ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದ್ದು, ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಶುಕ್ರವಾರ ಅಧಿಕೃತವಾಗಿ ನಾಮಪತ್ರ ಸಲ್ಲಿಸಿದ್ದಾರೆ.
ವಿಧಾನಸೌಧದಲ್ಲಿ ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ಖರ್ಗೆ ಅವರು ತಮ್ಮ ನಾಮಪತ್ರವನ್ನು ಹಸ್ತಾಂತರಿಸಿದರು.
ಅವರೊಂದಿಗೆ ಕಾಂಗ್ರೆಸ್ನ ಇತರೆ ಇಬ್ಬರು ಅಭ್ಯರ್ಥಿಗಳಾದ ಎಐಸಿಸಿ ಮಾಧ್ಯಮ ಘಟಕದ ಅಧ್ಯಕ್ಷ ಪವನ್ಖೇರಾ ಹಾಗೂ ಎಐಸಿಸಿ ಕಾರ್ಯದರ್ಶಿ ಮನ್ಸೂರ್ಆಲಿ ಖಾನ್ಕೂಡ ನಾಮಪತ್ರ ಸಲ್ಲಿಸಿದರು.
ಕೈ ನಾಯಕರ ದಂಡು ಭಾಗಿ:
ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಕಾಂಗ್ರೆಸ್ನ ಪ್ರಮುಖ ನಾಯಕರ ದಂಡೇ ಉಪಸ್ಥಿತರಿತ್ತು. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೇವಾಲ, ಕೆ.ಸಿ. ವೇಣುಗೋಪಾಲ್ ಹಾಗೂ ರಾಜ್ಯ ಸರ್ಕಾರದ ಹಲವು ಪ್ರಮುಖ ಸಚಿವರು ಹಾಜರಿದ್ದು ಅಭ್ಯರ್ಥಿಗಳಿಗೆ ಬೆಂಬಲ ಸೂಚಿಸಿದರು.
ಜೂನ್ 25ಕ್ಕೆ ನಾಲ್ವರ ಅವಧಿ ಮುಕ್ತಾಯ:
ಪ್ರಸ್ತುತ ಕರ್ನಾಟಕವನ್ನು ಪ್ರತಿನಿಧಿಸುತ್ತಿರುವ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಒಟ್ಟು ನಾಲ್ಕು ಸಂಸದರ ಅವಧಿ ಜೂನ್ 25 ರಂದು ಕೊನೆಗೊಳ್ಳಲಿದೆ. ಮಲ್ಲಿಕಾರ್ಜುನ ಖರ್ಗೆ (ಕಾಂಗ್ರೆಸ್), ಎಚ್.ಡಿ. ದೇವೇಗೌಡ (ಜೆಡಿಎಸ್ ವರಿಷ್ಠರು), ನಾರಾಯಣ ಕೊರಗಪ್ಪ (ಬಿಜೆಪಿ), ಈರಣ್ಣ ಕಡಾಡಿ (ಬಿಜೆಪಿ).
ದೇಶಾದ್ಯಂತ ಒಟ್ಟು 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಇದರಲ್ಲಿ ಕರ್ನಾಟಕದ ಈ 4 ಸ್ಥಾನಗಳೂ ಸೇರಿವೆ. ಶಾಸಕರ ಸಂಖ್ಯಾ ಬಲದ ಆಧಾರದ ಮೇಲೆ ಪ್ರಸ್ತುತ ಕಣದಲ್ಲಿ ಕಾಂಗ್ರೆಸ್ 3 ಸ್ಥಾನಗಳನ್ನು ಹಾಗೂ ವಿರೋಧ ಪಕ್ಷವಾದ ಬಿಜೆಪಿ 1 ಸ್ಥಾನವನ್ನು ಸುಲಭವಾಗಿ ಗೆಲ್ಲುವ ಅವಕಾಶ ಹೊಂದಿದೆ.
ಚುನಾವಣಾ ವೇಳಾಪಟ್ಟಿ ಹೀಗಿದೆ: ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ ಜೂನ್ 8, ನಾಮಪತ್ರಗಳ ಪರಿಶೀಲನೆ ಜೂನ್ 9, ನಾಮಪತ್ರ ಹಿಂಪಡೆಯಲು ಕೊನೆ ದಿನಜೂನ್ 10, ಮತದಾನ ಹಾಗೂ ಮತ ಎಣಿಕೆ ಜೂನ್ 18 (ಸಂಜೆ 5 ಗಂಟೆಗೆ ಎಣಿಕೆ ಆರಂಭ).



