ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿ ಬೆಂಬಲಿತ ಅಭ್ಯರ್ಥಿಗಳು 12 ಸ್ಥಾನಗಳ ಪೈಕಿ 9 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಆಡಳಿತದ ಚುಕ್ಕಾಣಿ ಹಿಡಿದಿದ್ದಾರೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು 3 ಸ್ಥಾನಗಳಲ್ಲಿ ಜಯಗಳಿಸಿದ್ದಾರೆ.
ತೂಬಗೆರೆ ತೇರಿನಬೀದಿಯ ಸಮುದಾಯ ಭವನದಲ್ಲಿ ಭಾನುವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಮತದಾನ ನಡೆಯಿತು. ಆರಂಭದಿಂದಲೇ ಮತದಾರರು ಉತ್ಸಾಹದಿಂದ ಆಗಮಿಸಿ ಮತ ಚಲಾಯಿಸಿದರು. ಮಹಿಳೆಯರು, ಹಿರಿಯ ನಾಗರಿಕರು ಹಾಗೂ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದು, ಚುನಾವಣೆ ಶಾಂತಿಯುತ ಹಾಗೂ ವ್ಯವಸ್ಥಿತವಾಗಿ ನಡೆಯಿತು.
ಚುನಾವಣೆ ನಡೆದು ಫಲಿತಾಂಶ ಪ್ರಕಟವಾಗಿದ್ದು ಬಿಜೆಪಿ ಜೆಡಿಎಸ್ ಮೈತ್ರಿ ಕೂಟದ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಪರಸ್ಪರ ಅಭಿನಂದನೆ ಸಲ್ಲಿಸುವ ಮೂಲಕ ವಿಜಯೋತ್ಸವ ಆಚರಿಸಿದರು.
ಬಿಜೆಪಿ ಮುಖಂಡ ಪ್ರತಾಪ್ ಮಾತನಾಡಿ, "ಎನ್ಡಿಎ ಮೈತ್ರಿಕೂಟದ ಸಂಘಟಿತ ಕಾರ್ಯವೈಖರಿ, ಕಾರ್ಯಕರ್ತರ ಪರಿಶ್ರಮ ಹಾಗೂ ರೈತರು ಮತ್ತು ಷೇರುದಾರರು ವ್ಯಕ್ತಪಡಿಸಿದ ವಿಶ್ವಾಸಕ್ಕೆ ಸಂದ ಜಯ ಇದಾಗಿದೆ. ಸಂಘದ ಅಭಿವೃದ್ಧಿ, ಪಾರದರ್ಶಕ ಆಡಳಿತ ಹಾಗೂ ರೈತರ ಹಿತಾಸಕ್ತಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ನೂತನ ಆಡಳಿತ ಮಂಡಳಿ ಕಾರ್ಯನಿರ್ವಹಿಸಲಿದೆ," ಎಂದು ಹೇಳಿದರು.
ಜೆಡಿಎಸ್ ಮುಖಂಡ ಹಾಡೋನಹಳ್ಳಿ ನಾಗರಾಜು ಮಾತನಾಡಿ, "ಸಹಕಾರ ಕ್ಷೇತ್ರದ ಅಭಿವೃದ್ಧಿ ಹಾಗೂ ರೈತರ ಕಲ್ಯಾಣಕ್ಕೆ ಮತದಾರರು ಬೆಂಬಲ ವ್ಯಕ್ತಪಡಿಸಿದ್ದಾರೆ. ಷೇರುದಾರರ ನಿರೀಕ್ಷೆಗೆ ತಕ್ಕಂತೆ ಸಂಘವನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಲಾಗುವುದು," ಎಂದರು.
ಚುನಾವಣೆ ಶಾಂತಿಯುತ ಹಾಗೂ ಪಾರದರ್ಶಕವಾಗಿ ನಡೆಯಲು ಸಹಕರಿಸಿದ ಮತದಾರರು, ಚುನಾವಣಾ ಸಿಬ್ಬಂದಿ ಮತ್ತು ಪೊಲೀಸ್ ಇಲಾಖೆಗೆ ಸಂಘದ ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಟಿಎಪಿಸಿಎಂಎಸ್ ಸದಸ್ಯ ಪುರೋಷೋತ್ತಮ್, ಬಿಜೆಪಿ ಹೋಬಳಿ ಅಧ್ಯಕ್ಷ ಕೃಷ್ಣಪ್ಪ, ಬಿಜೆಪಿ ಮುಖಂಡರಾದ ಧನುಂಜಯ ಮತ್ತು ವಾಸು, ಜೆಡಿಎಸ್ ಮುಖಂಡರಾದ ಕನಕದಾಸ, ಉದಯ ಆರಾಧ್ಯ, ಕೃಷ್ಣಚಾರಿ ಸೇರಿದಂತೆ ಮೈತ್ರಿಕೂಟದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ನೂತನವಾಗಿ ಆಯ್ಕೆಯಾದ ನಿರ್ದೇಶಕರಿಗೆ ಅಭಿನಂದನೆ ಸಲ್ಲಿಸಿದರು.
ನೂತನವಾಗಿ ಆಯ್ಕೆಯಾದ ನಿರ್ದೇಶಕರು: ಸಾಮಾನ್ಯ ಕ್ಷೇತ್ರ.. ಅಶ್ವತ್ಥನಾರಾಯಣ್ ಎನ್., ರಾಜಕುಮಾರ್, ಅರವಿಂದ್ ಎನ್., ಸತ್ಯನಾರಾಯಣಸ್ವಾಮಿ ಹಾಗೂ ಸತೀಶ್ ಎಂ.
ಪರಿಶಿಷ್ಟ ಜಾತಿ (ಎಸ್ಸಿ) ಮೀಸಲು ಕ್ಷೇತ್ರ... ಗಂಗರಾಜು ಎನ್.ಸಿ.
ಪರಿಶಿಷ್ಟ ಪಂಗಡ (ಎಸ್ಟಿ) ಮೀಸಲು ಕ್ಷೇತ್ರ... ನಾರಾಯಣಪ್ಪ.
ಹಿಂದುಳಿದ ವರ್ಗ (ಪ್ರವರ್ಗ–ಅ)...ಟಿ.ಜಿ. ವಾಸುದೇವ.
ಹಿಂದುಳಿದ ವರ್ಗ (ಪ್ರವರ್ಗ–ಬ) ಕ್ಷೇತ್ರ.. ಸುಬ್ರಮಣಿ.
ಮಹಿಳಾ ಮೀಸಲು ಕ್ಷೇತ್ರ.. ವಿನೋದಮ್ಮ ಹಾಗೂ ಆನಂದಮ್ಮ. ಸಾಲಗಾರರಲ್ಲದ ಕ್ಷೇತ್ರ... ಟಿ.ಆರ್. ವೆಂಕಟಲಕ್ಷ್ಮಿ. ರವರು ಆಯ್ಕೆಯಾಗಿದ್ದಾರೆ. ನೂತನವಾಗಿ ಆಯ್ಕೆಯಾದ ನಿರ್ದೇಶಕರನ್ನು ತಾಲ್ಲೂಕಿನ ಹಲವಾರು ಗಣ್ಯರು ಹಾಗೂ ವಿವಿಧ ಪಕ್ಷಗಳ ಮುಖಂಡರು ಅಭಿನಂದಿಸಿದ್ದಾರೆ.



