ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯದ ಪರೀಕ್ಷೆಯಲ್ಲಿ ಹಲವು ರ್ಯಾoಕ್ ಪಡೆದು ಉತ್ತಮ ಸಾಧನೆ ಮಾಡಿದ್ದಾರೆ. ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸರ್ಕಾರಿ ಪದವಿ ಕಾಲೇಜಿನ ಹಳೆಯ ವಿದ್ಯಾರ್ಥಿ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಳ್ಳಲಾಗಿತ್ತು.
ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯದಲ್ಲಿ ಎಂ. ಎ. ಇತಿಹಾಸ ವಿಭಾಗದಲ್ಲಿ ವಿದ್ಯಾರ್ಥಿಗಳಾದ ಅರುಣ್ ಕುಮಾರ್.ಕೆ.ಎಂ 3ನೆಯ ರ್ರ್ಯಾಂಕ್ , ಸೌಮ್ಯ.ಬಿ, ನಾಲ್ಕನೆ ರ್ರ್ಯಾಂಕ್, ಲಕ್ಷ್ಮಿ. ಆರ್. ಜಿ.ಐದನೆ ರ್ರ್ಯಾಂಕ್ ಮತ್ತು ಎಂ. ಎ. ರಾಜ್ಯ ಶಾಸ್ತ್ರ ವಿಭಾಗದಲ್ಲಿ ನಾಗಭೂಷಣ ನಾಲ್ಕನೇಯ ರ್ರ್ಯಾಂಕ್ ಪಡೆದು ಸಾಧನೆ ಮಾಡಿದ್ದಾರೆ.
ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ ತಾಲೂಕು ಜೆಡಿಎಸ್ ಅಧ್ಯಕ್ಷ ಎಸ್. ಎಂ.ಹರೀಶ್ ಗೌಡ ಮಾತನಾಡಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಮೂಲಸೌಕರ್ಯಗಳ ಕೊರತೆ, ಸಾರಿಗೆ ಸಮಸ್ಯೆ, ಆರ್ಥಿಕ ಸಮಸ್ಯೆ ಇಂತಹ ಸವಾಲುಗಳನ್ನು ಮೆಟ್ಟಿನಿಂತು ಸರ್ಕಾರಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡಿ ಉನ್ನತ ಸಾಧನೆ ಮಾಡಿರುವುದು ಹೆಮ್ಮೆಯ ವಿಷಯ. ಸರ್ಕಾರಿ ಕಾಲೇಜುಗಳು ಖಾಸಗಿ ಕಾಲೇಜುಗಳಿಗಿಂತ ಕಡಿಮೆ ಇಲ್ಲ ಎಂಬುದು ಸಾದಿಸಿ ತೋರಿಸಿದ್ದಾರೆ.
ತಮ್ಮ ಸರ್ಕಾರಿ ಶಾಲೆ ಕಾಲೇಜು ಗಳಲ್ಲಿ ವಿದ್ಯಾಭ್ಯಾಸ ಮಾಡಿದ ದಿನಗಳನ್ನು ನೆನಪಿಸಿಕೊಂಡು ಈ ವಿದ್ಯಾರ್ಥಿಗಳು ಮುಂದೆ ಉನ್ನತ ಹುದ್ದೆಗಳನ್ನು ಅಲಂಕರಿಸಿ ಸಮಾಜಕ್ಕೆ ಸೇವೆ ಸಲ್ಲಿಸಲಿ ಹಾಗು ಸರ್ಕಾರಿ ಸೇವೆ ಸಲ್ಲಿಸಲಿ ಎಂದು ಶುಭಹಾರೈಸಿದರು.
ಈ ಸಂಧರ್ಭದಲ್ಲಿ ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರು ಪ್ರವೀಣ್ ಕುಮಾರ್ ರವರು ಮಾತನಾಡಿ ನಮ್ಮ ಸಂಘವು ಹಲವು ವರ್ಷಗಳಿಂದ ಕಾಲೇಜಿನ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಎಲ್ಲಾ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳನ್ನ ಗುರ್ತಿಸಿ ಅವರಿಗೆ ಪ್ರೋತ್ಸಾಹ ನೀಡಿ ಬೆನ್ನು ತಟ್ಟುವ ಕೆಲಸ ಮಾಡುತ್ತಾ ಬಂದಿದೆ. ತಾವುಗಳು ಇದರ ಸದುಪಯೋಗ ಪಡೆದು ಕೊಂಡು ಸಮಾಜಕ್ಕೆ ಹಾಗೂ ತಾವು ವ್ಯಾಸಂಗ ಮಾಡಿದ ಕಾಲೇಜಿಗೆ ಉತ್ತಮ ಕೀರ್ತಿ ತರಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಹರೀಶ್ ಗೌಡರು ಆರ್ಥಿಕ ಸಹಕಾರ ನೀಡಿ ಗೌರವಿಸಿದರು.
ಈ ಸಂಧರ್ಭದಲ್ಲಿ ಕಾಲೇಜಿನ ಪ್ರಾoಶುಪಾಲ ಡೊರೀನ್ ಸ್ನೇಹಲತಾ ಕೋಟ್ಯಾನ್,ಅಧ್ಯಾಪಕ ಶ್ರೀನಿವಾಸ್, ಸಂಘದ ಖಜಾಂಚಿ ಮಹೇಶ್, ಸಂಘಟನಾ ಕಾರ್ಯದರ್ಶಿ ಮಂಜುನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.



