ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅನಧಿಕೃತ ಖಾಸಗಿ ವ್ಯಕ್ತಿಗಳಿಗೆ ಕೋಟ್ಯಾಂತರ ರೂಪಾಯಿ ಮೌಲ್ಯದ ಸರ್ಕಾರಿ ಜಮೀನು ಪರಭಾರೆ ಮಾಡಿರುವ ಗಂಭೀರ ಆರೋಪದ ಹಿನ್ನೆಲೆಯಲ್ಲಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ. ಜಗದೀಶ್ ಸೇರಿದಂತೆ ಮೂವರು ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದೆ.
ಅಧಿಕಾರಿಗಳ ಕಚೇರಿ, ಯಲಹಂಕ ಹಾಗೂ ದೇವನಹಳ್ಳಿಯ ತಹಶೀಲ್ದಾರ್ ಕಚೇರಿಗಳು ಸೇರಿದಂತೆ ಒಟ್ಟು 7 ಕಡೆಗಳಲ್ಲಿ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ಭರ್ಜರಿ ದಾಳಿ ನಡೆಸಿದ್ದಾರೆ.
ಕಾವೇರಿ ಭವನದಲ್ಲಿರುವ ಎಂ.ಕೆ. ಜಗದೀಶ್ ಅವರ ಕಚೇರಿ, ನಿವಾಸಗಳು, ಅಂದಿನ ಯಲಹಂಕ ತಹಶೀಲ್ದಾರ್ ಮಂಜುನಾಥ್ ಅವರ ಮನೆ ಹಾಗೂ ಶಿರಸ್ತೇದಾರ್ ರಜನಿಕಾಂತ್ ರೆಡ್ಡಿ ಅವರ ಮನೆಗಳ ಮೇಲೆ ದಾಳಿ ನಡೆಸಿ ಅಧಿಕಾರಿಗಳು ತೀವ್ರ ಶೋಧ ನಡೆಸಿದ್ದಾರೆ.
ಏನಿದು 16 ಎಕರೆ ಸರ್ಕಾರಿ ಜಮೀನು ಹಗರಣ?:
ಎಂ.ಕೆ. ಜಗದೀಶ್ ಅವರು ಈ ಹಿಂದೆ ಬೆಂಗಳೂರು ನಗರ ಜಿಲ್ಲೆಯ ವಿಶೇಷ ಜಿಲ್ಲಾಧಿಕಾರಿಯಾಗಿದ್ದಾಗ (2020ರಲ್ಲಿ), ಯಲಹಂಕ ಸಮೀಪದ ಹುಣಸಮಾರನಹಳ್ಳಿಯಲ್ಲಿರುವ 16 ಎಕರೆ ಸರ್ಕಾರಿ ಜಮೀನನ್ನು ನಿಯಮಬಾಹಿರವಾಗಿ 9 ಜನ ಖಾಸಗಿ ವ್ಯಕ್ತಿಗಳಿಗೆ ಪರಭಾರೆ ಮಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ವಿಶೇಷವೆಂದರೆ, ಸದರಿ ಜಮೀನು ‘ಸರ್ಕಾರಿ ಜಮೀನು’ ಎಂದು 2011ರಲ್ಲೇ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದ್ದರೂ, ಅದನ್ನು ರಾಜಾರೋಷವಾಗಿ ಖಾಸಗಿಯವರಿಗೆ ವರ್ಗಾಯಿಸಲಾಗಿತ್ತು. ಈ ಕುರಿತು ಲೋಕಾಯುಕ್ತಕ್ಕೆ ಸಲ್ಲಿಕೆಯಾಗಿದ್ದ ದೂರಿನ ಆಧಾರದ ಮೇಲೆ ಈಗ ತನಿಖೆ ತೀವ್ರಗೊಂಡಿದೆ.
17A ಅಡಿ ತನಿಖೆಗೆ ಗ್ರೀನ್ ಸಿಗ್ನಲ್; ಎಫ್ಐಆರ್ ದಾಖಲು:
ಸರ್ಕಾರಿ ಅಧಿಕಾರಿಗಳ ವಿರುದ್ಧದ ಈ ಅಕ್ರಮಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17A ಅಡಿಯಲ್ಲಿ ತನಿಖೆ ನಡೆಸಲು ಕಳೆದ ಮಾರ್ಚ್ ತಿಂಗಳಲ್ಲೇ ಅಧಿಕೃತ ಅನುಮತಿ ದೊರೆತಿತ್ತು. ಅನುಮತಿ ಸಿಕ್ಕ ಬೆನ್ನಲ್ಲೇ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ದಾಳಿ ಸಂಘಟಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಈ ಮೂವರು ಪ್ರಮುಖ ಅಧಿಕಾರಿಗಳ ಪಾತ್ರ ಇರುವುದು ಪತ್ತೆಯಾಗಿದೆ.
ಬೇನಾಮಿ ಫಲಾನುಭವಿಗಳ ಪತ್ತೆಗೆ ಬಲೆ: ಲೋಕಾಯುಕ್ತ ಎಸ್ಪಿ
ದಾಳಿಯ ವೇಳೆ ಜಮೀನು ಮಂಜೂರಾತಿಗೆ ಸಂಬಂಧಿಸಿದ ಹಲವು ಪ್ರಮುಖ ಮತ್ತು ಸಾಕ್ಷ್ಯರೂಪದ ದಾಖಲೆಗಳನ್ನು ಲೋಕಾಯುಕ್ತ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
"ಜಮೀನು ಪಡೆದ ಒಂಬತ್ತು ಫಲಾನುಭವಿಗಳು ನಿಜವಾಗಿಯೂ ಅಸ್ತಿತ್ವದಲ್ಲಿದ್ದಾರೆಯೇ ಅಥವಾ ಅವರು ಕೇವಲ ಬೇನಾಮಿ ವ್ಯಕ್ತಿಗಳೇ ಎಂಬುದರ ತನಿಖೆ ನಡೆಯುತ್ತಿದೆ.
ಸದ್ಯ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲಾ 9 ಜನ ಖಾಸಗಿ ವ್ಯಕ್ತಿಗಳನ್ನು ಪತ್ತೆ ಹಚ್ಚಲಾಗಿದೆ. ವಶಪಡಿಸಿಕೊಂಡ ದಾಖಲೆಗಳನ್ನು ಸಂಪೂರ್ಣವಾಗಿ ಪರಿಶೀಲಿಸಿದ ಬಳಿಕ ಫಲಾನುಭವಿಗಳಿಗೆ ಹಾಗೂ ಸಂಬಂಧಪಟ್ಟ ಸರ್ಕಾರಿ ಅಧಿಕಾರಿಗಳಿಗೆ ವಿವರಣೆ ಕೋರಿ ನೋಟಿಸ್ ಜಾರಿ ಮಾಡಲಾಗುವುದು" ಎಂದು ಲೋಕಾಯುಕ್ತ ಎಸ್ಪಿ ಶಿವಪ್ರಕಾಶ್ ದೇವರಾಜು ತಿಳಿಸಿದ್ದಾರೆ.



