ಚಂದ್ರವಳ್ಳಿ ನ್ಯೂಸ್, ಮಂಡ್ಯ:
ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ತಗ್ಗಹಳ್ಳಿ ಗ್ರಾಮದ ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ತರಗತಿ ಕೊಠಡಿಗಳ ಉದ್ಘಾಟನಾ ಸಮಾರಂಭವು ಅತ್ಯಂತ ವಿಭಿನ್ನ ಹಾಗೂ ಅರ್ಥಪೂರ್ಣವಾಗಿ ನೆರವೇರಿತು. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ, ಶಾಲೆಯ ಮುದ್ದು ಮಕ್ಕಳೇ ರಿಬ್ಬನ್ ಕತ್ತರಿಸುವ ಮೂಲಕ ನೂತನ ಕೊಠಡಿಗಳನ್ನು ಉದ್ಘಾಟಿಸಿದ್ದು ವಿಶೇಷವಾಗಿತ್ತು.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಹೆಚ್.ಡಿ. ಕುಮಾರಸ್ವಾಮಿ ಅವರು, "ನನ್ನ ಪಾಲಿಗೆ ಇದು ಅವಿಸ್ಮರಣೀಯ ಕ್ಷಣ. ಶಾಲೆಯ ಮುದ್ದು ಮಕ್ಕಳಿಂದಲೇ ನೂತನ ತರಗತಿ ಕೊಠಡಿಗಳನ್ನು ಉದ್ಘಾಟನೆ ಮಾಡಿಸಿದ್ದು ಅತೀವ ಸಂತೋಷ ಉಂಟು ಮಾಡಿದೆ," ಎಂದು ಭಾವುಕರಾಗಿ ನುಡಿದಿದ್ದಾರೆ.
ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ, ಮಿಚಿಲಿನ್ ಇಂಡಿಯಾ ಪ್ರೈವೇಟ್ ಕಂಪನಿಯ ನಿರ್ದೇಶಕ ಸಿದ್ದಾರ್ಥ ಪ್ರಸಾದ್.(ಸಿಎಸ್ಆರ್ ನಿಧಿಯ ಮೂಲಕ ಶಾಲಾ ಕೋಣೆಗಳ ನಿರ್ಮಾಣಕ್ಕೆ ನೆರವು ನೀಡಿದ ಸಂಸ್ಥೆ), ಶಾಸಕ ಮಂಜುನಾಥ್ ಸೇರಿದಂತೆ ಗ್ರಾಮಸ್ಥರು, ಶಾಲೆಯ ಶಿಕ್ಷಕ ವೃಂದ ಹಾಗೂ ಜನತಾದಳ (ಜಾತ್ಯತೀತ) ಪಕ್ಷದ ಹಲವಾರು ಪ್ರಮುಖ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಮಕ್ಕಳ ಕೈಯಿಂದಲೇ ಉದ್ಘಾಟನೆ ಮಾಡಿಸಿದ ಈ ನಡೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ.



