ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಮುಂಬರುವ ಹಿರಿಯೂರು ವಿಧಾನಸಭಾ ಉಪಚುನಾವಣೆಯ ಟಿಕೆಟ್ ಹಂಚಿಕೆ ಕುರಿತಂತೆ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಶಶಿಕಲಾ ಸುರೇಶ್ಬಾಬು ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದು, "ಸಚಿವ ಡಿ.ಸುಧಾಕರ್ ಅವರ ಕುಟುಂಬಕ್ಕೆ ಟಿಕೆಟ್ ತಪ್ಪಿದಲ್ಲಿ, ನಾನೂ ಸಹ ಕಾಂಗ್ರೆಸ್ ಪಕ್ಷದ ಪ್ರಬಲ ಆಕಾಂಕ್ಷಿಯಾಗಿ ಕಣಕ್ಕಿಳಿಯಲಿದ್ದೇನೆ" ಎಂದು ಪ್ರಕಟಿಸಿದ್ದಾರೆ.
ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡುವ ಮೂಲಕ ತಂಡದೊಂದಿಗೆ ಅವರು ಈ ಪ್ರಮುಖ ಮಾಹಿತಿ ಹಂಚಿಕೊಂಡಿದ್ದಾರೆ.
ಸುಧಾಕರ್ ಕುಟುಂಬಕ್ಕೆ ಮೊದಲ ಆದ್ಯತೆ
ತಮ್ಮ ಹೇಳಿಕೆಯಲ್ಲಿ ಗೊಂದಲಗಳಿಗೆ ತೆರೆ ಎಳೆದಿರುವ ಶಶಿಕಲಾ ಸುರೇಶ್ಬಾಬು, "ನಾವು ಸಚಿವ ಡಿ.ಸುಧಾಕರ್ ಅವರ ಕುಟುಂಬವನ್ನು ನಮ್ಮದೇ ಕುಟುಂಬ ಎಂದು ಭಾವಿಸಿದ್ದೇವೆ. ಒಂದು ವೇಳೆ ಹಿರಿಯೂರು ಕ್ಷೇತ್ರದ ಟಿಕೆಟ್ ಡಿ.ಸುಧಾಕರ್ ಅವರ ಕುಟುಂಬದ ಸದಸ್ಯರಿಗೆ ದೊರೆತರೆ, ನಾವೆಲ್ಲರೂ ಒಗ್ಗಟ್ಟಾಗಿ ಅವರ ಬೆನ್ನಿಗೆ ನಿಲ್ಲುತ್ತೇವೆ. ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಒಟ್ಟಾಗಿ ಅವರ ಗೆಲುವಿಗಾಗಿ ಪ್ರಾಮಾಣಿಕವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದೇವೆ. ಇದರಲ್ಲಿ ಸಾರ್ವಜನಿಕರಿಗೆ ಯಾವುದೇ ಗೊಂದಲ ಬೇಡ" ಎಂದು ಸ್ಪಷ್ಟಪಡಿಸಿದರು.
ಪರ್ಯಾಯವಾಗಿ ಕಣಕ್ಕಿಳಿಯುವ ನಿರ್ಧಾರ
"ಒಂದು ವೇಳೆ ಯಾವುದೇ ಕಾರಣಕ್ಕಾದರೂ ಡಿ.ಸುಧಾಕರ್ ಅವರ ಕುಟುಂಬಕ್ಕೆ ಟಿಕೆಟ್ ಕೈತಪ್ಪಿದರೆ, ಕ್ಷೇತ್ರದ ಜನರ ಸೇವೆ ಮಾಡಿರುವ ನನಗೂ ಟಿಕೆಟ್ ಪಡೆಯುವ ಹಕ್ಕಿದೆ. ಅಂತಹ ಸಂದರ್ಭ ಎದುರಾದರೆ ನಾನು ಸಹ ಹಿರಿಯೂರು ಉಪಚುನಾವಣೆಯ ಟಿಕೆಟ್ಗಾಗಿ ಪ್ರಬಲವಾಗಿ ಹಕ್ಕು ಮಂಡಿಸಲಿದ್ದು, ಚುನಾವಣಾ ಕಣಕ್ಕಿಳಿಯಲು ನಿರ್ಧರಿಸಿದ್ದೇನೆ" ಎಂದು ಅವರು ತಿಳಿಸಿದರು.
ಹಿರಿಯ ನಾಯಕರ ಮಾರ್ಗದರ್ಶನ
ಕಾಂಗ್ರೆಸ್ನ ಹೈಕಮಾಂಡ್ ಹಾಗೂ ರಾಜ್ಯ ನಾಯಕರ ನಾಯಕತ್ವದ ಮೇಲೆ ವಿಶ್ವಾಸ ವ್ಯಕ್ತಪಡಿಸಿದ ಅವರು, "ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಸತೀಶ್ ಜಾರಕಿಹೊಳಿ ಹಾಗೂ ಜಿಲ್ಲೆಯ ಶಾಸಕರುಗಳಾದ ಬಿ.ಜಿ.ಗೋವಿಂದಪ್ಪ, ಕೆ.ಸಿ.ವೀರೇಂದ್ರ ಪಪ್ಪಿ, ಟಿ.ರಘುಮೂರ್ತಿ, ಎನ್.ವೈ.ಗೋಪಾಲಕೃಷ್ಣ, ಮಾಜಿ ಸಚಿವರುಗಳಾದ ಎಚ್.ಆಂಜನೇಯ, ಮಾಜಿ ಸಂಸದ ಬಿ.ಎನ್ ಚಂದ್ರಪ್ಪ, ಲಿಡ್ಕರ್ ಮಂಡಳಿ ಅಧ್ಯಕ್ಷ ಜಿ.ಎಸ್.ಮಂಜನಾಥ್ ಅವರ ಮಾರ್ಗದರ್ಶನದಲ್ಲಿ ನಾನು ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸುತ್ತಿದ್ದೇನೆ" ಎಂದರು.
ಶಶಿಕಲಾ ಸುರೇಶ್ಬಾಬು ಅವರ ಈ ದಿಢೀರ್ ಹೇಳಿಕೆಯು ಹಿರಿಯೂರು ಕಾಂಗ್ರೆಸ್ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದು, ಉಪಚುನಾವಣೆಯ ರಾಜಕೀಯ ಚಟುವಟಿಕೆಗಳಿಗೆ ಹೊಸ ತಿರುವು ನೀಡಿದೆ.



