ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ನಗರವನ್ನು ಸುಂದರ, ಸುರಕ್ಷಿತ ಮತ್ತು ವಿಶ್ವಮಟ್ಟದ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಶ್ರೀ ಕೃಷ್ಣ ಬೈರೇಗೌಡ ಅವರು ಕೈಗೊಂಡಿರುವ ಪಾದಚಾರಿ ಮಾರ್ಗಗಳ ತೆರವು ಕಾರ್ಯಾಚರಣೆಗೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ತನ್ನ ಸಂಪೂರ್ಣ ಬೆಂಬಲವನ್ನು ಪ್ರಕಟಿಸಿದೆ.
ಇತ್ತೀಚಿನ ದಿನಗಳಲ್ಲಿ ಕೆಲವು ವ್ಯಕ್ತಿಗಳು ಮತ್ತು ಸಂಘಟನೆಗಳು ಈ ಕಾರ್ಯಾಚರಣೆಯನ್ನು ವಿರೋಧಿಸುತ್ತಿರುವುದಕ್ಕೆ ಕರವೇ ಅಸಮಾಧಾನ ವ್ಯಕ್ತಪಡಿಸಿದ್ದು, ಇದು ಯಾವುದೇ ನಿರ್ದಿಷ್ಟ ವ್ಯಾಪಾರಿಯ ವಿರುದ್ಧದ ಕ್ರಮವಲ್ಲ, ಬದಲಿಗೆ ಕೋಟ್ಯಂತರ ನಾಗರಿಕರ ಸುರಕ್ಷತೆಗಾಗಿ ಕೈಗೊಂಡಿರುವ ಸಾರ್ವಜನಿಕ ಹಿತದ ಕ್ರಮ ಎಂದು ಸ್ಪಷ್ಟಪಡಿಸಿದೆ.
ವ್ಯಾಪಾರ ವಿರೋಧಿ ಕ್ರಮವಲ್ಲ: ನಗರದ ಒಟ್ಟು ರಸ್ತೆಗಳ ಪೈಕಿ ಕೇವಲ ಶೇ. ೧೦ ರಿಂದ ೨೦ ರಷ್ಟು ಪ್ರಮುಖ ರಸ್ತೆಗಳಲ್ಲಷ್ಟೇ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಉಳಿದ ಬಹುತೇಕ ಪ್ರದೇಶಗಳಲ್ಲಿ ವ್ಯಾಪಾರಕ್ಕೆ ಅವಕಾಶವಿದೆ. ಹೀಗಾಗಿ ಇದನ್ನು ವ್ಯಾಪಾರ ವಿರೋಧಿ ಕ್ರಮವೆಂದು ಬಿಂಬಿಸುವುದು ತಪ್ಪು.
ಮಾನವೀಯ ದೃಷ್ಟಿಕೋನ ಅಗತ್ಯ: ಬಡ ಮತ್ತು ಸಣ್ಣ ವ್ಯಾಪಾರಿಗಳ ಜೀವನೋಪಾಯದ ಬಗ್ಗೆ ಸರ್ಕಾರ ಮಾನವೀಯ ದೃಷ್ಟಿಕೋನ ಹೊಂದಿರಬೇಕು. ಅಗತ್ಯವಿದ್ದಲ್ಲಿ ಅವರಿಗೆ ಪರ್ಯಾಯ ಸ್ಥಳಗಳಲ್ಲಿ ವ್ಯಾಪಾರ ನಡೆಸಲು ಅವಕಾಶ ಕಲ್ಪಿಸುವ ಬಗ್ಗೆ ಚಿಂತಿಸಲಿ. ಆದರೆ ಸಾರ್ವಜನಿಕರ ಓಡಾಟಕ್ಕೆ ಮೀಸಲಾದ ಪಾದಚಾರಿ ಮಾರ್ಗಗಳನ್ನು ಮುಕ್ತಗೊಳಿಸುವುದನ್ನು ವಿರೋಧಿಸುವುದು ಕಾನೂನಾತ್ಮಕವಾಗಿಯೂ, ನೈತಿಕವಾಗಿಯೂ ಸರಿಯಲ್ಲ.
