ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ರಾಜಕಾರಣದಲ್ಲಿ ‘ಕೈ’ ಮತ್ತು ‘ಕಮಲ’ ನಾಯಕರ ನಡುವಿನ ವಾಕ್ಸಮರ ಈಗ ಮತ್ತೊಂದು ಹಂತಕ್ಕೆ ತಲುಪಿದೆ. ಈ ಬಾರಿ ವಿವಾದದ ಕೇಂದ್ರಬಿಂದು ರಾಷ್ಟ್ರೀಯ ಸ್ವಯಂಸೇವಕ ಸಂಘ ಮತ್ತು ಸಚಿವ ಪ್ರಿಯಾಂಕ್ ಖರ್ಗೆ. ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆಯೇ ಪ್ರಿಯಾಂಕ್ ಖರ್ಗೆ ಅವರು ಆರ್ಎಸ್ಎಸ್ ಕುರಿತು ಮಾಡಿರುವ ಸಾಮಾಜಿಕ ಜಾಲತಾಣದ ಪೋಸ್ಟ್ ಈಗ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ.
ಚರ್ಚೆ ಹುಟ್ಟುಹಾಕಿದ ಪ್ರಿಯಾಂಕ್ ಖರ್ಗೆ ಎಕ್ಸ್ (ಟ್ವಿಟರ್) ಪೋಸ್ಟ್!
ಗೃಹ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಕೇವಲ 48 ಗಂಟೆಗಳ ಒಳಗಾಗಿ ಪ್ರಿಯಾಂಕ್ ಖರ್ಗೆ ಅವರು ರಾಜ್ಯ ಬಿಜೆಪಿ ನಾಯಕರನ್ನು ಉದ್ದೇಶಿಸಿ ತೀಕ್ಷ್ಣವಾಗಿ ಪೋಸ್ಟ್ ಮಾಡಿದ್ದಾರೆ.
"ರಾಜ್ಯ ಬಿಜೆಪಿ ನಾಯಕರೇ, ಏಕಿಷ್ಟು ಚಿಂತೆಗೊಳಗಾಗಿದ್ದೀರಿ? ಗೃಹ ಸಚಿವನಾಗಿ ಅಧಿಕಾರ ವಹಿಸಿಕೊಂಡು ಇನ್ನು 48 ಗಂಟೆ ಕೂಡ ಆಗಿಲ್ಲ, ಆಗಲೇ ನಿಮ್ಮಲ್ಲಿನ ಭಯ, ಆತಂಕ ಮತ್ತು ದುಗುಡ ಎದ್ದು ಕಾಣುತ್ತಿದೆ. ಈಗಾಗಲೇ ಆರ್ಎಸ್ಎಸ್ ಬಳಸಿಕೊಂಡು ನನ್ನನ್ನು ನಿಂದಿಸುತ್ತಿದ್ದೀರಿ, ಜೀವ ಬೆದರಿಕೆ ಹಾಕುತ್ತಿದ್ದೀರಿ. ನೀವು ಮಾಡುವುದನ್ನು ಮಾಡಿ. ಮುಖ್ಯವಾಗಿ, ನಿಮ್ಮ ‘ವ್ಯಕ್ತಿಗಳ ಸಂಘ’ಕ್ಕೆ ನನ್ನ ನಮಸ್ಕಾರಗಳು. ನಿಮ್ಮ ರಾಜಕೀಯ ಮೇಲಧಿಕಾರದ ಈ ಸಂಘಟನೆಯ ನೋಂದಣಿಗಾಗಿ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಲು ಹೇಳಿ." ಪ್ರಿಯಾಂಕ್ ಖರ್ಗೆ, ಗೃಹ ಸಚಿವರು.
ಸಚಿವ ಪ್ರಿಯಾಂಕ್ ಬೆಂಬಲಕ್ಕೆ ನಿಂತ ಶರಣಪ್ರಕಾಶ್ ಪಾಟೀಲ್-
ಪ್ರಿಯಾಂಕ್ ಖರ್ಗೆ ಅವರ ಈ ಹೇಳಿಕೆಯನ್ನು ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಪ್ರಬಲವಾಗಿ ಸಮರ್ಥಿಸಿಕೊಂಡಿದ್ದಾರೆ. "ಗೃಹ ಸಚಿವರ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ. ದೇಶದಲ್ಲಿ ಕಾನೂನು ಪ್ರಕಾರ ಕೆಲಸ ಮಾಡಲು ಯಾವುದೇ ಸಂಸ್ಥೆಗಾದರೂ ನೋಂದಣಿ ಅತ್ಯಗತ್ಯ. ನೋಂದಣಿ ಮಾಡಿಕೊಳ್ಳಲು ಆರ್ಎಸ್ಎಸ್ಗೆ ಇರುವ ಸಮಸ್ಯೆಯಾದರೂ ಏನು? ಈ ದೇಶದಲ್ಲಿ ಯಾರೂ ಕಾನೂನಿಗಿಂತ ದೊಡ್ಡವರಲ್ಲ" ಎಂದು ಅವರು ಪ್ರತಿಪಾದಿಸಿದ್ದಾರೆ.
