ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭಾರತದ ಐಟಿ ರಫ್ತಿನಲ್ಲಿ ನಾವು 42% ಕೊಡುಗೆ ನೀಡುತ್ತೇವೆ, ಇದರ ಮೌಲ್ಯ 3.2 ಲಕ್ಷ ಕೋಟಿ ರೂ.ಗಳಿಗಿಂತ ಹೆಚ್ಚು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ, ಸಾಫ್ಟ್ ವೇರ್ ಟೆಕ್ನಾಲಜೀ ಪಾರ್ಕ್ ಆಫ್ ಇಂಡಿಯಾ, ಬೆಂಗಳೂರು ಇವರ ವತಿಯಿಂದ ಆಯೋಜಿಸಲಾದ ‘ಬೆಂಗಳೂರು ಟೆಕ್ ಸಮ್ಮಿಟ್’ 28 ನೇ ಆವೃತ್ತಿ ಉದ್ಘಾಟಿಸಿ ಅವರು ಮಾತನಾಡಿದರು.
ಈ ಪ್ರಗತಿ ವರ್ಷದಿಂದ ವರ್ಷಕ್ಕೆ 27% ರಷ್ಟು ವೇಗವಾಗಿ ಬೆಳೆಯುತ್ತಿದೆ. ರಾಜ್ಯವು 550 ಕ್ಕೂ ಹೆಚ್ಚು ಜಾಗತಿಕ ಸಾಮಥ್ರ್ಯ ಕೇಂದ್ರಗಳನ್ನು (ಜಿಸಿಸಿ) ಹೊಂದಿದೆ, ಇದು ಭಾರತದ ಒಟ್ಟು ಕಂಪನಿಯ ಮೂರನೇ ಒಂದು ಭಾಗವಾಗಿದೆ ಎಂದು ಸಿಎಂ ತಿಳಿಸಿದರು.
ಬೆಂಗಳೂರು ಸೆಮಿಕಂಡಕ್ಟರ್, ಏರೋಸ್ಪೇಸ್, ರಕ್ಷಣಾ, ಬಯೋಟೆಕ್, ಎಲೆಕ್ಟ್ರಾನಿಕ್ಸ್ ಉತ್ಪಾದನೆ, ಅನಿಮೇಷನ್ ಮತ್ತು ಗೇಮಿಂಗ್ ಮತ್ತು ಡೀಪ್-ಟೆಕ್ಗಳಿಗೆ ಪ್ರಮುಖ ಕೇಂದ್ರವಾಗಿದೆ.
ನೀತಿ - ನಾವೀನ್ಯತೆ ಯ ರೂಪಿಸುವಲ್ಲಿ ಕರ್ನಾಟಕ ಯಾವಾಗಲೂ ಭಾರತವನ್ನು ಮುನ್ನಡೆಸಿದೆ. ನಾವು 1997 ರಲ್ಲಿಯೇ ಭಾರತದ ಮೊದಲ ತಂತ್ರಜ್ಞಾನ ನೀತಿಯನ್ನು ರೂಪಿಸಿದ್ದೇವೆ ಮತ್ತು ಹೊಸ ನೀತಿಗಳೊಂದಿಗೆ ಈ ನಾಯಕತ್ವವನ್ನು ಮುಂದುವರಿಸುತ್ತಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಜಾಗತಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ಕರ್ನಾಟಕದ ಸಕ್ರಿಯ ಪಾಲ್ಗೊಳ್ಳುವಿಕೆ : ಸರ್ಕಾರದ ದೂರದೃಷ್ಟಿಯ ಆಡಳಿತದ ಪರಿಣಾಮವಾಗಿ, ಜಾಗತಿಕ ತಂತ್ರಜ್ಞಾನದ ಕ್ಷೇತ್ರದಲ್ಲಿ ಕರ್ನಾಟಕ ಸಕ್ರಿಯವಾಗಿ ಪಾಲ್ಗೊಂಡಿದೆ. ವಿದೇಶಿ ಬಂಡವಾಳ ಹೂಡಿಕೆ, ಜಾಗತಿಕ ಸಹಭಾಗಿತ್ವ ಹಾಗೂ ಬಹುರಾಷ್ಟ್ರೀಯ ಹೂಡಿಕೆಗಳಲ್ಲಿ ಕರ್ನಾಟಕವು ದೇಶದ ಪ್ರಮುಖ ರಾಜ್ಯಗಳಲ್ಲಿ ಒಂದಾಗಿದೆ. ನಮ್ಮ ಪರಿಸರ ವ್ಯವಸ್ಥೆಯು ವಿಶ್ವದರ್ಜೆಯ ಇಂಜಿನಿಯರಿಂಗ್, ಪಾರದರ್ಶಕ ನೀತಿ, ಸದೃಢ ಐಪಿ ಸಂಸ್ಕøತಿ ಹಾಗೂ ವೈವಿಧ್ಯಮಯ ಜಾಗತಿಕ ಸಮುದಾಯಗಳನ್ನು ಒಳಗೊಂಡಿದೆ.
ನಮ್ಮ ವಾಣಿಜ್ಯ ಪರಿಸರಕ್ಕೆ ಉನ್ನತಮಟ್ಟದ ಕಾನೂನು, ಆರ್ಥಿಕ ಹಾಗೂ ತಾಂತ್ರಿಕ ಬಲದ ಬೆಂಬಲವಿದೆ. ವಿಶೇಷವಾಗಿ ಬೆಂಗಳೂರಿನ ಹವಾಮಾನ, ಬಹುಸಂಸ್ಕೃತಿಗಳು ವಿಶ್ವದ ಜನರನ್ನು ಆಕರ್ಷಿಸುತ್ತವೆ. ಒಟ್ಟಾರೆ ,ರಾಜ್ಯವು ಹೂಡಿಕೆದಾರರಿಗೆ ಸಂಶೋಧನೆಯಿಂದ ಮಾರುಕಟ್ಟೆಯವರೆಗೂ, ಮೂಲಸೌಕರ್ಯದಿಂದ ಕೌಶಲ್ಯದವರೆಗಿನ ಎಲ್ಲ ಅಗತ್ಯತೆಗಳನ್ನು ಪೂರೈಸುತ್ತಿದ್ದು, ಕರ್ನಾಟಕವು ಜಾಗತಿಕ ತಂತ್ರಜ್ಞಾನ ಕ್ರಾಂತಿಯನ್ನು ಮುನ್ನಡೆಸುತ್ತಿದೆ ಎಂದರು.


