ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಕಂಟನಕುಂಟೆ ಗ್ರಾಮಪಂಚಾಯಿತಿ ವ್ಯಾಪ್ತಿಯ ಕೋಳೂರು ಗ್ರಾಮದಲ್ಲಿ ಕೃಷಿ ಇಲಾಖೆಯ ವತಿಯಿಂದ ಕೇಂದ್ರ ಪುರಸ್ಕೃತ ಆತ್ಮಯೋಜನೆಯಡಿ ಖೇತ್ಬಚಾವೋ ಅಭಿಯಾನದ ಅಂಗವಾಗಿ ಸಮತೋಲನ ರಸಗೊಬ್ಬರಗಳ ಬಳಕೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಅ ಯೋಜನೆ ಮಾಡಲಾಗಿತ್ತು.
ಈ ಸಂದರ್ಭದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ.ಬಾಲಾಜಿ ಮಾತನಾಡಿ, ಕೃಷಿ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ಉತ್ಪಾದನಾ ವೆಚ್ಚ, ಮಣ್ಣಿನ ಫಲವತ್ತತೆ ಕುಸಿತ ಹಾಗೂ ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಗಟ್ಟಲು ವೈಜ್ಞಾನಿಕ ಮತ್ತು ಸುಸ್ಥಿರ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಂಡು ಭವಿಷ್ಯದ ಪೀಳಿಗೆಯ ಅಗತ್ಯತೆಗಳಿಗೆ ಧಕ್ಕೆಯಾಗದಂತೆ, ಲಭ್ಯವಿರುವ ನೈಸರ್ಗಿಕ ಸಂಪನ್ಮೂಲಗಳನ್ನು ಸಂರಕ್ಷಿಸಿ, ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸಿ, ಪರಿಸರಕ್ಕೆ ಹಾನಿಯಾಗದಂತೆ ದೀರ್ಘಕಾಲೀನ ಕೃಷಿ ಉತ್ಪಾದನೆಯನ್ನು ಮಾಡುವುದು.
ಇದು ರೈತರ ಆದಾಯವನ್ನು ಹೆಚ್ಚಿಸುವುದು ರೈತರು ರಾಸಾಯನಿಕ ಗೊಬ್ಬರಗಳನ್ನು ಅತಿಯಾಗಿ ಬಳಸದೇ ಮಣ್ಣಿನ ಆರೋಗ್ಯ ಕಾಪಾಡಲು ಮಣ್ಣು ಪರೀಕ್ಷೆ ಆಧಾರಿತ ಸಮತೋಲಿತ ರಸಗೊಬ್ಬರಗಳನ್ನು ಮತ್ತು ಜೈವಿಕ ಗೊಬ್ಬರಗಳನ್ನು ಬಳಸಬೇಕು. ರಾಸಾಯನಿಕ ಗೊಬ್ಬರಗಳ ಹೆಚ್ಚಿನ ಅವಲಂಬನೆ ತಪ್ಪಿಸಿ, ಮಣ್ಣಿನ ಆರೋಗ್ಯಕ್ಕೆ ಪೂರಕವಾಗಿ ರಸಗೊಬ್ಬರಗಳನ್ನು ಬಳಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಹಾಡೋನಹಳ್ಳಿ, ಆತ್ಮ ಯೋಜನೆಯ ತಾಂತ್ರಿಕ ವ್ಯವಸ್ಥಾಪಕರಾದ ಅರ್ಚನಾ, ಕೊಡಿಗೆಹಳ್ಳಿ ವಿ.ಎಸ್.ಎಸ್.ಎನ್ ನ ನಿರ್ದೇಶಕ ಬಸವರಾಜು, ಗ್ರಾಮದ ರೈತ ಮುಖಂಡರು ಹಾಜರಿದ್ದರು.



