ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾರುಕಟ್ಟೆಯಲ್ಲಿ ತೀವ್ರ ಬೆಲೆ ಕುಸಿತದಿಂದ ಕಂಗೆಟ್ಟಿರುವ ಕರ್ನಾಟಕದ ಮಾವು ಬೆಳೆಗಾರರ ರಕ್ಷಣೆಗೆ ಧಾವಿಸುವಂತೆ ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದು ವಿಶೇಷ ಮನವಿ ಮಾಡಿದ್ದಾರೆ.
ಪ್ರಸಕ್ತ 2026-27ರ ಋತುವಿನಲ್ಲಿ ಮಾವು ಬೆಳೆಗಾರರು ಎದುರಿಸುತ್ತಿರುವ ನಷ್ಟವನ್ನು ಸರಿದೂಗಿಸಲು 'ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ' ಹಾಗೂ 'ಬೆಲೆ ಕೊರತೆ ಪಾವತಿ ಯೋಜನೆ' ಅಡಿಯಲ್ಲಿ ತಕ್ಷಣವೇ ಬೆಂಬಲ ಬೆಲೆ ಘೋಷಿಸಬೇಕು ಎಂದು ಅವರು ವಿನಂತಿಸಿದ್ದಾರೆ.
ಕರ್ನಾಟಕದ ಮಾವು ವಲಯದ ಸದ್ಯದ ಸ್ಥಿತಿ: ಒಟ್ಟು ಕೃಷಿ ವಿಸ್ತೀರ್ಣ: ಸುಮಾರು 1.45 ಲಕ್ಷ ಹೆಕ್ಟೇರ್. ಪ್ರಸಕ್ತ ಸಾಲಿನ ಇಳುವರಿ: ಸುಮಾರು 10 ಲಕ್ಷ ಮೆಟ್ರಿಕ್ ಟನ್ ಮಾವು. ಪ್ರಮುಖ ಜಿಲ್ಲೆಗಳು: ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮಾಂತರ, ಧಾರವಾಡ, ತುಮಕೂರು ಮತ್ತು ಹಾವೇರಿ.
ಕೃಷಿ ವೆಚ್ಚಕ್ಕಿಂತಲೂ ಕಡಿಮೆ ಬೆಲೆ: ರೈತರು ಕಂಗಾಲು
ಆರ್ಥಿಕ ಲೆಕ್ಕಾಚಾರ: ಕರ್ನಾಟಕ ಕೃಷಿ ಬೆಲೆ ಆಯೋಗದ ಅಂದಾಜಿನ ಪ್ರಕಾರ, ಒಂದು ಕ್ವಿಂಟಲ್ ಮಾವು ಬೆಳೆಯಲು ತಗಲುವ ಸರಾಸರಿ ವೆಚ್ಚ (C-3) 3,951 ಆಗಿದೆ. ಆದರೆ, ಪ್ರಸ್ತುತ ಮಾರುಕಟ್ಟೆಯಲ್ಲಿ ಸಿಗುತ್ತಿರುವ ಬೆಲೆ ಇದಕ್ಕಿಂತ ಗಣನೀಯವಾಗಿ ಕುಸಿದಿದೆ.
ಹೆಚ್ಚುತ್ತಿರುವ ನೀರಾವರಿ, ಕೀಟನಾಶಕ, ಕಾರ್ಮಿಕರ ಕೂಲಿ ಹಾಗೂ ಕೊಯ್ಲು ವೆಚ್ಚಗಳ ಹೊರತಾಗಿಯೂ, ಮಾರುಕಟ್ಟೆಗೆ ಅತಿಯಾದ ಪೂರೈಕೆ ಹಾಗೂ ಪ್ರತಿಕೂಲ ಹವಾಮಾನದಿಂದಾಗಿ ರೈತರು ತಮ್ಮ ಉತ್ಪನ್ನಗಳನ್ನು ಅನಿವಾರ್ಯವಾಗಿ ನಷ್ಟಕ್ಕೆ ಮಾರಿಕೊಳ್ಳುತ್ತಿದ್ದಾರೆ. ಇದು ಗ್ರಾಮೀಣ ಆರ್ಥಿಕತೆಯ ಮೇಲೆ ಭಾರಿ ಹೊಡೆತ ನೀಡಿದೆ ಎಂದು ಹೆಚ್.ಡಿ. ಕುಮಾರಸ್ವಾಮಿ ಅವರು ಪತ್ರದಲ್ಲಿ ವಿವರಿಸಿದ್ದಾರೆ.
ಕೋಲಾರ ಸೇರಿದಂತೆ ಬಯಲುಸೀಮೆಗೆ ಆಸರೆಯಾಗಲಿ ನೆರವು
ಕೋಲಾರದಂತಹ ತೋಟಗಾರಿಕೆಯನ್ನೇ ನಂಬಿಕೊಂಡಿರುವ ಜಿಲ್ಲೆಗಳಲ್ಲಿ ಮಾವು ಕೃಷಿಯೇ ಗ್ರಾಮೀಣ ಜನಜೀವನದ ಪ್ರಮುಖ ಆಧಾರವಾಗಿದೆ. ಹೀಗಾಗಿ, ಕೇಂದ್ರ ಕೃಷಿ ಸಚಿವಾಲಯವು ಕರ್ನಾಟಕ ಸರ್ಕಾರದೊಂದಿಗೆ ಸಮನ್ವಯ ಸಾಧಿಸಿ, ಬೆಳೆಗಾರರ ಹಿತದೃಷ್ಟಿಯಿಂದ ಅಗತ್ಯ ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಆದಷ್ಟು ಬೇಗ ಪ್ರಾರಂಭಿಸಬೇಕು. 'ಪಿಡಿಪಿಎಸ್' ಚೌಕಟ್ಟಿನಡಿಯಲ್ಲಿ ಮಾವು ಬೆಳೆಗಾರರಿಗೆ ಸೂಕ್ತ ಬೆಂಬಲ ನೀಡಿ ಆರ್ಥಿಕ ಸಂಕಷ್ಟದಿಂದ ಪಾರು ಮಾಡಬೇಕು ಎಂದು ಸಚಿವರು ಸಹಾನುಭೂತಿಯ ಪರಿಹಾರಕ್ಕಾಗಿ ಒತ್ತಾಯಿಸಿದ್ದಾರೆ.



