ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಹಿರಿಯೂರು ನಗರದ ಪ್ರಮುಖ ರಸ್ತೆಗಳಲ್ಲಿ ಸಮರ್ಪಕ ಬೀದಿ ದೀಪಗಳ ವ್ಯವಸ್ಥೆ ಇಲ್ಲದೆ ರಾತ್ರಿ ವೇಳೆಯಲ್ಲಿ ಸಾರ್ವಜನಿಕರು, ಮಹಿಳೆಯರು ಹಾಗೂ ವಿದ್ಯಾರ್ಥಿಗಳು ತೀವ್ರ ಭಯದ ವಾತಾವರಣದಲ್ಲಿ ಸಂಚರಿಸುವಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಎಚ್ಚೆತ್ತುಕೊಂಡು ಬೀದಿ ದೀಪಗಳನ್ನು ಅಳವಡಿಸದಿದ್ದರೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಒಂದೇ ಮಾತರಂ ಜಾಗೃತಿ ವೇದಿಕೆಯ ರಾಜ್ಯ ಘಟಕದ ಸಂಘಟನಾ ಕಾರ್ಯದರ್ಶಿ ಕೊಟ್ರೇಶ್ ಎಚ್ಚರಿಸಿದ್ದಾರೆ.
ಸರ್ವಿಸ್ ರಸ್ತೆಯಲ್ಲಿ ಕತ್ತಲೆಯ ಸಾಮ್ರಾಜ್ಯ: ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಬಬ್ಬೂರು ಮಾರ್ಗದ ಸರ್ವಿಸ್ ರಸ್ತೆಯಲ್ಲಿ ವಿದ್ಯುತ್ ದೀಪಗಳಿಲ್ಲದೆ ರಾತ್ರಿ ವೇಳೆ ಸಂಚಾರ ಸಂಪೂರ್ಣ ದುಸ್ತರವಾಗಿದೆ. ಕತ್ತಲಿನ ಲಾಭ ಪಡೆದು ಅಪಘಾತಗಳು ಹಾಗೂ ಕಳ್ಳತನದಂತಹ ಕೃತ್ಯಗಳು ಹೆಚ್ಚಾಗುತ್ತಿವೆ. ರಸ್ತೆಯಲ್ಲಿ ಸಂಚರಿಸಲು ಮಹಿಳೆಯರು, ವಿದ್ಯಾರ್ಥಿನಿಯರು ಹಾಗೂ ವಾಹನ ಸವಾರರು ಪ್ರತಿದಿನ ಅಂಜುತ್ತಲೇ ಕಾಲ ಕಳೆಯುವಂತಾಗಿದೆ.

ಎಪಿಎಂಸಿ ಮತ್ತು ಆಸ್ಪತ್ರೆ ರಸ್ತೆಯಲ್ಲೂ ಅದೇ ಕಥೆ: ನಗರದ ಅಬಕಾರಿ ಇಲಾಖೆಯಿಂದ ಎಪಿಎಂಸಿ ಮಾರ್ಕೆಟ್ವರೆಗೆ ಹಾಗೂ ಸಾರ್ವಜನಿಕ ಆಸ್ಪತ್ರೆಯಿಂದ ಬಸ್ ನಿಲ್ದಾಣದವರೆಗಿನ ಮುಖ್ಯ ರಸ್ತೆಯಲ್ಲೂ ಬೀದಿ ದೀಪಗಳಿಲ್ಲದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ರಸ್ತೆಯಲ್ಲಿ ಪ್ರತಿದಿನ ಸಾವಿರಾರು ಸಾರ್ವಜನಿಕರು, ವ್ಯಾಪಾರಸ್ಥರು, ಹಿರಿಯ ನಾಗರಿಕರು ಮತ್ತು ರೈತರು ಸಂಚರಿಸುತ್ತಾರೆ. ವಿಶೇಷವಾಗಿ ಎಪಿಎಂಸಿ ಮಾರುಕಟ್ಟೆಗೆ ಬೆಳಗಿನ ಜಾವ ಹಾಗೂ ರಾತ್ರಿ ವೇಳೆಯಲ್ಲಿ ಆಗಮಿಸುವ ರೈತರಿಗೆ ಮತ್ತು ವ್ಯಾಪಾರಿಗಳಿಗೆ ಕತ್ತಲೆಯಿಂದಾಗಿ ತೀವ್ರ ತೊಂದರೆಯಾಗುತ್ತಿದೆ.
ಅಧಿಕಾರಿಗಳಿಗೆ ಎಚ್ಚರಿಕೆ: ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ, ಹಿರಿಯೂರು ನಗರಸಭೆ, ಬೆಸ್ಕಾಂ ಹಾಗೂ ಜಿಲ್ಲಾಡಳಿತ ಈ ಸಮಸ್ಯೆಯನ್ನು ತಕ್ಷಣವೇ ಗಂಭೀರವಾಗಿ ಪರಿಗಣಿಸಬೇಕು. ಅಬಕಾರಿ ಇಲಾಖೆಯಿಂದ ಎಪಿಎಂಸಿ ಮಾರ್ಕೆಟ್ವರೆಗಿನ ರಸ್ತೆಯಲ್ಲಿ ಹೊಸ ಎಲ್ಇಡಿ (LED) ಬೀದಿ ದೀಪಗಳನ್ನು ಶೀಘ್ರವಾಗಿ ಅಳವಡಿಸಿ ಸುರಕ್ಷಿತ ಸಂಚಾರಕ್ಕೆ ಅನುವು ಮಾಡಿಕೊಡಬೇಕು.
ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿ ತಕ್ಷಣ ಕ್ರಮ ಕೈಗೊಳ್ಳದಿದ್ದಲ್ಲಿ, ಮುಂದಿನ ದಿನಗಳಲ್ಲಿ ಸಾರ್ವಜನಿಕರು ಹಾಗೂ ಒಂದೇ ಮಾತರಂ ಜಾಗೃತಿ ವೇದಿಕೆಯ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಸಂಘಟನೆ ಎಚ್ಚರಿಸಿದೆ.



