ಚಂದ್ರವಳ್ಳಿ ನ್ಯೂಸ್, ಮಂಡ್ಯ:
ತಾಲ್ಲೂಕಿನ ಹಟ್ನ ಬೇವುಕಲ್ಲು ಗ್ರಾಮದಲ್ಲಿ ಇತ್ತೀಚೆಗೆ ಸಾಲದ ಬಾಧೆಗೆ ಹೆದರಿ ಆತ್ಮಹತ್ಯೆಗೆ ಶರಣಾಗಿದ್ದ ರೈತ ದಂಪತಿಯ ಮನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಭೇಟಿ ನೀಡಿ, ಮೃತರ ಕುಟುಂಬಸ್ಥರಿಗೆ ಹಾಗೂ ಅವರ ವೃದ್ಧ ತಾಯಿಗೆ ಸಾಂತ್ವನ ಹೇಳಿದರು.
ಸಾಲದ ಸಮಸ್ಯೆಯಿಂದಾಗಿ ರೈತ ದಂಪತಿ ಈ ರೀತಿಯ ತೀವ್ರ ನಿರ್ಧಾರ ಕೈಗೊಂಡಿರುವುದು ತಮಗೆ ತೀವ್ರ ನೋವು ತಂದಿದೆ ಎಂದು ಈ ಸಂದರ್ಭದಲ್ಲಿ ಕುಮಾರಸ್ವಾಮಿ ಅವರು ಕಳವಳ ವ್ಯಕ್ತಪಡಿಸಿದರು.
ಅಗಲಿದ ಶ್ರೀ ಪುಟ್ಟಸ್ವಾಮಿ ಹಾಗೂ ಶ್ರೀಮತಿ ನಾಗಮ್ಮ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ ಅವರು, ನಾಡಿನ ರೈತ ಸಮುದಾಯಕ್ಕೆ ವಿಶೇಷ ಮನವಿ ಮಾಡಿದರು.
"ಬದುಕಿನಲ್ಲಿ ಸವಾಲುಗಳು ಎದುರಾಗುವುದು ಸಹಜ. ಕಷ್ಟಗಳು ಬಂದಾಗ ರೈತ ಬಾಂಧವರು ಧೈರ್ಯಗೆಟ್ಟು ದುಡುಕಿನ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು. ಎಂತಹದ್ದೇ ಕಠಿಣ ಪರಿಸ್ಥಿತಿಯನ್ನಾದರೂ ಆತ್ಮವಿಶ್ವಾಸದಿಂದ ಎದುರಿಸಬೇಕು." ಹೆಚ್.ಡಿ. ಕುಮಾರಸ್ವಾಮಿ, ಕೇಂದ್ರ ಸಚಿವರು.
ರೈತರು ಜೀವ ಕಳೆದುಕೊಳ್ಳುವ ಬದಲು ಸವಾಲುಗಳನ್ನು ಮೆಟ್ಟಿ ನಿಲ್ಲುವ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕೆಂದು ಕುಮಾರಸ್ವಾಮಿ ಅವರು ಈ ಸಂದರ್ಭದಲ್ಲಿ ಕಳಕಳಿಯಿಂದ ವಿನಂತಿಸಿಕೊಂಡರು.



