ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ವಿಧಾನ ಪರಿಷತ್ ಸದಸ್ಯರು ಹಾಗೂ ಕಿತ್ತೂರು-ಕಲ್ಯಾಣ ಕರ್ನಾಟಕ ಭಾಗದ ಹಿರಿಯ ಅನುಭವಿ ರಾಜಕಾರಣಿಯಾದ ಸಲೀಂ ಅಹಮ್ಮದ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಸಲೀಂ ಅಹಮದ್ ಅಭಿಮಾನಿ, ಕಾಂಗ್ರೆಸ್ ಮುಖಂಡ ಖಾಲೀದ್ ಹುಸೇನ್ ತೀವ್ರವಾಗಿ ಒತ್ತಾಯಿಸಿದ್ದಾರೆ.
ತಾಲೂಕಿನ ಜವನಗೊಂಡನಹಳ್ಳಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಖಾಲೀದ್ ಹುಸೇನ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಒಕ್ಕೊರಲಿನಿಂದ ಈ ಆಗ್ರಹ ಮಂಡಿಸಿದರು.
ಸರಳ, ಸಜ್ಜನಿಕೆಯ ಸರ್ವಧರ್ಮಗಳ ನಾಯಕ:
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಖಾಲೀದ್ ಹುಸೇನ್, "ಸಲೀಂ ಅಹಮದ್ ಅವರು ಹಿರಿಯ ಮತ್ತು ಅತ್ಯಂತ ಅನುಭವಿ ರಾಜಕಾರಣಿಯಾಗಿದ್ದಾರೆ. ಪ್ರಸ್ತುತ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ಹಾಗೂ ವಿಧಾನ ಪರಿಷತ್ ಮುಖ್ಯ ಸಚೇತಕರಾಗಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ಕೇವಲ ರಾಜ್ಯ ಮಟ್ಟದಲ್ಲಷ್ಟೇ ಅಲ್ಲದೆ, ರಾಷ್ಟ್ರೀಯ ಮಟ್ಟದ ನಾಯಕರೊಂದಿಗೂ ಉತ್ತಮ ಒಡನಾಟ ಹೊಂದಿದ್ದಾರೆ. ಇಂತಹ ಪ್ರಭಾವಿ ನಾಯಕರಿಗೆ ಸಚಿವ ಸ್ಥಾನ ನೀಡುವುದರಿಂದ ಪಕ್ಷಕ್ಕೆ ಆನೆಬಲ ಬರಲಿದೆ" ಎಂದರು.
ಮುಂದುವರಿದು ಮಾತನಾಡಿದ ಅವರು, "ಸಲೀಂ ಅಹಮದ್ ಅವರು ಕೇವಲ ಒಂದು ಸಮುದಾಯಕ್ಕೆ ಸೀಮಿತವಾದ ನಾಯಕರಲ್ಲ. ಅವರು ಸರ್ವಧರ್ಮಗಳನ್ನೂ ಸಮಾನವಾಗಿ ಕಾಣುವ ಸರಳ, ಸಜ್ಜನಿಕೆಯ ವ್ಯಕ್ತಿತ್ವದ ನಾಯಕರಾಗಿದ್ದಾರೆ. ಚಿತ್ರದುರ್ಗ, ತುಮಕೂರು ಮತ್ತು ದಾವಣಗೆರೆ ಜಿಲ್ಲೆಗಳಲ್ಲೂ ಅವರು ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದು, ಇದು ಮುಂದಿನ ಚುನಾವಣೆಗಳಲ್ಲಿ ಪಕ್ಷದ ಸಂಘಟನೆಗೆ ದೊಡ್ಡ ಮಟ್ಟದಲ್ಲಿ ಸಹಕಾರಿಯಾಗಲಿದೆ" ಎಂದು ತಿಳಿಸಿದರು.
ಕಡೆಗಣಿಸಿದರೆ ಪಕ್ಷಕ್ಕೆ ಹಿನ್ನಡೆಯ ಆತಂಕ:
"ಕಲ್ಯಾಣ ಹಾಗೂ ಕಿತ್ತೂರು ಕರ್ನಾಟಕ ಭಾಗದಲ್ಲಿ ಸೂಫಿ ಸಂತರ ಬೃಹತ್ ಸಮಾವೇಶಗಳನ್ನು ಯಶಸ್ವಿಯಾಗಿ ಏರ್ಪಡಿಸುವ ಮೂಲಕ ಎಲ್ಲ ಸಮುದಾಯಗಳನ್ನು ಒಟ್ಟಾಗಿ ಕೊಂಡೊಯ್ಯುವ ಕೆಲಸವನ್ನು ಸಲೀಂ ಅಹಮದ್ ಮಾಡುತ್ತಿದ್ದಾರೆ. ಕುವೆಂಪು ಅವರ ಆಶಯದಂತೆ ‘ಸರ್ವಜನಾಂಗದ ಶಾಂತಿಯ ತೋಟ’ದ ಪರಿಕಲ್ಪನೆಯಲ್ಲಿ ಮುನ್ನಡೆಯುತ್ತಿರುವ ಇಂತಹ ಹಿರಿಯ ನಾಯಕನನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವುದು ಅತ್ಯಗತ್ಯ. ಒಂದು ವೇಳೆ ಪಕ್ಷ ಇವರನ್ನು ಕಡೆಗಣಿಸಿದರೆ ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ಗೆ ಹಿನ್ನಡೆ ಉಂಟಾಗುವ ಸಾಧ್ಯತೆಯಿದೆ. ಹಾಗಾಗಿ ಹೈಕಮಾಂಡ್ ಹಾಗೂ ರಾಜ್ಯ ನಾಯಕರು ಇವರ ಹೆಸರನ್ನು ಸಚಿವ ಸ್ಥಾನಕ್ಕೆ ಪರಿಗಣಿಸಬೇಕು" ಎಂದು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜವನಗೊಂಡನಹಳ್ಳಿ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ತಿಮ್ಮರಾಯಪ್ಪ, ಪ್ರಮುಖ ಮುಖಂಡರಾದ ಗುರುಮೂರ್ತಿ, ಪುಟ್ಟರಾಜ್, ಮೊಹಮದ್ ನಾಯಿದ್, ಸಾಜೀದ್ ಖಾನ್, ರಹಮತ್ ಹುಲ್ಲಾ, ಇಸರ್ ಬಾಷ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.



