ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ಭಾಗಿಯಾದ ವಿರುದ್ಧ ಕ್ರಮ ಕೈಗೊಳ್ಳುವಂತೆ ನವದೆಹಲಿಯ ಜಂತರ್ ಮಂತರ್ ಬಳಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಯುವಜನತೆ ಮತ್ತು ವಿದ್ಯಾರ್ಥಿಗಳ ಮೇಲೆ ಪೊಲೀಸರು ಎಸಗಿರುವ ಕೃತ್ಯ ಖಂಡಿಸಿ ಕನ್ನಡ ಜಾಗೃತ ಪರಿಷತ್ ನೇತೃತ್ವದಲ್ಲಿ ಕನ್ನಡ ಪರ ರೈತ ಪರ ದಲಿತ ಪರ ಸಂಘಟನೆಗಳಿಂದ ‘ಪ್ರಜಾಪ್ರಭುತ್ವದ ಮೇಲಿನ ದಾಳಿ ಮೆಟ್ಟಿ ನಿಲ್ಲೋಣ, ಜನತಾದ್ರೋಹಿಗಳಿಗೆ ಉಗಿಯೋಣ’ ಎನ್ನುವ ಘೋಷಣೆಯೊಂದಿಗೆ ತಾಲ್ಲೂಕು ಕಚೇರಿ ಮುಂದೆ ಶುಕ್ರವಾರ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿತ್ತು.
ಪ್ರತಿಭಟನೆಯಲ್ಲಿ ಕನ್ನಡ ಪಕ್ಷದ ರಾಜ್ಯ ಉಪಾಧ್ಯಕ್ಷ ಸಂಜೀವ್ ನಾಯಕ್, ಕನ್ನಡ ಜಾಗೃತ ಪರಿಷತ್ತು ಕಾರ್ಯದರ್ಶಿ ಡಿ.ಪಿ.ಆಂಜನೇಯ ಮಾತನಾಡಿ ಕಳೆದ ಮೇ 3ರಂದು ನಡೆದಿದ್ದನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ಮತ್ತೆ ಜೂನ್ 21ರಂದು ಮರು ಪರೀಕ್ಷೆ ನಡೆಸಲಾಯಿತು. ತಮ್ಮದಲ್ಲದ ತಪ್ಪಿಗೆ ಮತ್ತೆ ನೀಟ್ ಬರೆಯುವ ಶಿಕ್ಷೆಗೆ 22 ಲಕ್ಷ ವಿದ್ಯಾರ್ಥಿಗಳು ತುತ್ತಾದರು. ಆತಂಕ, ಅನಿಶ್ಚಿತತೆ, ಸೀಟು ಸಿಗುವ, ಕೈತಪ್ಪುವ ಆತಂಕಕ್ಕೆ ಒಳಗಾದರೂ. 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡರು. ಈ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ಭಾಗಿಯಾದ ದೇಶದ್ರೋಹಿಗಳ ವಿರುದ್ಧ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಕಳೆದ 20 ದಿವಸಗಳಿಂದ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ, ಪರಿಸರವಾದಿ ಸೋನಮ್ ವಾಂಗ್ಟುಕ್ ಅವರ ಆರೋಗ್ಯ ಸ್ಥಿತಿ ಚಿಂತಜನಕವಾದ ಮೇಲೆ ದೆಹಲಿ ಹೈಕೋರ್ಟ್ ಚೀಮಾರಿ ಹಾಕಿದರೂ ಕೇಂದ್ರ ಸರ್ಕಾರದ ಒಬ್ಬ ಪ್ರತಿನಿದಿಯೂ ಅವರ ಬಳಿ ಬರಲಿಲ್ಲ. ಕಾಕ್ರೋಚ್ ಜನತಾ ಪಾರ್ಟಿಯ ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಜುಲೈ 20ರಂದು ನವದೆಹಲಿಯ ಜಂತರ್ ಮಂತರ್ ಅಂಗಳದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದು, ಇವರ ಮೇಲೆ ಕೇಂದ್ರ ಸರ್ಕಾರ ನಿಯೋಜಿಸಿದ ಗೂಂಡಾಗಳು ಮತ್ತು ದೆಹಲಿ ಪೊಲೀಸರು ನಡೆಸಿದ ಭೀಕರ ಲಾಟಿಜಾರ್ಜ್ಗೆ ಸಾವಿರಾರು ವಿದ್ಯಾರ್ಥಿಗಳಿಗೆ ಕೈ, ಕಾಲು ಮುರಿದಿದೆ. ತಲೆಗೆ ಬಲವಾದ ಪೆಟ್ಟುಗಳಾಗಿವೆ. ನೂರಾರು ಜನ ಆಸ್ಪತ್ರೆ ಸೇರಿದ್ದಾರೆ, ಮಹಿಳಾ ಹೋರಾಟಗಾರ್ತಿಯರ ಮೇಲೆ ಪುರುಷ ಪೊಲೀಸರು ಭಯಾನಕ ಹಲ್ಲೆ ನಡೆಸಿದ್ದಾರೆ.
