ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಸರ್ಕಾರಿ ಜಾಗಗಳನ್ನು ಕಬಳಿಸಿರುವ ಭೂ ಗಳ್ಳರ ವಿರುದ್ಧ ಕ್ರಮ ಕೈ ಗೊಳ್ಳುವಂತೆ ತಾಲೂಕು ಆಡಳಿತ ಯಾವುದೇ ಕ್ರಮ ಕೈಗೊಳ್ಳದೆ ಜಾಣ ಕಿವುಡತನ ಪ್ರದರ್ಶಿಸಿದೆ. ಆಗಸ್ಟ್ 1 ರೊಳಗೆ ಕ್ರಮ ಕೈಗೊಳ್ಳದಿದ್ದರೆ ಸ್ವತಂತ್ರ ದಿನಾಚರಣೆಯಂದು ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಿಗರ ಬಣ ಕಪ್ಪು ಬಾವುಟ ಪ್ರದರ್ಶನ ಪ್ರದರ್ಶನದ ಮೂಲಕ ತೀವ್ರ ಹೋರಾಟ ನಡೆಸಲಾಗುವುದೆಂದು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಬಿ. ಎಸ್. ಚಂದ್ರಶೇಖರ್ ಹೇಳಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಿಗರ ಬಣದಿಂದ ತಾಲೂಕು ಕಚೇರಿ ಮುಂಭಾಗ ನಡೆದ ಸುದ್ದಿ ಗೋಷ್ಠಿಯಲ್ಲಿ ಚಂದ್ರಶೇಖರ್ ಮಾತನಾಡಿ ತಾಲೂಕಿನಲ್ಲಿ ಹಲವಾರು ಕಡೆ ಭೂ ಕಬಳಿಕೆ ದಾರರು ಸರ್ಕಾರಿ ಜಾಗಗಳನ್ನು ಕಬಳಿಸಿದ್ದಾರೆ. ಈ ಬಗ್ಗೆ ಕರವೇ ಕನ್ನಡಿಗರ ಬಣದ ವತಿಯಿಂದ ನಿರಂತರ ಹೋರಾಟ ನಡೆಸುತ್ತಾ ಬಂದಿದೆ. ಇದರ ಬಗ್ಗೆ ತಾಲೂಕು ಆಡಳಿತಕ್ಕೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಕ್ರಮವಾಗಿಲ್ಲ. ಕಳೆದ ಬಾರಿ ಹೋರಾಟಕ್ಕೆ ಮುಂದಾದಾಗ ತಹಸೀಲ್ದಾರ್ ರವರು ಸಂಬಂಧ ಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದು ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಹೇಳಿದ್ದರು. ವರ್ಷ ಕಳೆದರೂ ಯಾವುದೇ ಕ್ರಮವಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದರು.
ತಾಲ್ಲೂಕಿನ ಕಸಬಾ ಹೋಬಳಿ ಗಂಗಾಧರಪುರದ ಸರ್ಕಾರಿ ಕುಂಟೆ, ಅರೇಹಳ್ಳಿ ಗುಡ್ಡದಹಳ್ಳಿ ಸರ್ಕಾರಿ ಗೋಮಾಳ, ರೋಜಿಪುರದ ಸರ್ಕಾರಿ ಖರಾಬ್ ಜಾಗ, ಗಂಗಾಧರಪುರದ ಸ್ಮಶಾನ ಜಾಗದಲ್ಲಿನ ಅನಧಿಕೃತ ಮಳಿಗೆ ಗಳ ಬಗ್ಗೆ, ಪದೇ ಪದೇ ತಾಲೂಕು ಆಡಳಿತದ ಗಮನಕ್ಕೆ ತರಲಾಗಿದೆ. ಅಲ್ಲದೆ ಭಗತ್ ಸಿಂಗ್ ಕ್ರೀಡಾಂಗಣದ ಬಳಿ ಪರಿಶಿಷ್ಟ ಜಾತಿ, ಪಂಗಡದ ಹೆಣ್ಣು ಮಕ್ಕಳ ವಿದ್ಯಾರ್ಥಿ ನಿಲಯದ ಜಾಗದ ಅತಿಕ್ರಮಣ, ಸೋಮೇಶ್ವರ ದೇವಾಲಯದ ಮಠದ ವಿಚಾರ, ಬಹು ಮುಖ್ಯವಾಗಿ ನಗರದ ಗಂಗಾಧರ ಪುರ ಗ್ರಾಮದ ಪೊಲೀಸ್ ಕ್ವಾರ್ಟರ್ಸ್ ಜಾಗದ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ದೂರು ನೀಡಲಾಗಿದೆ.