ಅಭಿವೃದ್ಧಿಯ ನೈಜ ಮಾನದಂಡ: ಕೇವಲ ಎತ್ತರದ ಕಟ್ಟಡಗಳು, ಅಗಲವಾದ ರಸ್ತೆಗಳಿಂದ ನಗರದ ಅಭಿವೃದ್ಧಿ ನಿರ್ಧಾರವಾಗುವುದಿಲ್ಲ. ಸಾಮಾನ್ಯ ನಾಗರಿಕರು ಸುರಕ್ಷಿತವಾಗಿ ನಡೆದುಕೊಂಡು ಹೋಗುವ ಪರಿಸರವೂ ಮುಖ್ಯವಾಗಿದೆ. ಪ್ರಸ್ತುತ ಜನರು ಜೀವ ಕೈಯಲ್ಲಿ ಹಿಡಿದು ರಸ್ತೆ ಮೇಲೆ ಸಂಚರಿಸುವ ಪರಿಸ್ಥಿತಿ ಇದ್ದು, ಅಪಘಾತಗಳು ಹೆಚ್ಚುತ್ತಿವೆ.
ಬೀಡಾಡಿ ವಾಹನಗಳ ತೆರವು ಶ್ಲಾಘನೀಯ: ರಸ್ತೆ ಬದಿಗಳಲ್ಲಿ ವರ್ಷಗಳಿಂದ ನಿಷ್ಪ್ರಯೋಜಕವಾಗಿ ನಿಂತಿರುವ, ತುಕ್ಕು ಹಿಡಿದಿರುವ ಬೀಡಾಡಿ ವಾಹನಗಳ ತೆರವು ಕಾರ್ಯವೂ ಅತ್ಯಂತ ಅಗತ್ಯವಾಗಿದ್ದು, ಇದನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮುಂದುವರಿಸಬೇಕು.
ಸಚಿವರಿಗೆ ಕರವೇ ನೀಡಿದ ಪ್ರಮುಖ ಸಲಹೆಗಳು:
"ಕೃಷ್ಣ ಬೈರೇಗೌಡರು ಯಾವುದೇ ಟೀಕೆ, ಒತ್ತಡ ಅಥವಾ ರಾಜಕೀಯ ವಿರೋಧಗಳಿಗೆ ಅಂಜಬಾರದು. ಅವರ ಹಿಂದೆ ಯಾವುದೇ ವೈಯಕ್ತಿಕ ಹಿತಾಸಕ್ತಿ ಅಥವಾ ರಾಜಕೀಯ ಅಜೆಂಡಾ ಇಲ್ಲ ಎಂಬುದು ಸ್ಪಷ್ಟವಾಗಿದೆ. ಕೆರೆಗಳು, ರಾಜಕಾಲುವೆಗಳು ಮತ್ತು ಸರ್ಕಾರಿ ಜಮೀನುಗಳ ಮೇಲಿನ ಒತ್ತುವರಿಗಳನ್ನು ತೆರವುಗೊಳಿಸುವ ಕಾರ್ಯಕ್ಕೂ ಅವರು ಹೆಚ್ಚಿನ ಆದ್ಯತೆ ನೀಡಬೇಕು."
ಹಿಂದೆ ಶ್ರೀ ಎ.ಟಿ. ರಾಮಸ್ವಾಮಿ ಅವರ ನೇತೃತ್ವದ ಸಮಿತಿ ಬೆಂಗಳೂರಿನ ಸರ್ಕಾರಿ ಜಮೀನುಗಳ ಒತ್ತುವರಿ ಕುರಿತು ನೀಡಿರುವ ಸಮಗ್ರ ವರದಿಯ ಆಧಾರದ ಮೇಲೆ, ಒತ್ತುವರಿಯಾಗಿರುವ ಸರ್ಕಾರಿ ಆಸ್ತಿಗಳನ್ನು ಮರಳಿ ಸರ್ಕಾರದ ವಶಕ್ಕೆ ಪಡೆಯುವ ಕಾರ್ಯವನ್ನು ಸಚಿವರು ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ. ಯಾವುದೇ ಪ್ರಭಾವಕ್ಕೆ ಮಣಿಯದೆ ಸಾರ್ವಜನಿಕ ಹಿತಾಸಕ್ತಿಯ ಆಧಾರದ ಮೇಲೆ ನಿರ್ಧಾರ ಕೈಗೊಳ್ಳುವಂತೆ ಕರವೇ ಸಚಿವರಿಗೆ ಧೈರ್ಯ ತುಂಬಿದೆ.



