ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ಜೂನ್ 27ರಂದು ತಾಲೂಕು ಆಡಳಿತದ ಸಹಯೋಗದೊಂದಿಗೆ ಕೆಂಪೇಗೌಡ ಜಯಂತೋತ್ಸವ ಆಚರಣೆ ಮಾಡಲು ನಿರ್ಧರಿಸಿದ್ದು ತಾಲ್ಲೂಕಿನ ಜನತೆ ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಕೆಂಪೇಗೌಡ ಜಯಂತೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಟಿ. ವಿ.ಲಕ್ಷ್ಮಿನಾರಾಯಣ್ ಮನವಿ ಮಾಡಿದರು.
ನಗರದ ಪಿಎಲ್ ಡಿ ಬ್ಯಾಂಕ್ ಸಭಾಂಗಣದಲ್ಲಿ ಕೆಂಪೇಗೌಡ ಜಯಂತೋತ್ಸವ ಆಚರಣಾ ಸಮಿತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು ನಾಡಪ್ರಭು ಕೆಂಪೇಗೌಡರ 517ನೇ ಜಯಂತಿ ಆಚರಣೆಯನ್ನು ಪ್ರತಿ ಬಾರಿಯಂತೆ ಈ ಬಾರಿಯೂ ಅದ್ದೂರಿಯಾಗಿ ಆಚರಿಸಲು ಸಮುದಾಯದ ಎಲ್ಲ ಮುಖಂಡರು ಒಮ್ಮತದಿಂದ ನಿರ್ಣಯಕೈಗೊಂಡಿದ್ದು, ಈ ಕಾರ್ಯಕ್ರಮದಲ್ಲಿ ಎಲ್ಲಾ ವರ್ಗದ, ಎಲ್ಲಾ ಸಮುದಾಯದ ಜನತೆ ಭಾಗವಹಿಸಬೇಕು. ಕಾರಣ ಬೆಂಗಳೂರು ನಿರ್ಮಾತೃ ಕೆಂಪೇಗೌಡರು ಕೇವಲ ಒಂದು ಸಮುದಾಯಕ್ಕೆ ಸೀಮಿತರಾದವರಲ್ಲ.ಅವರು ಎಲ್ಲಾ ಜಾತಿ ಜನಾಂಗಕ್ಕೂ ಆದರ್ಶಪ್ರಾಯರು. ಅವರ ದೂರ ದೃಷ್ಟಿ ಪರಿಶ್ರಮದಿಂದಲೇ ಇಂದು ಬೆಂಗಳೂರು ಜಾಗತಿಕ ಮಟ್ಟದಲ್ಲಿ ತನ್ನದೇ ಆದ ಛಾಪು ಮೂಡಿಸಿದೆ.ಈ ತಿಂಗಳ 27 ರಂದು ನಡೆಯುವ ಜಯಂತೋತ್ಸವದಲ್ಲಿ ನಗರದ ಹಳೆ ಸರ್ಕಾರಿ ಆಸ್ಪತ್ರೆ ವೃತ್ತದಿಂದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಕೆಂಪೇಗೌಡರ ಪ್ರತಿಮೆಯನ್ನು ತಾಲೂಕು ಕಚೇರಿಗೆ ತಂದು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಸಹಯೋಗದಲ್ಲಿ ತಾಲೂಕು ಕಚೇರಿಯಲ್ಲಿ ಮೊದಲಿಗೆ ಕೆಂಪೇಗೌಡ ಜಯಂತಿ ಆಚರಿಸಲಾಗುವುದು ನಂತರ ಮೆರವಣಿಗೆ ಮೂಲಕ ರಾಮೇಗೌಡರು ವೃತ್ತಕ್ಕೆ,ಒಕ್ಕಲಿಗರ ಭವನ ಆಗಮಿಸಲಿದೆ.ಒಕ್ಕಲಿಗರ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು ಕಾರ್ಯಕ್ರಮದಲ್ಲಿ ಸಮುದಾಯದ ಹತ್ತನೇ ತರಗತಿ ಹಾಗೂ ದ್ವಿತೀಯ ಪಿ. ಯು. ಸಿ. ಪರೀಕ್ಷೆಯಲ್ಲಿ ಶೇಕಡಾ 90ರಸ್ಟು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಪ್ರಗತಿ ಪರ ರೈತರನ್ನು ಸನ್ಮಾನಿಸಲಾಗುವುದು ಎಂದು ಹೇಳಿದರು.
ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಶಿವಕುಮಾರ್ ಮಾತನಾಡಿ ನಾಡಪ್ರಭು ಕೆಂಪೇಗೌಡ ಜಯಂತೋತ್ಸವದ ಅಂಗವಾಗಿ ಕೆಂಪೇಗೌಡ ಜಯಂತೋತ್ಸವ ಆಚರಣ ಸಮಿತಿ ವತಿಯಿಂದ ನಗರದ ಒಕ್ಕಲಿಗರ ಭವನದಲ್ಲಿ ಬೃಹತ್ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು ಕಾರ್ಯಕ್ರಮದಲ್ಲಿ ಎಸೆಸೆಲ್ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಅಲ್ಲದೆ ತಾಲೂಕಿನ ಪ್ರಗತಿಪರ ರೈತರನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಗುವುದು ಎಂದು ತಿಳಿಸಿದರು.
ಮುಖಂಡರಾದ ಮಂಡಿಬ್ಯಾಡರಹಳ್ಳಿ ಅಶ್ವತ್ ನಾರಾಯಣ ಮಾತನಾಡಿ ನಮ್ಮ ತಾಲ್ಲೂಕಿನಲ್ಲಿ ಒಕ್ಕಲಿಗ ಸಮುದಾಯಕ್ಕೆ ಸೇರಿದ 80 ಸಾವಿರಕ್ಕೂ ಅಧಿಕ ಜನರಿದ್ದಾರೆ. ಇದು ಕೇವಲ ಒಂದು ಜನಾಂಗಕ್ಕೆ ಸೀಮಿತವಾದ ಹಬ್ಬವಲ್ಲ ಈ ಕಾರ್ಯಕ್ರಮದಲ್ಲಿ ಎಲ್ಲಾ ಸಮುದಾಯದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ಕೆಂಪೇಗೌಡರ ಜೀವನವೇ ನಮಗೆಲ್ಲಾ ಆದರ್ಶ ಲಕ್ಷಾಂತರ ಕುಟುಂಬಗಳು ತಮ್ಮ ಜೀವನ ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಿದ ಮಹಾನುಭಾವರ ಜನ್ಮದಿನವನ್ನು ನಾವೆಲ್ಲರೂ ಒಟ್ಟಾಗಿ ಸಂಭ್ರಮಿಸೋಣ ಎಂದರು .
ತಾಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಡಿ. ಸಿ. ಶಶಿಧರ್, ಕುಮಾರ್, ಜಯರಾಮಯ್ಯ, ನಾಗೇಶ್, ಮುನಿಂದ್ರ ಸೇರಿದಂತೆ ಸಮಾಜದ ಹಲವು ಮುಖಂಡರು ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.