ಕಾಂಗ್ರೆಸ್ ನಡೆಗೆ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ತೀವ್ರ ಆಕ್ಷೇಪ ಕಾಂಗ್ರೆಸ್ ನಾಯಕರ ಈ ಜಂಟಿ ವಾಗ್ದಾಳಿಗೆ ಬಿಜೆಪಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಕಟು ಶಬ್ದಗಳಲ್ಲಿ ತಿರುಗೇಟು ನೀಡಿದ್ದಾರೆ. ಇತಿಹಾಸದ ಪುಟಗಳನ್ನು ನೆನಪಿಸುತ್ತಾ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿರುವ ಅವರ ಪ್ರಮುಖ ಅಂಶಗಳು ಇಲ್ಲಿವೆ.
ವಿಶ್ವವ್ಯಾಪಿ ಸಂಘಟನೆ: ಆರ್ಎಸ್ಎಸ್ ಕೇವಲ ಕರ್ನಾಟಕಕ್ಕೆ ಸೀಮಿತವಾಗಿಲ್ಲ. ಭಾರತ ಸೇರಿದಂತೆ ವಿಶ್ವದಾದ್ಯಂತ 50ಕ್ಕೂ ಹೆಚ್ಚು ದೇಶಗಳಲ್ಲಿ ತನ್ನ ಶಾಖೆಗಳನ್ನು ಹೊಂದಿದೆ. ಸಂಘದ ನೋಂದಣಿ ವಿಷಯದ ಬಗ್ಗೆ ನಮ್ಮಗಿಂತ ಸಂಘದ ಹಿರಿಯರೇ ಸೂಕ್ತ ಉತ್ತರ ನೀಡಲಿದ್ದಾರೆ.
ಇತಿಹಾಸದ ಪಾಠ: ಹಿಂದೆ ಜವಾಹರಲಾಲ್ ನೆಹರು ಅವರು ಆರ್ಎಸ್ಎಸ್ ಅನ್ನು ನಿಷೇಧಿಸಿದ್ದರು. ಆದರೆ ನಂತರ ಅದೇ ಸಂಘಟನೆಯ ದೇಶಭಕ್ತಿಯನ್ನು ಕಂಡು ಗಣರಾಜೋತ್ಸವ ಪರೇಡ್ನಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದರು. ಇಂದಿರಾ ಗಾಂಧಿ ಕೂಡ ಸಂಘವನ್ನು ಹತ್ತಿಕ್ಕಲು ಪ್ರಯತ್ನಿಸಿ ವಿಫಲರಾಗಿದ್ದರು ಎಂಬುದನ್ನು ಕಾಂಗ್ರೆಸ್ ಮರೆಯಬಾರದು.
ಡಿಕೆಶಿಗೆ ಮನವಿ, ಪ್ರಿಯಾಂಕ್ಗೆ ಎಚ್ಚರಿಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುತ್ತೇವೆ ಎನ್ನುತ್ತಾರೆ. ಆದರೆ ಅಪಪ್ರಚಾರ ಮಾಡುವ ವ್ಯಕ್ತಿಗೆ ಗೃಹ ಖಾತೆ ನೀಡಿದ್ದಾರೆ. ಆರ್ಎಸ್ಎಸ್ಗೆ ಕಿರುಕುಳ ನೀಡುವ ಇಂತಹ ಧೋರಣೆಗಳ ಕಡೆ ಸಿಎಂ ಗಮನಹರಿಸಬೇಕು. ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಇತಿಮಿತಿ ಅರಿತು ಕೆಲಸ ಮಾಡಲಿ. ಆರ್ಎಸ್ಎಸ್ ದೇಶವಿರೋಧಿ ಸಂಸ್ಥೆಯಲ್ಲ, ಪಾಕಿಸ್ತಾನಕ್ಕೆ ಜೈ ಎನ್ನುವ ಸಂಘಟನೆಯೂ ಅಲ್ಲ ಎಂಬುದನ್ನು ಅವರು ಅರ್ಥ ಮಾಡಿಕೊಳ್ಳಬೇಕು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಗೃಹ ಸಚಿವರಾಗಿರುವ ಪ್ರಿಯಾಂಕ್ ಖರ್ಗೆ ಅವರ ಆರ್ಎಸ್ಎಸ್ ನೋಂದಣಿ ಕುರಿತಾದ ಹೇಳಿಕೆ ಸದ್ಯಕ್ಕೆ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ಒಂದು ಕಡೆ ಕಾನೂನಿನ ಚೌಕಟ್ಟಿನ ಹೆಸರಲ್ಲಿ ಕಾಂಗ್ರೆಸ್ ಅಬ್ಬರಿಸುತ್ತಿದ್ದರೆ, ಇನ್ನೊಂದೆಡೆ ಸಂಘದ ಇತಿಹಾಸ ಮತ್ತು ದೇಶಭಕ್ತಿಯನ್ನು ಮುಂದಿಟ್ಟುಕೊಂಡು ಬಿಜೆಪಿ ತಿರುಗೇಟು ನೀಡುತ್ತಿದ್ದು, ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.



