ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ.ಎಸ್. ಮಂಜುನಾಥ್ ಅವರು ಮಂಗಳವಾರ ಯೋಜನಾ ಸಚಿವರು ಹಾಗೂ ಹಿರಿಯೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಡಿ. ಸುಧಾಕರ್ ಅವರು ಚಿಕಿತ್ಸೆ ಪಡೆಯುತ್ತಿರುವ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ, ಸಚಿವರ ಆರೋಗ್ಯದ ಕುರಿತು ಮಾಹಿತಿ ಪಡೆದರು.
ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಸಚಿವರನ್ನು ಭೇಟಿ ಮಾಡಿದ ಮಂಜುನಾಥ್ ಅವರು, ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಆಶಿಸಿದರು.
ಇದೇ ಸಂದರ್ಭದಲ್ಲಿ ಸಚಿವರ ಕುಟುಂಬ ಸದಸ್ಯರೊಂದಿಗೆ ಮಾತುಕತೆ ನಡೆಸಿದ ಅವರು, ಧೈರ್ಯ ತುಂಬುವ ಕೆಲಸ ಮಾಡಿದರು.
ಧೈರ್ಯ ತುಂಬಿದ ಅಧ್ಯಕ್ಷರು:
"ಸಚಿವ ಡಿ. ಸುಧಾಕರ್ ಅವರು ಜನಾನುರಾಗಿ ನಾಯಕರು. ಅವರು ಆದಷ್ಟು ಬೇಗ ಗುಣಮುಖರಾಗಿ ಮತ್ತೆ ಎಂದಿನಂತೆ ಜನಸೇವೆಯಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಅವರ ಅಭಿಮಾನಿಗಳು ಮತ್ತು ಕಾರ್ಯಕರ್ತರು ಆತಂಕಪಡುವ ಅಗತ್ಯವಿಲ್ಲ," ಎಂದು ಜಿ.ಎಸ್. ಮಂಜುನಾಥ್ ಈ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.
ಸಚಿವರ ಭೇಟಿಯ ಸಮಯದಲ್ಲಿ ಮಾಜಿ ಸಂಸದ ಬಿ.ಎನ್ ಚಂದ್ರಪ್ಪ, ಸುಧಾಕರ್ ಅವರ ಕುಟುಂಬ ಸದಸ್ಯರು ಸೇರಿದಂತೆ ಸ್ಥಳೀಯ ನಾಯಕರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.


