ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ಅವರ ಅಕಾಲಿಕ ನಿಧನದಿಂದ ರಾಜ್ಯ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟವುಂಟಾಗಿದೆ. ಸದಾಶಿವನಗರದ ನಿವಾಸದಲ್ಲಿ ಮೃತರ ಅಂತಿಮ ದರ್ಶನ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸುಧಾಕರ್ ಅವರ ಅಗಲಿಕೆಗೆ ತೀವ್ರ ಸಂತಾಪ ಸೂಚಿಸಿದ್ದಾರೆ.
ಸಚಿವರ ಗೌರವಾರ್ಥವಾಗಿ ರಾಜ್ಯಾದ್ಯಂತ ಮೂರು ದಿನಗಳ ಕಾಲ ಸರ್ಕಾರಿ ಶೋಕಾಚರಣೆ ಘೋಷಿಸಲಾಗಿದ್ದು, ಅವರ ತವರು ಜಿಲ್ಲೆ ಚಿತ್ರದುರ್ಗದಲ್ಲಿ ಸೋಮವಾರ (ಮೇ 11) ರಜೆ ಸಾರಲಾಗಿದೆ.
ಬಡವರ ಬಂಧು ‘ಸುಧಾಕರ್’ : ರಾಜಕೀಯ ಪಯಣ
ಮೂಲತಃ ಚಳ್ಳಕೆರೆಯವರಾದ ಡಿ. ಸುಧಾಕರ್ ಅವರು ಹಿರಿಯೂರು ಕ್ಷೇತ್ರವನ್ನು ತಮ್ಮ ರಾಜಕೀಯ ಕರ್ಮಭೂಮಿಯನ್ನಾಗಿ ಮಾಡಿಕೊಂಡಿದ್ದರು. ಅವರ ಸಾಧನೆಯ ಹಾದಿ ಹೀಗಿದೆ:
ಶಾಸಕರಾಗಿ: 2008ರಿಂದ ಹಿರಿಯೂರು ಕ್ಷೇತ್ರದ ಶಾಸಕರಾಗಿ ಸುಧಾಕರ್ ಅವರು ಸಕ್ರಿಯರಾಗಿದ್ದರು. ಸಚಿವರಾಗಿ: ಪ್ರಸ್ತುತ ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿದ್ದ ಅವರು, ಈ ಹಿಂದೆ ಸಮಾಜ ಕಲ್ಯಾಣ ಸಚಿವರಾಗಿಯೂ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದರು.
ಸಹಕಾರ ಕ್ಷೇತ್ರ: ಸಹಕಾರ ಕ್ಷೇತ್ರದಲ್ಲಿ ಅಪಾರ ಕೊಡುಗೆ ನೀಡಿದ್ದ ಅವರು, ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಹಾಗೂ ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.
ಜನಪ್ರಿಯತೆ: ಚಳ್ಳಕೆರೆ ಎಸ್.ಟಿ ಮೀಸಲು ಕ್ಷೇತ್ರವಾಗಿದ್ದ ಕಾರಣ ಹಿರಿಯೂರಿನಿಂದ ಸ್ಪರ್ಧಿಸಿ ಗೆದ್ದಿದ್ದ ಅವರು, ರೈತರು ಮತ್ತು ಬಡವರ ಪರವಾದ ಕೆಲಸಗಳಿಂದ 'ಬಡವರ ಬಂಧು' ಎಂದೇ ಖ್ಯಾತಿ ಪಡೆದಿದ್ದರು.
"ಸುಧಾಕರ್ ಅವರು ಅತ್ಯಂತ ಜನಪ್ರಿಯ ವ್ಯಕ್ತಿತ್ವದವರು. ಅವರ ಚಿಕ್ಕಪ್ಪ ಜಯಣ್ಣ ಅವರೂ ಶಾಸಕರಾಗಿದ್ದರು. ಸುಧಾಕರ್ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ನೀಡಲಿ."
ಸಿದ್ದರಾಮಯ್ಯ, ಮುಖ್ಯಮಂತ್ರಿಗಳು.
ಅಂತ್ಯಕ್ರಿಯೆಯ ವಿವರ-
ಸುಧಾಕರ್ ಅವರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಅವರ ಅಂತಿಮ ವಿಧಿವಿಧಾನಗಳ ಮಾಹಿತಿ ಹೀಗಿದೆ.
ದರ್ಶನ: ಸಚಿವರ ಪಾರ್ಥಿವ ಶರೀರವನ್ನು ಅವರ ಮತಕ್ಷೇತ್ರವಾದ ಹಿರಿಯೂರಿನಲ್ಲಿ ಸಾರ್ವಜನಿಕರ ದರ್ಶನಕ್ಕಾಗಿ ಇರಿಸಲಾಗಿತ್ತು.
ಅಂತ್ಯಕ್ರಿಯೆ: ಮೇ-11 ರಂದು ಸೋಮವಾರ ಸಂಜೆ 4:00 ಗಂಟೆಗೆ ಚಳ್ಳಕೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಲಿದ್ದಾರೆ. ಸಚಿವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ನಾಡಿನ ಗಣ್ಯರು ಹಾಗೂ ಅಭಿಮಾನಿಗಳು ಪ್ರಾರ್ಥಿಸಿದ್ದಾರೆ.
ಕಂದಾಯ ಸಚಿವ ಸಂತಾಪ-
ನಾಡಿನ ಹಿರಿಯ ಜನಸ್ನೇಹಿ ನಾಯಕರು ಹಾಗೂ ಸಚಿವರಾದ ಡಿ. ಸುಧಾಕರ್ ಅವರ ನಿಧನದ ವಾರ್ತೆ ಕೇಳಿ ತೀವ್ರ ಆಘಾತವಾಯಿತು. ಜನಪರ ಕಾರ್ಯಗಳ ಮೂಲಕ ಸದಾ ಜನರ ನೆನಪಿನಲ್ಲಿ ಉಳಿಯುವ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬವರ್ಗ ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಪ್ರಾರ್ಥಿಸಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.