ಇಲ್ಲಿ ಅರ್ಥವಾಗದ ವಿಚಾರವೆಂದರೆ ಸರ್ಕಾರಿ ಅಧಿಕಾರಿಗಳು ತಾವೇ ಖುದ್ದು ಸರ್ಕಾರಿ ಜಾಗಗಳ ರಕ್ಷಣೆಗೆ ಮುಂದಾಗಬೇಕು. ಆಶ್ಚರ್ಯವೆಂದರೆ ಸಾರ್ವಜನಿಕರು, ಸಂಘ ಸಂಸ್ಥೆಗಳು ಭೂ ಕಬಳಿಕೆ ಬಗ್ಗೆ ದೂರು ನೀಡಿದರೂ ಅಧಿಕಾರಿಗಳು ಗಮನ ಹರಿಸುತ್ತಿಲ್ಲ. ಇದೆಲ್ಲವನ್ನು ಸೂಕ್ಷ್ಮವಾಗಿ ಗಮನಿಸಿದರೆ ಭೂಗಳ್ಳರ ಸರ್ಕಾರಿ ಜಾಗದ ಕಬಳಿಕೆಯಲ್ಲಿ ಸರ್ಕಾರಿ ಅಧಿಕಾರಿಗಳು ಶಾಮಿಲಾಗಿದ್ದಾರಾ ಎಂಬ ಅನುಮಾನ ಸಾರ್ವಜನಿಕವಾಗಿ ವ್ಯಕ್ತವಾಗುತ್ತಿದೆ.
ಸರ್ಕಾರಿ ಅಧಿಕಾರಿಗಳ ನಿರ್ಲಕ್ಷ ತನ ಅಥವಾ ಭೂ ಗಳ್ಳರ ಜೊತೆ ಶಾಮಿಲಾಗಿರುವ ಬಗ್ಗೆ ಉನ್ನತ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗದೆ ಅಧಿಕಾರಿಗಳಿಂದ ಹಾರಿಕೆ ಉತ್ತರಗಳು ಹಾಗೂ ದಿಕ್ಕು ತಪ್ಪಿಸುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಇದನ್ನು ತೀವ್ರವಾಗಿ ಖಂಡಿಸಿ ಆಗಸ್ಟ್ 1 ರೊಳಗಾಗಿ ಕ್ರಮ ಕೈಗೊಳ್ಳಬೇಕು. ಉನ್ನತಧಿಕಾರಿ ಗಳಿಂದ ಯಾವುದೇ ಭರವಸೆಯ ಮಾತುಗಳನ್ನು ನಂಬುವ ಪ್ರಶೆಯೇ ಇಲ್ಲಾ. ಒಂದು ವೇಳೆ ಆಗಸ್ಟ್ 1 ರೊಳಗಾಗಿ ಕ್ರಮ ಕೈಗೊಳ್ಳದಿದ್ದರೆ ಆಗಸ್ಟ್ 25ರಂದು ತಾಲೂಕು ಆಡಳಿತದ ವತಿಯಿಂದ ನಡೆಯುವ ಸ್ವತಂತ್ರೋತ್ಸವ ಕಾರ್ಯಕ್ರಮದಲ್ಲಿ ಕಪ್ಪು ಬಾವುಟ ಪ್ರದರ್ಶನದ ಮೂಲಕ ಉಗ್ರ ಪ್ರತಿಭಟನೆಗೆ ಕರವೇ ಕನ್ನಡಿಗರ ಬಣ ಮುಂದಾಗಲಿದೆ ಎಂದು ಚಂದ್ರಶೇಖರ್ ತಾಲೂಕು ಆಡಳಿತಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ.
ಸುದ್ದಿ ಗೋಷ್ಠಿಯಲ್ಲಿ ಕರವೇ ರಾಜ್ಯ ಪ್ರದಾನ ಕಾರ್ಯದರ್ಶಿ ಆರ್. ರಮೇಶ್, ರಾಜ್ಯ ಮುಖಂಡ ಪಿ. ವಾಸು, ಜಿಲ್ಲಾ ಪ್ರದಾನ ಕಾರ್ಯದರ್ಶಿ ತಾಯೇಗೌಡ, ಜಿಲ್ಲಾ ಯುವ ಘಟಕದ ಅಧ್ಯಕ್ಷ ರಂಜಿತ್ ಗೌಡ, ತಾಲೂಕು ಉಪಾಧ್ಯಕ್ಷ ಅಂಬರೀಷ್, ತಾ. ಪ್ರದಾನ ಕಾರ್ಯದರ್ಶಿ ಉದಯ್ ಕುಮಾರ್, ಕಾರ್ಮಿಕ ಘಟಕದ ಅಧ್ಯಕ್ಷ ಶಿವಶಂಕರ್ ರೆಡ್ಡಿ, ಸಾಸಲು ಹೋಬಳಿ ಅಧ್ಯಕ್ಷ ಲಕ್ಷ್ಮೀನಾರಾಯಣ, ಮುಖಂಡರಾದ ಶಿವಶಂಕರ ಹಾಜರಿದ್ದರು.



