೆಚ್ಚಾಗಿದೆ. ಇದರಿಂದಾಗಿ ಚಿಕ್ಕ ಮಕ್ಕಳು ಮತ್ತು ವಯೋವೃದ್ಧರು ಹೊರಬರಲು ಭಯಪಡುವ ವಾತಾವರಣ ನಿರ್ಮಾಣವಾಗಿದೆ" ಎಂದು ಅಳಲು ತೋಡಿಕೊಂಡರು.
"ಒಂದೊಂದು ಮಿನಿ ಹೈಮಾಸ್ಕ್ ದೀಪಕ್ಕೆ ತಲಾ ₹2 ಲಕ್ಷದಂತೆ ಒಟ್ಟು ₹6 ಲಕ್ಷ ವೆಚ್ಚ ಮಾಡಿ ದೀಪಗಳನ್ನು ಅಳವಡಿಸಿದ್ದರೂ ಕಣ್ಣಿದ್ದು ಕುರುಡನಂತಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಅಧಿಕಾರಿಗಳು ತಕ್ಷಣ ಸ್ಪಂದಿಸಿ ಒಂದೆರಡು ದಿನಗಳಲ್ಲಿ ದೀಪಗಳನ್ನು ಸರಿಪಡಿಸಬೇಕು. ಇಲ್ಲವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲಾಗುವುದು," ಎಂದು ರಾಮಚಂದ್ರ ಎಚ್ಚರಿಸಿದ್ದಾರೆ.