ಮಹಿಳೆಯರು ಹಾಗೂ ವಿದ್ಯಾರ್ಥಿನಿಯರ ಮೇಲೆ ನಕಲಿ ಪೊಲೀಸರ ವೇಶದಲ್ಲಿದ್ದ ಗೂಂಡಾಗಳು ಲೈಂಗಿಂಕ ದೌರ್ಜನ್ಯವೆಸಗಿದ್ದಾರೆ. ಈ ಕೂಡಲೆ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ಭಾಗಿಯಾದ ದೇಶದ್ರೋಹಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಕ್ರೋಶ ವ್ಯಕ್ಯಪಡಿಸಿದರು.
ರಾಜ್ಯ ಸರ್ಕಾರದಲ್ಲಿ ಸಿಇಟಿ ಪರೀಕ್ಷೆ ವ್ಯವಸ್ಥಿತವಾಗಿ ನಡೆಯುತ್ತಿದ್ದು, ರಾಜ್ಯದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಿತ್ತು. ಆದರೆ ನೀಟ್ ಪರೀಕ್ಷೆಯಿಂದ ರಾಜ್ಯದ ವಿದ್ಯಾರ್ಥಿಗಳಿಗೆ ಅವಕಾಶಗಳು ಕಿತ್ತುಕೊಳ್ಳುವುದರೊಂದಿಗೆ ಇಂತಹ ಹಗರಣಗಳ ಸರಮಾಲೆ ನಡೆಯುತ್ತಿದೆ. ಕೇಂದ್ರದ ಮೋದಿ ಸರ್ಕಾರ ಈ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸುತ್ತಿರುವುದು ಖಂಡನೀಯ ಎಂದರು.
ಈ ಸಂದರ್ಭದಲ್ಲಿ ಹಿರಿಯ ಕನ್ನಡಪರ ಹೋರಾಟಗಾರ ಜಿ.ಸತ್ಯನಾರಾಯಣ, ಕನ್ನಡ ಪಕ್ಷದ ರಾಜ್ಯ ಕನ್ನಡ ಜಾಗೃತ ಪರಿಷತ್ತಿನ ಅಧ್ಯಕ್ಷ ಕೆ.ವೆಂಕಟೇಶ್, ಟ್ರಸ್ಟಿಗಳಾದ ಮೇಜರ್ ಮಹಾಬಲೇಶ್ವರ್, ಎ.ಓ.ಆವಲಮೂರ್ತಿ, ವಕೀಲ ಕೃಷ್ಣಮೂರ್ತಿ, ತಾಲ್ಲೂಕು ಕಸಾಪ ನಿಕಟ ಪೂರ್ವ ಅಧ್ಯಕ್ಷೆ ಪ್ರಮೀಳಾ ಮಹಾದೇವ್, ಕನ್ನಡ ಪಕ್ಷದ ಜಿಲ್ಲಾಧ್ಯಕ್ಷ ಮುನಿಪಾಪಯ್ಯ, ತಾಲ್ಲೂಕು ಅಧ್ಯಕ್ಷ ವೆಂಕಟೇಶ್, ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಸನ್ನ, ತಾಲ್ಲೂಕು ಕಾರ್ಯದರ್ಶಿ ಸತೀಶ್, ಕನ್ನಡ ಜಾಗೃತ ಪರಿಷತ್ತಿನ ವೆಂಕಟರಾಜು, ಹನುಮಂತರಾಯಪ್ಪ, ಜಿಲ್ಲಾ ಶಿವರಾಜ್ಕುಮಾರ್ ಸೇನಾ ಸಮಿತಿ ಅಧ್ಯಕ್ಷ ರಮೇಶ್ ಸೇರಿದಂತೆ ಹಲವಾರು ಹೋರಾಟಗಾರರು ಪ್ರತಿಭಟನೆಯಲ್ಲಿ ಹಾಜರಿದ್ದರು.



